ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನ ಮಳೆ
ಬೆಂಗಳೂರು, ಡಿಸೆಂಬರ್ 01 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಶನಿವಾರ ಸಂಜೆಯಿಂದ ತುಂತುರು ಮಳೆಯಾಗುತ್ತಿದೆ.
ಅರಬ್ಬೀ ಸಮುದ್ರ ಮತ್ತು ಹಿಂದೂ ಮಹಾಸಾಗರದ ಮಧ್ಯೆ ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ಬೆಳಗ್ಗೆಯೇ ತುಂತುರು ಮಳೆ ಆರಂಭವಾಗಿದೆ. ಮಳೆ ಜೋರಾಗಿಯೂ ಬಾರದೇ, ಕಡಿಮೆಯೇ ಆಗದೆ ವೀಕೆಂಡ್ ಮೂಡ್ನಲ್ಲಿದ್ದ ಜನರಿಗೆ ನಿರಾಸೆ ಮೂಡಿಸಿದೆ. ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಹೊರಟವರು ಛತ್ರಿ ಹಿಡಿದು ಹೋಗುವುದು ಅನಿವಾರ್ಯವಾಗಿದೆ.

ವಾಯುಭಾರ ಕುಸಿತದ ಪರಿಣಾಮ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ತುಂತುರು ಮಳೆಯಾಗಲಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬೆಳೆಗಳ ಕಟಾವು ಸಮಯವಾದ್ದರಿಂದ ರೈತರು ಆತಂಕಗೊಂಡಿದ್ದಾರೆ.
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾಗಿ ಆರಂಭವಾಗಿತ್ತು. ಆದರೆ, ಆಗಸ್ಟ್ ತಿಂಗಳಿನಲ್ಲಿ 10 ದಿನ ಸುರಿದ ಮಳೆಗೆ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದವು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿತ್ತು.
ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಮುಂಗಾರು ಹಂಗಾಮಿನಲ್ಲಿ ದೇಶದಲ್ಲಿ ಶೇ 10ರಷ್ಟು, ಕರ್ನಾಟಕದಲ್ಲಿ ಶೇ 23ರಷ್ಟು ಹೆಚ್ಚು ಮಳೆಯಾಗಿತ್ತು. ಸೆಪ್ಟೆಂಬರ್ ತಿಂಗಳ ಬಳಿಕ ಪದೇ-ಪದೇ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆ ಸುರಿತ್ತಲೇ ಇದೆ.
ಶುಕ್ರವಾರದಿಂದ ಬೆಂಗಳೂರು ನಗರದ ಹವಾಮಾನ ಸಂಪೂರ್ಣ ಬದಲಾಗಿದೆ. ಶನಿವಾರ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಕೆಲವು ಕಾಲ ಬಿಸಿಲು ಬಂದರೆ, ಬಳಿಕ ಮೋಡ ಕವಿದಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ತುಂತುರು ಮಳೆ ಆರಂಭವಾಯಿತು.
ಶನಿವಾರ ರಾತ್ರಿಯಿಂದ ತಣ್ಣನೆಯ ಗಾಳಿ ಬೀಸುತ್ತಿದ್ದು, ತುಂತುರು ಮಳೆಯಾಗುತ್ತಿದೆ. ಭಾನುವಾರ ಮುಂಜಾನೆಯಿಂದಲೂ ಮಳೆಯಾಗುತ್ತಲೇ ಇದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.












Click it and Unblock the Notifications