ಸರ್ಕಾರಿ ನೌಕರರ ವರ್ಗಾವಣೆಗೆ ಚುನಾವಣಾ ಆಯೋಗದ ಅನುಮತಿ ಕಡ್ಡಾಯ
ಕರ್ನಾಟಕದಲ್ಲಿ ಚುನಾವಣಾ ಕರ್ತವ್ಯ ನಿರತರಾದ ಅಧಿಕಾರಿ/ ಸಿಬ್ಬಂದಿಗಳನ್ನು ಮುಖ್ಯ ಚುನಾವಣಾಧಿಕಾರಿಗಳ ಸಹಮತಿ ಪಡೆಯದೇ ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿರುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನು ಬರೆಯಲಾಗಿದೆ.
ಬೆಂಗಳೂರು, ಮಾರ್ಚ್ 17; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಕೇಂದ್ರ ಚುನಾವಣಾ ಆಯೋಗ ಈಗಾಗಲೇ ರಾಜ್ಯಕ್ಕೆ ಆಗಮಿಸಿ ಚುನಾವಣಾ ಸಿದ್ಧತೆ ಪರಿಶೀಲನೆ ನಡೆಸಿ, ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಿ ಹೋಗಿದೆ. ಏಪ್ರಿಲ್ ತಿಂಗಳಿನಲ್ಲಿ ಚುನಾವಣೆ ಘೋಷಣೆಯಾಗಿ, ಮೇ ತಿಂಗಳಿನಲ್ಲಿ ಮತದಾನ, ಮತ ಎಣಿಕೆ ನಡೆಯಲಿದೆ. ಮೇ 24ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ಚುನಾವಣಾ ಕಾರ್ಯದ ಹಿನ್ನಲೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ತಡೆ ಹಾಕಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನು ಬರೆಯಲಾಗಿದೆ. 2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣಿಯು ಸನ್ನಿಹಿತವಾಗುತ್ತಿದ್ದು, ಭಾರತ ಚುನಾವಣಾ ಆಯೋಗವು ಸದ್ಯದಲ್ಲಿಯೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಿದ್ದು, ಚುನಾವಣಾ ಕರ್ತವ್ಯ ನಿರತರಾದ ಅಧಿಕಾರಿ/ ಸಿಬ್ಬಂದಿಗಳನ್ನು ಮುಖ್ಯ ಚುನಾವಣಾಧಿಕಾರಿಗಳ ಸಹಮತಿ ಪಡೆಯದೇ ವರ್ಗಾವಣೆ ಮಾಡುತ್ತಿರುವುದು ಕಂಡು ಬಂದಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ದಿನಾಂಕ 8/3/2023ರ ಅರೆ ಸರ್ಕಾರಿ ಪತ್ರದ ಮೂಲಕ ಎಲ್ಲಾ ವರ್ಗಾವಣೆ ಪ್ರಕ್ರಿಯೆಗಳಗೆ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯಲು ತಿಳಿಸಲಾಗಿದೆ. ಆದರೆ ಹಲವು ಇಲಾಖೆಗಳು ಸದರಿ ನಿರ್ದೇಶನವನ್ನು ಪರಿಗಣಿಸದೇ ವರ್ಗಾವಣೆ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಲ್ಲಾ ರೀತಿಯ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆದು, ನಂತರ ವರ್ಗಾವಣೆ ಆದೇಶಗಳನ್ನು ಹೊರಡಿಸುವಂತೆ ಎಲ್ಲಾ ಸಕ್ಷಮ ಪ್ರಾಧಿಕಾರಗಳಿಗೆ ಇಂದೇ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಸೂಚನೆ ನೀಡಲಾಗಿದೆ.
ಇನ್ನು ಮುಂದೆ ಕಛೇರಿ ಸಹಮತಿ ಪಡೆಯದೇ ವರ್ಗಾವಣೆ ಪ್ರಕ್ರಿಯೆ ಕೈಗೊಂಡಲ್ಲಿ ಅಂತಹ ಅಂಶಗಳನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಚುನಾವಣಾ ಆಯೋಗದ ಪತ್ರದ ಬಳಿಕ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಸೇವೆಗಳು-1) ಜೇಮ್ಸ್ ತರಕನ್ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಬರೆದು ವರ್ಗಾವಣೆ ಬಗ್ಗೆ ಟಿಪ್ಪಣಿ ನೀಡಿದ್ದಾರೆ.

ಈ ಟಿಪ್ಪಣಿಯು 2023ರ ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ವರ್ಗಾವಣೆಗಳ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು) ಬೆಂಗಳೂರು ಕಛೇರಿಯಿಂದ ಸ್ವೀಕೃತವಾದ ಪತ್ರವನ್ನು ಉಲ್ಲೇಖಿಸಿ ಈ ಟಿಪ್ಪಣಿಯನ್ನು ಹೊರಡಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿ (ಸಿಆಸುಇ (ಚುನಾವಣಿಗಳು), ಬೆಂಗಳೂರು ಅವರು ಕೋರಿರುವಂತೆ, ಎಲ್ಲಾ ರೀತಿಯ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಮುಖ್ಯ ಚುನಾವಣಾಧಿಕಾರಿಯವರ ಸಹಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.
ವರ್ಗಾವಣೆ ಆದೇಶಗಳನ್ನು ಹೊರಡಿಸುವ ಮುನ್ನ ಎಲ್ಲಾ ಸಕ್ಷಮ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದು, ಇನ್ನುಮುಂದೆ ಸದರಿ ಸಿಆಸುಇ (ಚುನಾವಣೆಗಳು) ಕಛೇರಿಯಿಂದ ಸಹಮತಿ ಪಡೆಯದೇ ವರ್ಗಾವಣೆ ಪ್ರಕ್ರಿಯೆ ಕೈಗೊಂಡಲ್ಲಿ ಅಂತಹ ಅಂಶಗಳನ್ನು ಭಾರತ ಚುನಾವಣಾ ಆಯೋಗದ ಗಮನಕ್ಕೆ ತರಲು ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಲಾಗಿರುತ್ತದೆ. ಅದರಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಈ ಮೂಲಕ ಕೋರಲಾಗಿದೆ ಎಂದು ಟಿಪ್ಪಣಿಯಲ್ಲಿ ತಿಳಿಸಲಾಗಿದೆ.
ವಿವಿಧ ಇಲಾಖೆಗಳ ಸರ್ಕಾರಿ ನೌಕರರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಅಲ್ಲದೇ ಚುನಾವಣಾ ಕಾರ್ಯದ ತರಬೇತಿಯಲ್ಲಿ ಪಾಲ್ಗೊಳ್ಳುತ್ತಾರೆ. ಆದ್ದರಿಂದ ಅವರನ್ನು ವರ್ಗಾವಣೆ ಮಾಡಿದರೆ ಚುನಾವಣಾ ಕಾರ್ಯಗಳಿಗೆ ತೊಂದರೆ ಆಗುತ್ತದೆ. ಈ ಹಿನ್ನಲೆಯಲ್ಲಿ ಅಧಿಕಾರಿ/ ಸಿಬ್ಬಂದಿಗಳ ವರ್ಗಾವಣೆಗೆ ಮುನ್ನ ಚುನಾವಣಾ ಆಯೋಗದ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications