ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ: ಕೇಂದ್ರ ಸಚಿವರಿಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 31: ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ ಸಂಬಂಧ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಹೇಳಿಕೆಗಳ ಮೂಲಕ ತಿರುಗೇಟು ನೀಡಿದ್ದಾರೆ.
ಸಚಿವರೇ ನರೇಂದ್ರ ಮೋದಿ ನೇತೃತ್ವದ ನಿಮ್ಮ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಕೌಂಟರ್ ನೀಡಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುವಂತೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರದ ಗಮನಸೆಳೆಯಲು ಆನ್ಸರ್ ಮಾಡಿ ಮೋದಿ ಎಂಬ ಅಭಿಯಾನವನ್ನು ಪ್ರಾರಂಭಿಸಿ ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಐದು ಪ್ರಶ್ನೆಗಳನ್ನು ಕೇಳಿದ್ದೆ. ಅವುಗಳಲ್ಲಿ ಎರಡು ಪ್ರಶ್ನೆಗಳಿಗಷ್ಟೇ ಉತ್ತರಿಸಿರುವ ಸಚಿವರು ಉಳಿದಂತೆ ನೀಡಿರುವ ಉತ್ತರಗಳಿಗೂ ನಮ್ಮ ಪ್ರಶ್ನೆಗಳಿಗೂ ಸಂಬಂಧವೇ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಸಂಬಂಧಿಸಿದ ನೀರಾವರಿ ಯೋಜನೆಗಳು ಹೇಗೆ ಬಿಜೆಪಿ ಸರ್ಕಾರದ ತಿರಸ್ಕಾರ, ಅವಗಣನೆಯಿಂದಾಗಿ ಧೂಳು ಹಿಡಿಯುತ್ತಿವೆ ಎನ್ನುವುದನ್ನು ಮತ್ತೊಮ್ಮೆ ವಾಸ್ತವಾಂಶಗಳ ಮೂಲಕ ನಿಮ್ಮ ಮುಂದಿರಿಸುತ್ತಿದ್ದೇನೆ. ತಾವು ವಿಷಯವನ್ನು ಸರಿಯಾಗಿ ಗ್ರಹಿಸಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಲಕ್ಷ್ಯದ ಧೋರಣೆ ಮತ್ತು ಉದ್ದೇಶಪೂರ್ವಕವಾದ ಅನ್ಯಾಯವನ್ನು ಸರಿಪಡಿಸುತ್ತಿರಿ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಕೃಷ್ಣಾ ಮತ್ತು ಕಾವೇರಿ ಎಂಬ ಎರಡು ಜೀವನದಿಗಳು ಕರ್ನಾಟಕದ ಎರಡು ಕಣ್ಣುಗಳು. ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕಾಗಿ ಕರ್ನಾಟಕ ರಾಜ್ಯಕ್ಕೆ 130 ಟಿಎಂಸಿ ನೀರು ಹಂಚಿಕೆಯಾಗಿದೆ. ಈ ಪ್ರಮಾಣದ ನೀರನ್ನು ಬಳಕೆಗೆ ಲಭ್ಯವಾಗಿಸಬೇಕೆಂದರೆ ಆಲಮಟ್ಟಿ ಜಲಾಶಯದ ಎತ್ತರವನ್ನು ಸಮುದ್ರ ಮಟ್ಟದಿಂದ ಪ್ರಸಕ್ತ ಇರುವ 519.60 ಅಡಿಯಿಂದ 524.256 ಅಡಿಗಳಿಗೆ ಏರಿಸಬೇಕಾಗಿದೆ.
ಯೋಜನೆಯ ಮೂರನೇ ಹಂತದ ಅನುಷ್ಠಾನದಿಂದ ಬರಪೀಡಿತ ಉತ್ತರ ಕರ್ನಾಟಕದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ. ವಿಪರ್ಯಾಸವೆಂದರೆ, ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ - 2 ತೀರ್ಪು ಘೋಷಿಸಿ ಒಂದು ದಶಕವೇ ಕಳೆದರೂ ತೀರ್ಪಿನ ಗೆಜೆಟ್ ಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಿಲ್ಲ. ಇದಕ್ಕಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸೂಕ್ತ ಅರ್ಜಿ ದಾಖಲಿಸುವಂತೆ ರಾಜ್ಯ ಸರ್ಕಾರವು ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ ಹೊರತಾಗಿಯೂ ಈ ಕುರಿತು ಕೇಂದ್ರ ಮುಂದಾಗಿಲ್ಲ. ಇದು ಯೋಜನೆಯ ಜಾರಿಗೆ ತೊಡಕಾಗಿ ಪರಿಣಮಿಸಿದೆ.
ಕಳಸಾ ಮತ್ತು ಬಂಡೂರ ಯೋಜನೆ ವಿಚಾರದಲ್ಲಿಯೂ ಕೂಡ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ವಿವಿಧ ಅನುಮತಿಗಳನ್ನು ದೊರಕಿಸಿಕೊಡುವಲ್ಲಿ ಕೇಂದ್ರ ಸರ್ಕಾರ ಸೋತಿದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ದೊರೆಯಬೇಕಾದ ತಿರುವಳಿ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಅನುಮತಿ, 2006ರ ಇಐಎ ಅಧಿಸೂಚನೆಯಿಂದ ವಿನಾಯಿತಿ, ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಕಳಸಾ ಯೋಜನೆಗೆ ಅಗತ್ಯವಾಗಿರುವ ವನ್ಯಜೀವಿ/ಹುಲಿ ಕಾರಿಡಾರ್ ವಿಚಾರವಾಗಿ ದೊರೆಯಬೇಕಾದ ಅನುಮತಿ, ಭೀಮಗಡ ವನ್ಯಜೀವಿ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತಾದ ವಿಚಾರಗಳು ಕೇಂದ್ರ ಸರ್ಕಾರದ ಕಡೆಯಿಂದ ಬಾಕಿ ಉಳಿದಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಮಧ್ಯ ಕರ್ನಾಟಕದ ಪ್ರಮುಖ ಏತ ನೀರಾವರಿ ಯೋಜನೆಯಾಗಿದ್ದು 29.90 ಟಿಎಂಸಿ ನೀರಿನ ಬಳಕೆಯೊಂದಿಗೆ ಸೂಕ್ಷ್ಮ ನೀರಾವರಿ ಯೋಜನೆ ಮೂಲಕ 2,25,515 ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಯೋಜನೆಯನ್ನು 'ರಾಷ್ಟ್ರಿಯ ಯೋಜನೆ' ಎಂದು ಘೋಷಿಸಲು ಅಗತ್ಯವಾದ ಎಲ್ಲ ಸಕ್ಷಮ ಪ್ರಾಧಿಕಾರಿಗಳ ಅನುಮತಿ, ಅನುಮೋದನೆಗಳ ಹೊರತಾಗಿಯೂ ಕೇಂದ್ರ ಸರ್ಕಾರವು ಯೋಜನೆಯನ್ನು 'ರಾಷ್ಟ್ರೀಯ ಯೋಜನೆ' ಎಂದು ಘೋಷಿಸದೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಸದರಿ ಯೋಜನೆಗಾಗಿ 2023-24ರ ಕೇಂದ್ರ ಆಯವ್ಯಯದಲ್ಲಿ ರೂ.5,300 ಕೋಟಿ ಸಹಾಯಧನ ಘೋಷಿಸಿರುವುದರ ಹೊರತಾಗಿಯೂ ಈವರೆಗೆ ಯೋಜನೆಗೆ ಯಾವುದೇ ಸಹಾಯಧನವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ.
ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷದ ಬಗೆಗಿನ ನಮ್ಮ ಪ್ರಶ್ನೆಗೆ ಉತ್ತರಿಸಿರುವ ಶೇಖಾವತ್ ಅವರು ಯೋಜನೆಯ ಪ್ರಸ್ತಾವವನ್ನು ಸಭೆಯ ಅಜೆಂಡಾದಲ್ಲಿ ಸೇರಿಸಲಾಗಿತ್ತು ಎಂದು ಉತ್ತರಿಸಿದ್ದಾರೆ. ಸಭೆಯ ಅಜೆಂಡಾದಲ್ಲಿ ಸೇರಿಸುವುದಷ್ಟೇ ಪ್ರಧಾನ ಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರ ಕೆಲಸವೇ? ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವುದು ಕೂಡಾ ಪ್ರಧಾನಿ ಮತ್ತು ಸಚಿವರ ಕರ್ತವ್ಯ ಅಲ್ಲವೇ? ಈ ಕೆಲಸದಲ್ಲಿ ಇಬ್ಬರೂ ವಿಫಲವಾಗಿದ್ದಾರೆ ಎಂದು ಕನ್ನಡಿಗರಿಗೆ ಅನಿಸಿದರೆ ತಪ್ಪಾದೀತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿನ ಸಂಕಷ್ಟ ಪರಿಸ್ಥಿತಿಯ ನಿವಾರಣೆಗೆ ಮೇಕೆದಾಟು ಯೋಜನೆಯು ದೀರ್ಘಕಾಲೀನ ಶಾಶ್ವತ ಪರಿಹಾರ ಯೋಜನೆಯಾಗಿರುತ್ತದೆ. ಈ ಯೋಜನೆಯನ್ನು CWMA/CWC ಪರಿಗಣಿಸಿ ಅಗತ್ಯ ಅನುಮತಿ ಹಾಗೂ ಸಮ್ಮತಿಗಳನ್ನು ನೀಡುವ ಮೂಲಕ ಬೆಂಗಳೂರು ಮತ್ತು ಸುತ್ತಮುತ್ತಲಿನ ಊರುಗಳ ಕುಡಿಯುವ ನೀರಿನ ಸಮಸ್ಯೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರಿಹರಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದು ಅವರು ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications