Tungabhadra Dam: ತುಂಗಭದ್ರಾ ಆರ್ಭಟ, ಬಳ್ಳಾರಿಯಲ್ಲಿ ಪ್ರವಾಹ
ಬಳ್ಳಾರಿ, ಜುಲೈ 29: ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದೆ. ಒಳಹರಿವು ಹೆಚ್ಚಿರುವ ಹಿನ್ನಲೆಯಲ್ಲಿ ನದಿಗೆ ನೀರು ಹರಿಸಲಾಗುತ್ತಿದೆ. ಆದ್ದರಿಂದ ಬಳ್ಳಾರಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ತುಂಗಭದ್ರಾ ಜಲಾಶಕ್ಕೆ ಸೋಮವಾರದ ಮಾಹಿತಿಯಂತೆ ಒಳಹರಿವು 1,47,122 ಕ್ಯೂಸೆಕ್ ಆಗಿದೆ. ಹೊರ ಹರಿವು 1,56,482 ಕ್ಯೂಸೆಕ್. 1633 ಅಡಿಯ ಡ್ಯಾಂನಲ್ಲಿ ಸದ್ಯ 1630 ಅಡಿ ನೀರಿನ ಸಂಗ್ರಹವಿದೆ. 97.41 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇರುವ ಕಾರಣ, ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ. ಆದ್ದರಿಂದ ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಬಳ್ಳಾರಿ ಜಿಲ್ಲಾಡಳಿತ ಮನವಿ ಮಾಡಿದೆ. ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕಂಪ್ಲಿಯ ಕೋಟೆ ಪ್ರದೇಶದ ಬಳಿ ಪ್ರವಾಹದ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ನದಿ ಪಾತ್ರದ ಜನರಿಗೆ ಮನವಿ: "ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ನದಿಭಾಗ ಗ್ರಾಮದ ಜನರು ನದಿಪಾತ್ರಕ್ಕೆ ತೆರಳಬಾರದು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
"ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು. ಕಂಪ್ಲಿ ಮತ್ತು ಗಂಗಾವತಿ ಸಂಪರ್ಕ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯವಾಗಿ ಬುಕ್ಕಸಾಗರ ಸೇತುವೆ ಮೂಲಕ ಸಂಚರಿಸಬಹುದು" ಎಂದರು.
"ಕಂಪ್ಲಿಯಲ್ಲಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನದಿಪಾತ್ರದ ಬಳಿ ಪೊಲೀಸರನ್ನು ನಿಯೋಜಿಸಿದೆ. ಯಾರೂ ನದಿಪಾತ್ರಕ್ಕೆ ತೆರಳಬಾರದು. ತುರ್ತು ಸಂದರ್ಭಕ್ಕೆ ತಾಲ್ಲೂಕು ಆಡಳಿತ ಅಥವಾ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು" ಎಂದು ಕರೆ ನೀಡಿದರು.
ನದಿ ಪಾತ್ರ, ದಂಡೆ ಮತ್ತು ನದಿಯ ಅಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಬಳಿಕ ಕಂಪ್ಲಿ ಪಟ್ಟಣದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ. ಜೆ. ಶೋಭಾರಾಣಿ ಮುಂತಾದ ಅಧಿಕಾರಿಗಳ ಜೊತೆಗೆ ಚರ್ಚಿಸಿದರು.
ತುಂಗಭದ್ರಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಆದ್ದರಿಂದ ಹಂಪಿ ಪಕ್ಕದಲ್ಲಿನ ನದಿ ಪಾತ್ರದ ಪ್ರದೇಶಗಳಿಗೆ ವಿಜಯನಗರ ಜಿಲ್ಲಾಧಿಕಾರಿ ಎಂ. ಎಸ್. ದಿವಾಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನರಿಗೆ ಎಚ್ಚರಿಕೆ ನೀಡಿದರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರವಾಹದಿಂದ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.












Click it and Unblock the Notifications