ಅಕ್ಟೋಬರ್ 5ರ ಪ್ರತಿಭಟನೆ ಕೈ ಬಿಟ್ಟ ಸಾರಿಗೆ ನೌಕರರು
ಬೆಂಗಳೂರು, ಅಕ್ಟೋಬರ್ 01; ಕಾವೇರಿ ವಿಚಾರದಲ್ಲಿ ಒಂದೇ ವಾರದಲ್ಲಿ ಎರಡು ಬಂದ್ ಎದುರಿಸಿದ್ದ ಜನರಿಗೆ ಸಿಹಿಸುದ್ದಿ. ಅಕ್ಟೋಬರ್ 5ರಂದು ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈ ಬಿಡಲಾಗಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರಾರಸಾ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಅಕ್ಟೋಬರ್ 5ರಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಇದರಿಂದಾಗಿ ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿತ್ತು.

ಆದರೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಪ್ರತಿಭಟನೆಗೆ ಕರೆ ನೀಡಿದ್ದ ಸಾರಿಗೆ ನೌಕರರ ಜೊತೆ ಸಭೆ ನಡೆಸಿದರು. ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರದ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ನೌಕರರ ಸಂಘಟನೆಗಳ ಜೊತೆ ಅನ್ಬುಕುಮಾರ್ ಸಭೆ ನಡೆಸಿದರು. ಅಲ್ಲದೇ ಬೇಡಿಕೆಗಳ ಕುರಿತು ಸಾರಿಗೆ ಸಚಿವರ ಗಮನಕ್ಕೆ ತರಲಾಗುತ್ತದೆ. ಸಾರಿಗೆ ಸಚಿವರ ನೇತೃತ್ವದಲ್ಲಿಯೇ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದ ಹಿನ್ನಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಭರವಸೆ ಕೊಟ್ಟಿದ್ದಾರೆ; ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಕರಾರಸಾ ನಿಗಮಗಳ ನೌಕರರ ಫೆಡರೇಷನ್ ಅಧ್ಯಕ್ಷ ರೇವಪ್ಪ, "ವಿಳಂಬವಿಲ್ಲದೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ. ಈ ವಿಷಯವಾಗಿ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
"ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಎಲ್ಲಾ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಆದ್ದರಿಂದ ಅಕ್ಟೋಬರ್ 5ರಂದು ಕರೆ ನೀಡಿದ್ದ ಪ್ರತಿಭಟನೆ ವಾಪಸ್ ಪಡೆಯಲಾಗಿದೆ" ಎಂದರು.
ಹಿಂದಿನ ಸರ್ಕಾರ ಸಾರಿಗೆ ನೌಕರರಿಗೆ ಕೇವಲ ಭರವಸೆ ನೀಡಿ ಕೈ ತೊಳೆದುಕೊಂಡಿದೆ. ಯಾವುದೇ ಬೇಡಿಕೆ ಈಡೇರಿಸಿಲ್ಲ ಎಂದು ಆರೋಪಿಸಿದ್ದ ಸಾರಿಗೆ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದ್ದರು.
2021ರಲ್ಲಿ ನೌಕರರು ಮುಷ್ಕರ ಮಾಡಿದಾಗ ಸಾವಿರಾರು ನೌಕರರನ್ನು ವಜಾ ಮಾಡಲಾಗಿತ್ತು. ಒಕ್ಕೂಟದ ಜೊತೆ ಸಂಧಾನ ಸಭೆ ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ಕೊಟ್ಟಿತ್ತು. ಬಿಜೆಪಿ ಸರ್ಕಾರದ ನಿರ್ಣಯದಿಂದ ಇಂದಿಗೂ 300ಕ್ಕೂ ಅಧಿಕ ಸಿಬ್ಬಂದಿ ಬೀದಿ ಪಾಲಾಗಿದ್ದಾರೆ. ಅವರಿಗೆ ನ್ಯಾಯ ಕೊಡಿಸಬೇಕು ಎಂದು ನೌಕರರು ಆಗ್ರಹಿಸಿದ್ದರು.
ಸಾರಿಗೆ ನೌಕರರ ಬೇಡಿಕೆಯನ್ನು ಹಾಲಿ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದೇವೆ. 500ಕ್ಕೂ ಹೆಚ್ಚು ಸಿಬ್ಬಂದಿ ಒಟ್ಟಾಗಿ ಪ್ರತಿಭಟನೆ ಮಾಡುತ್ತೇವೆ. ಸರ್ಕಾರ ಸ್ಪಂದಿಸದಿದ್ದರೆ ಮುಷ್ಕರ ನಡೆಸುತ್ತೇವೆ ಎಂದು ನೌಕರರ ಒಕ್ಕೂಟ ಎಚ್ಚರಿಕೆ ನೀಡಿತ್ತು.
ಬೇಡಿಕೆಗಳು
* 2020ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳದ ಬಾಕಿ ಹಣ ನೀಡಬೇಕು.
* 2020ರ ಜನವರಿ 1ರಿಂದ ನಿವೃತ್ತ ನೌಕರರ ವೇತನ ಹೆಚ್ಚಳದ ಫಿಕ್ಸೇಷನ್ ಆಗಬೇಕು.
* ತುಟ್ಟಿ ಭತ್ಯೆ ಬಾಕಿ ಹಣ ನೀಡಬೇಕು
* ಗುತ್ತಿಗೆ ಕಾರ್ಮಿಕರ ನೇಮಕಾತಿ ವಿರೋಧಿಸಬೇಕು
* ಎಲೆಕ್ಟ್ರಿಕ್ ಬಸ್ಗಳನ್ನು ಸಾರಿಗೆ ನಿಗಮಗಳ ನೌಕರರೇ ಓಡಿಸಬೇಕು
* ಕಿರುಕುಳ/ ದೌರ್ಜನ್ಯದ/ ಭ್ರಷ್ಟಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು
* 2021ರ ಮುಷ್ಕರದ ವೇಳೆ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಎಲ್ಲಾ ರೀತಿಯ ಶಿಕ್ಷೆ ಹಿಂಪಡೆಯಬೇಕು
* ಬಿಎಂಟಿಸಿಯಲ್ಲಿ ಡಬಲ್ ಡ್ಯೂಟಿ ಮಾಡಿಸಿ 4 ಗಂಟೆಗಳ ಕಾಲ ಒಟಿ ನೀಡುವುದನ್ನು ನಿಲ್ಲಿಸಿ ಕಾನೂನು ಬದ್ಧವಾಗಿ ಡಬಲ್ ವೇತನ ನೀಡಬೇಕು
* ಕೇಂದ್ರ ಸರ್ಕಾರದ ಯೋಜನೆಯಡಿ ಎಲೆಕ್ಟ್ರಿಕ್ ಬಸ್ಗಳನ್ನು ಖಾಸಗಿಯವರ ಮೂಲಕ ಓಡಿಸುವ ಖಾಸಗೀಕರಣವನ್ನು ವಿರೋಧಿಸಬೇಕು.
* ಆಡಳಿತ ವರ್ಗ ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಿ, ಕಾರ್ಮಿಕ ಸಂಘಗಳ ಜೊತೆ ಮಾತುಕತೆ ನಡೆಸಿ ಬಾಂಧವ್ಯ ರೂಪಿಸಬೇಕು.












Click it and Unblock the Notifications