Lorry Strike: ಸಿಎಂ ಜೊತೆ ಸಂಧಾನ ಸಭೆ ವಿಫಲ; ಮುಷ್ಕರ ಮುಂದುವರೆಸಲು ನಿರ್ಧಾರ
ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಲಾರಿ ಮಾಲೀಕರು, ಏಜೆಂಟ್ಗಳು ಮುಷ್ಕರ ನಡೆಸುತ್ತಿದ್ದಾರೆ. ಮಂಗಳವಾರ ಸಂಜೆ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ಗಳ ಸಂಘಗಳ ಒಕ್ಕೂಟ (KSLOAA) ದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉನ್ನತ ಮಟ್ಟದ ಸಭೆ ವಿಫಲವಾಗಿದ್ದು, ಮುಷ್ಕರ ಮುಂದುವರೆಸಲು ನಿರ್ಧರಿಸಿದೆ.
ಸೋಮವಾರ ಮಧ್ಯರಾತ್ರಿತಿಂದ ಆರಂಭವಾದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂತೆಗೆದುಕೊಳ್ಳಲು ಸಭೆಯಲ್ಲಿ ಸಂಘವು ನಿರಾಕರಿಸಿದೆ. ರಾಜ್ಯಾದ್ಯಂತ ಸುಮಾರು ಆರು ಲಕ್ಷ ಟ್ರಕ್ಗಳು ಸ್ಥಗಿತಗೊಂಡಿವೆ. ಸರಕು ಸಾಗಣೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಮುಷ್ಕರ ಮುಂದುವರಿದರೆ ಅಗತ್ಯ ವಸ್ತುಗಳ ಪೂರೈಕೆ ಸರಪಳಿಯ ಮೇಲೆ ಪರಿಣಾಮ ಬೀರುವ ಆತಂಕವಿದೆ.

ಡೀಸೆಲ್ ಬೆಲೆ ಏರಿಕೆ, ದುಬಾರಿ ಟೋಲ್ ದರಗಳು ಮತ್ತು ಹಳೆಯ ವಾಹನಗಳಿಗೆ ಫಿಟ್ನೆಸ್ ಪ್ರಮಾಣಪತ್ರ (FC) ಶುಲ್ಕವನ್ನು ವಿರೋಧಿಸಿ ಟ್ರಕ್ ಮಾಲೀಕರ ಸಂಘ ಪ್ರತಿಭಟನೆ ನಡೆಸುತ್ತಿದೆ.
ಸಂಧಾನ ವಿಫಲ ಮುಷ್ಕರ ಮುಂದುವರಿಕೆ
ಮಂಗಳವಾರ ಮಧ್ಯಾಹ್ನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮುಷ್ಕರ ನಡೆಸುತ್ತಿರುವ ಟ್ರಕ್ ಮಾಲೀಕರ ಸಂಘದ ಪ್ರತಿನಿಧಿಗಳ ನಡುವಿನ ಸಭೆ ನಡೆಯಿತು. ಆದರೆ ಸಂಘದ ಸಮಸ್ಯೆಗಳನ್ನು ಪರಿಹರಿಸಲು ರಾಮಲಿಂಗಾ ರೆಡ್ಡಿ ಮೂರು ತಿಂಗಳ ಸಮಯ ಕೇಳಿದ್ದರಿಂದ ಮಾತುಕತೆ ವಿಫಲವಾಯಿತು.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 18 ಆರ್ಟಿಒ ಚೆಕ್ಪೋಸ್ಟ್ಗಳ ಕುರಿತು ವಿವರವಾದ ವರದಿ ಪಡೆದು ಮೂರು ತಿಂಗಳೊಳಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನಿಡಿದೆ. ಆದರೆ ಟೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡಬೇಕು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸಾರಿಗೆ ಸಚಿವರ ಸಭೆಯ ನಂತರ, ಸಂಘದ ಸದಸ್ಯರು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸಭೆಯಲ್ಲಿ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಒಂದು ಗಂಟೆ ಕಾಲ ಸಭೆ ನಡೆದರೂ ಏನೂ ಪ್ರಯೋಜನವಾಗಲಿಲ್ಲ. ಸಿಎಂ ಸಿದ್ದರಾಮಯ್ಯ ಮುಷ್ಕರವನ್ನು ಹಿಂಪಡೆಯುವಂತೆ ಕೇಳಿದರೂ, ಅವರ ಬೇಡಿಕೆಗಳನ್ನು ಈಡೇರಿಸಲು ಒಪ್ಪಲಿಲ್ಲ. ಅಕ್ಕ ಪಕ್ಕದ ರಾಜ್ಯಗಳಿಗಿಂತ ರಾಜ್ಯದಲ್ಲಿ ಡೀಸೆಲ್ ಬೆಲೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೀಕ್ ಸಮಯದಲ್ಲಿ ನಗರದೊಳಗೆ ಟ್ರಕ್ಗಳ ಪ್ರವೇಶದ ಮೇಲಿನ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತದೆ ಮತ್ತು ಇತರ ಬೇಡಿಕೆಗಳನ್ನು ಪರಿಗಣಿಸುತ್ತದೆ ಎಂದು ದ್ದರಾಮಯ್ಯ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಮತ್ತೊಂದು ಸುತ್ತಿನ ಸಭೆ ಕರೆಯಲಾಗುವುದು ಎಂದು ಅವರು ಹೇಳಿದರು.
ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು. ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications