ಬಗೆಹರಿಯದ ಬಿಕ್ಕಟ್ಟು; ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ
ಬೆಂಗಳೂರು, ಡಿಸೆಂಬರ್ 13: ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮುಂದುವರೆದಿದೆ. ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಹ ಬಸ್ ಸಂಚಾರ ಸ್ಥಗಿತವಾಗಿದ್ದು, ಜನರ ಪರದಾಟ ಮುಂದುವರೆದಿದೆ.
ಸರ್ಕಾರಿ ಬಸ್ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಬೆಳಗ್ಗೆ 10ಗಂಟೆಗೆ ಸಭೆ ಕರೆದಿದ್ದು, ಸಮಸ್ಯೆ ಬಗೆಹರಿಯಲಿದೆಯೇ? ಕಾದು ನೋಡಬೇಕು.
ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿಬೇಕು ಎಂದು ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ನೌಕರರು ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಸರ್ಕಾರಿ ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗೆ ಕೆಲವು ವಾಯು ವಜ್ರ ಬಸ್ಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸಿವೆ. ಆದರೆ, ಬೇರೆ ಯಾವ ಬಿಎಂಟಿಸಿ ಬಸ್ಗಳು ಸಹ ರಸ್ತೆಗೆ ಇಳಿದಿಲ್ಲ.

ಮಾಹಿತಿ ಪಡೆದ ಯಡಿಯೂರಪ್ಪ
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಶನಿವಾರ ರಾತ್ರಿ ಸಚಿವರಿಂದ ಮಾಹಿತಿ ಪಡೆದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು. ಭಾನುವಾರ ಬೆಳಗ್ಗೆ ನೌಕರರ ಜೊತೆ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.

10 ಗಂಟೆಗೆ ಸಚಿವರಿಂದ ಸಭೆ
ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ಸಚಿವ ಲಕ್ಷ್ಮಣ ಸವದಿ, "ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಜೊತೆ ಭಾನುವಾರ ಬೆಳಗ್ಗೆ 10 ಗಂಟೆಗೆ ಸಭೆ ನಡೆಸಲಾಗುತ್ತದೆ. 4 ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಸಭೆಗೆ ಬರಲು ಒಪ್ಪಿದ್ದಾರೆ. ಸಭೆಯಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ" ಎಂದರು.

ಆರ್ಥಿಕ ಇತಿಮಿತಿ ನೋಡಬೇಕು
"ವಿಕಾಸಸೌಧದಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ನೌಕರರು ಸಭೆಯಲ್ಲಿ ಇಡುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುತ್ತದೆ. ಆರ್ಥಿಕ ಇತಿಮಿತಿ ನೋಡಿಕೊಂಡು ಅವರು ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ" ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

ಖಾಸಗಿ ವಾಹನಗಳ ವ್ಯವಸ್ಥೆ
ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಭಾನುವಾರದಿಂದ ಖಾಸಗಿ ವಾಹನಗಳ ವ್ಯವಸ್ಥೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ಬಸ್ ದರದಲ್ಲಿಯೇ ಖಾಸಗಿ ವಾಹನಗಳಲ್ಲಿ ಜನರು ಸಂಚಾರ ನಡೆಸಬಹುದಾಗಿದೆ.











Click it and Unblock the Notifications