ಸಿಎಂ ಸಿದ್ದರಾಮಯ್ಯ ಉಡುಪಿ ಭೇಟಿ; ಬಿಜೆಪಿಯ ಪ್ರಶ್ನೆಗಳು
ಬೆಂಗಳೂರು, ಆಗಸ್ಟ್ 01; ಉಡುಪಿ ಕಾಲೇಜಿನ ವಿಡಿಯೋ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿವೆ. ಪ್ರತಿಪಕ್ಷ ಬಿಜೆಪಿ ಇದೇ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಪ್ರವಾಸ ಕೈಗೊಂಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ, ಮಂಗಳೂರು ಪ್ರವಾಸದಲ್ಲಿದ್ದಾರೆ. ಉಡುಪಿಯ ಪಡುಬಿದ್ರಿಯಲ್ಲಿ ಕಡಲ ಕೊರೆತವನ್ನು ಸಿದ್ದರಾಮಯ್ಯ ವೀಕ್ಷಿಸಿದರು. ಸಚಿವ ಮಂಕಾಳ ವೈದ್ಯ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಧಿಕಾರಿಗಳು ಜೊತೆಗಿದ್ದಾರೆ.

ಕರ್ನಾಟಕ ಬಿಜೆಪಿ ಉಡುಪಿಗೆ ಭೇಟಿ ನೀಡಿರುವ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿದೆ. 'ಪೊಡವಿಗೊಡೆಯ ಶ್ರೀ ಕೃಷ್ಣನ ಸನ್ನಿಧಾನ ಉಡುಪಿಗೆ ಭೇಟಿ ನೀಡುವ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸುತ್ತಾರಾ?' ಎಂದು ಬಿಜೆಪಿ ಟ್ವೀಟ್ ಬಾಣ ಬಿಟ್ಟಿದೆ.
ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆಗಳು
* ಉಡುಪಿ ಕಾಲೇಜಿನ ಘಟನೆಯನ್ನು ಸಿದ್ದರಾಮಯ್ಯ ಸರ್ಕಾರ ತಿರುಚಲು ಪ್ರಯತ್ನಿಸಿದ್ದು ಏಕೆ..?
* ಉಡುಪಿಯ ಕಾಲೇಜಿನ ಪ್ರಕರಣದ ಸಾಕ್ಷಿಯನ್ನು ನಾಶಗೊಳಿಸಲು ಪೊಲೀಸರ ಮೇಲೆ ಒತ್ತಡ ತಂದದ್ದು ಸರಿಯೇ..?
* ರಾತ್ರೋರಾತ್ರಿ ಸಾಮಾಜಿಕ ಕಾರ್ಯಕರ್ತೆಯ ಮನೆಗೆ ಪೊಲೀಸರನ್ನು ನುಗ್ಗಿಸಿದ್ದು ಏಕೆ..?
* ಉಡುಪಿ ಘಟನೆಯ ತಪ್ಪಿತಸ್ಥರು ಹಾಗೂ ಅವರ ಪ್ರೇರಕ ಶಕ್ತಿಗಳ ಗಡಿಪಾರು ಯಾವಾಗ..?
* ಉಡುಪಿ ಪ್ರಕರಣದ ತನಿಖೆಯನ್ನು ಎಸ್.ಐ.ಟಿ ಗೆ ವಹಿಸದಿರಲು ಪ್ರಮುಖ ಕಾರಣವೇನು..?
* ಖುದ್ದು ಸಂಪೂರ್ಣ ಸರ್ಕಾರವೇ ಭಾಗಿಯಾಗಿ ಈ ಪ್ರಕರಣದ ದಿಕ್ಕನ್ನು ತಪ್ಪಿಸುತ್ತಿರುವುದು ಯಾರನ್ನು ರಕ್ಷಿಸುವುದಕ್ಕಾಗಿ..?
ಜಿಹಾದಿ ಮತ್ತು ನಿಷೇಧಿತ ಸಂಘಟನೆಗಳನ್ನು ಪೋಷಿಸುತ್ತಿರುವುದು ಅವರ ಮೇಲಿನ ಭಯದ ಕಾರಣಕ್ಕೋ ಅಥವಾ ಅವರ ಮೇಲಿನ ವಾತ್ಸಲ್ಯಕ್ಕೋ? ಎಂದು ಬಿಜೆಪಿ ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡಿದೆ.
ಕರ್ನಾಟಕ ಬಿಜೆಪಿಯ ನಾಯಕರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದರು. ಹಿಂದೂ ವಿದ್ಯಾರ್ಥಿನಿಯರ ಮಾನದ ಬಗ್ಗೆ ಚೆಲ್ಲಾಟವಾಡುವ ಮತಾಂಧ ಶಕ್ತಿಗಳ ಷಡ್ಯಂತ್ರವನ್ನು ಕಾಂಗ್ರೆಸ್ ಸರ್ಕಾರ ಮಕ್ಕಳಾಟವೆಂದು ಬಣ್ಣಿಸುತ್ತದೆ. ತನಿಖೆಗೆ ಮೊದಲೇ ಸರ್ಟಿಫಿಕೇಟ್ ನೀಡುವ ಇದು ಜನ ವಿರೋಧಿ ಸರ್ಕಾರ ಎಂದು ಆರೋಪಿಸಿದ್ದರು.
ಸಿದ್ದರಾಮಯ್ಯ ಪ್ರತಿಕ್ರಿಯೆ; ಉಡುಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ" ಎಂದರು.
"ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು" ಎಂದು ಸಿದ್ದರಾಮಯ್ಯ ತಿಳಿಸಿದರು.
ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಮಕ್ಕಳಾಟವಾಗಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ?. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ" ಎಂದರು.
"ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ" ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.












Click it and Unblock the Notifications