ಸಾರಿಗೆ ನೌಕರರ ಮುಷ್ಕರ ಯಾರು, ಏನು ಹೇಳಿದರು?
ಬೆಂಗಳೂರು, ಜುಲೈ 25 : ವೇತನ ಪರಿಷ್ಕರಣೆ ಸೇರಿದಂತೆ 42 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಂಸ್ಥೆಗಳ ನೌಕರರ ಮನವೊಲಿಸಲು ಸರ್ಕಾರ ವಿಫಲವಾಗಿದೆ. ಮಂಗಳವಾರವೂ ನೌಕರರ ಮುಷ್ಕರ ಮುಂದುವರೆಯುವ ಸಾಧ್ಯತೆ ಇದೆ.
ಮುಷ್ಕರ ನಿರತ ನೌಕರರು ಶೇ 35ರಷ್ಟು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಈಗಾಲಗೇ ಶೇ 10ರಷ್ಟು ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಸೋಮವಾರ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಸಭೆ ನಡೆಸಿದಾಗ ಶೇ 12ರಷ್ಟು ಹೆಚ್ಚಳದ ಹೊಸ ಪ್ರಸ್ತಾವನೆ ಮುಂದಿಟ್ಟಿದ್ದಾರೆ.[ದಕ್ಷಿಣ ಕನ್ನಡ, ಉಡುಪಿಯಲ್ಲಿ ಮುಷ್ಕರದ ಬಿಸಿ ಹೇಗಿದೆ?]
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಶೇ.30 ರಿಂದ 35ರಷ್ಟು ವೇತನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ನೌಕರರ ಜೊತೆ ಮಾತುಕತೆಗೆ ಸಿದ್ಧರಿದ್ದೇವೆ. ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಲಿ. ಎಸ್ಮಾ ಜಾರಿ ಮಾಡುವುದಿಲ್ಲ' ಎಂದು ಹೇಳಿದರು.[ಮುಷ್ಕರ ಕೈ ಬಿಡಲು ನೌಕರರಿಗೆ ಸಿದ್ದರಾಮಯ್ಯ ಮನವಿ]
ಈಗಾಗಲೇ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಜುಲೈ 25 ಮತ್ತು 26ರಂದು ರಜೆ ಘೋಷಣೆ ಮಾಡಿದೆ. ಸೋಮವಾರ ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಕಾರಣ ಮಂಗಳವಾರವೂ ಮುಷ್ಕರ ಮುಂದುವರೆಯುವ ಸಾಧ್ಯತೆ ಇದೆ.....['ಶೇ 30 ರಷ್ಟು ವೇತನ ಪರಿಷ್ಕರಣೆ ಸಾಧ್ಯವೇ ಇಲ್ಲ']

'ಎಸ್ಮಾ ಜಾರಿ ಮಾಡುವುದಿಲ್ಲ'
'ಶೇ.30 ರಿಂದ 35ರಷ್ಟು ವೇತನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ನೌಕರರ ಜೊತೆ ಮಾತುಕತೆಗೆ ಸಿದ್ಧರಿದ್ದೇವೆ. ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಲಿ. ಎಸ್ಮಾ ಜಾರಿ ಮಾಡುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

'ಪರ್ಯಾಯ ಮಾರ್ಗ ಸಾಧ್ಯವೇ ಇಲ್ಲ'
'ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರ ಅವರ ಸಮಸ್ಯೆಯನ್ನು ಬಗೆಹರಿಸಬೇಕು ಸಾವಿರಾರು ಬಸ್ಸುಗಳನ್ನು ರಸ್ತೆಗಿಳಿಸಲು ಪರ್ಯಾಯ ಮಾರ್ಗವನ್ನು ಹುಡುಕುವುದು ಅಸಾಧ್ಯ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

'ಜನರು ಪರದಾಡುತ್ತಿದ್ದಾರೆ'
'ಸರ್ಕಾರ ಮತ್ತು ನೌಕರರ ಹಗ್ಗಜಗ್ಗಾಟದಿಂದಾಗಿ ಜನರು ಪರದಾಡುತ್ತಿದ್ದಾರೆ. ಶೇ 30 ರಷ್ಟು ವೇತನ ಹೆಚ್ಚಳ ಮಾಡುವುದು ಸಾಧ್ಯವಿಲ್ಲವೇ?. ನೌಕರರು ತಮ್ಮ ಹಠ ಬಿಡಬೇಕು, ಸರ್ಕಾರವೂ ಅವರ ಬೇಡಿಕೆ ಈಡೇರಿಸಬೇಕು' ಎಂದು ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದರು.

'ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ'
'ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಮೊದಲು ಬಿಡಬೇಕು. ಎಸ್ಮಾ ಜಾರಿಗೊಳಿಸಿ ಮುಷ್ಕರವನ್ನು ತಡೆಯಲು ಸಾಧ್ಯವಿಲ್ಲ. ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಿ. ಜನರಿಗೆ ಆಗುತ್ತಿರುವ ಸಮಸ್ಯೆಯನ್ನು ತಪ್ಪಿಸಲು ಮೊದಲು ಗಮನ ಹರಿಸಲಿ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

'ಸಮಸ್ಯೆ ಪರಿಹಾರಕ್ಕೆ ಸರ್ಕಾರ ಸಿದ್ಧ'
'ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಾಗಿದೆ. ಕೇವಲ ಮುಷ್ಕರ ನಡೆಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ನೌಕರರು ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕು. ಮುಷ್ಕರದಿಂದ ಜನರಿಗೆ, ಶಾಲಾ ಮಕ್ಕಳಿಗೆ ತೊಂದರೆ ಉಂಟಾಗಿದೆ' ಎಂದು ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.












Click it and Unblock the Notifications