ಉಪ ಚುನಾವಣೆ ಟಿಕೆಟ್ ಫೈಟ್; ಸಿದ್ದರಾಮಯ್ಯ ಭೇಟಿಯಾದ ಡಿಕೆಶಿ!
ಬೆಂಗಳೂರು, ಸೆಪ್ಟೆಂಬರ್ 30: ಕೇಂದ್ರ ಚುನಾವಣಾ ಆಯೋಗ ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಎರಡೂ ಕ್ಷೇತ್ರಗಳ ಪೈಕಿ ಹಾನಗಲ್ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾದರು. ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಗುರುವಾರ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಇಂದು ನನ್ನ ನಿವಾಸಕ್ಕೆ ಭೇಟಿ ನೀಡಿ ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಚರ್ಚೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಶಿವಣ್ಣ ಮತ್ತಿತರರು ಈ ವೇಳೆ ಹಾಜರಿದ್ದರು ಎಂದು ಹೇಳಿದ್ದಾರೆ.

ಬಿಜೆಪಿ ಟ್ವೀಟ್ ಮಾಡಿತ್ತು; ಹಾನಗಲ್ ಉಪ ಚುನಾವಣೆ ಟಿಕೆಟ್ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂದು ಕರ್ನಾಟಕ ಬಿಜೆಪಿ ಗುರುವಾರ ಮಧ್ಯಾಹ್ನ ಟ್ವೀಟ್ ಮಾಡಿತ್ತು.
ಮೊನ್ನೆಯಷ್ಟೇ ಒಂದೇ ಚಕ್ಕಡಿ, ಟಾಂಗಾ ಏರಿ ನಾಟಕೀಯ ಒಗ್ಗಟ್ಟು ಪ್ರದರ್ಶಿಸಿದ್ದ @siddaramaiah ಹಾಗೂ @DKShivakumar ಇಂದು ವಿರುದ್ಧ ದಿಕ್ಕಿಗೆ ಮುಖ ಮಾಡಿದ್ದಾರೆ.
— BJP Karnataka (@BJP4Karnataka) September 30, 2021
ಪದಾಧಿಕಾರಿಗಳ ಪಟ್ಟಿ ಕೂಡಾ ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟದಿಂದ ಬಿಡುಗಡೆಯಾಗಿಲ್ಲ ಎಂಬುದು ಜನತೆಗೆ ತಿಳಿಯದ ವಿಷಯವೇನಲ್ಲ.#SidduVsDKS pic.twitter.com/qqJ4fNiStN
'ಮೊನ್ನೆಯಷ್ಟೇ ಒಂದೇ ಚಕ್ಕಡಿ, ಟಾಂಗಾ ಏರಿ ನಾಟಕೀಯ ಒಗ್ಗಟ್ಟು ಪ್ರದರ್ಶಿಸಿದ್ದ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಇಂದು ವಿರುದ್ಧ ದಿಕ್ಕಿಗೆ ಮುಖ ಮಾಡಿದ್ದಾರೆ. ಪದಾಧಿಕಾರಿಗಳ ಪಟ್ಟಿ ಕೂಡಾ ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟದಿಂದ ಬಿಡುಗಡೆಯಾಗಿಲ್ಲ ಎಂಬುದು ಜನತೆಗೆ ತಿಳಿಯದ ವಿಷಯವೇನಲ್ಲ' ಎಂದು ಹೇಳಿತ್ತು.
ಶ್ರೀನಿವಾಸ ಮಾನೆ ಮತ್ತು ಮನೋಹರ ತಹಶೀಲ್ದಾರ್ ನಡುವೆ ಹಾನಗಲ್ ಕ್ಷೇತ್ರದ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ. ಸಿದ್ದರಾಮಯ್ಯ ಶ್ರೀನಿವಾಸ ಮಾನೆ ಪರವಾಗಿ ಮತ್ತು ಡಿ. ಕೆ. ಶಿವಕುಮಾರ್ ಮನೋಹರ ತಹಶೀಲ್ದಾರ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂಬುದು ಸುದ್ದಿ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬುಧವಾರ ತಮ್ಮ ನಿವಾಸದಲ್ಲಿ ಹಾನಗಲ್ ಉಪ ಚುನಾವಣೆ ಬಗ್ಗೆ ಹಾವೇರಿ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮದ್, ಧ್ರುವ ನಾರಾಯಣ, ಮಾಜಿ ಸಭಾಪತಿ ಕೆ. ಬಿ. ಕೋಳಿವಾಡ, ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ, ಮಾಜಿ ಸಚಿವ ಮನೋಹರ್ ಎಚ್. ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.
2018ರ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶ್ರೀನಿವಾಸ ಮಾನೆ 74,015 ಮತಗಳನ್ನು ಪಡೆದು 5,500 ಮತಗಳ ಅಂತರದಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ವಿರುದ್ಧ ಸೋತಿದ್ದರು. ಈಗ ಸಿ. ಎಂ. ಉದಾಸಿ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ಎದುರಾಗಿದೆ.
ಬಿಜೆಪಿಯಿಂದ ಸಹ ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದರೆ ಜೆಡಿಎಸ್ ಪಕ್ಷ ಉಪ ಚುನಾವಣೆಗೆ ಅಭ್ಯರ್ಥಿ ನಿಯಾಜ್ ಶೇಕ್ ಎಂದು ಘೋಷಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಗುರುವಾರ ಬಿ-ಫಾರಂ ನೀಡಿದ್ದಾರೆ.
ಹಾನಗಲ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರ. ಆದ್ದರಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದು ಪ್ರತಿಷ್ಠೆಯಾಗಿದೆ. ಸಿ. ಎಂ. ಉದಾಸಿ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.
ಅಕ್ಟೋಬರ್ 1ರ ಶುಕ್ರವಾರ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 8ರ ತನಕ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಮೂರು ಪಕ್ಷಗಳು ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿವೆ.












Click it and Unblock the Notifications