Breaking: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಇನ್ನಿಲ್ಲ
ಉಡುಪಿ, ಡಿಸೆಂಬರ್ 29: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ (88) ಭಾನುವಾರ ನಿಧನರಾದರು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಡಿ.20ರಂದು ಮುಂಜಾನೆ 3 ಗಂಟೆ ಸುಮಾರಿಗೆ ಮಣಿಪಾಲದ ಕಸ್ತೂರ ಬಾ (ಕೆಎಂಸಿ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯುಮೋನಿಯಾ ಚಿಕಿತ್ಸೆ ಜತೆಗೆ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಕೆಎಂಸಿಯ ಆರು ತಜ್ಞ ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದರು.
ಸ್ವಾಮೀಜಿಗಳಿಗೆ ಐಸಿಯುನಲ್ಲಿ ಸತತ ಚಿಕಿತ್ಸೆ ನೀಡಲಾಗಿತ್ತು. ಆರಂಭದಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸಿದ್ದರೂ, ಕ್ರಮೇಣ ಅವರ ದೇಹದ ಶಕ್ತಿ ತೀವ್ರ ಪ್ರಮಾಣದಲ್ಲಿ ಕುಂದಿತ್ತು. ಇದರಿಂದ ಅವರ ಆರೋಗ್ಯ ಗಣನೀಯವಾಗಿ ಕ್ಷೀಣಿಸಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರ ಜತೆ ಸಂಪರ್ಕದಲ್ಲಿದ್ದ ಕೆಎಂಸಿ ವೈದ್ಯರು, ಅವರ ಆರೋಗ್ಯದ ಮಾಹಿತಿ ನೀಡುತ್ತಿದ್ದರು. ಶುಕ್ರವಾರ ಅವರ ಆರೋಗ್ಯದಲ್ಲಿ ತಕ್ಕಮಟ್ಟಿನ ಚೇತರಿಕೆ ಕಂಡುಬಂದಿತ್ತು. ಆದರೆ ಶನಿವಾರ ಮಧ್ಯಾಹ್ನದ ಬಳಿಕ ಮತ್ತಷ್ಟು ಕ್ಷೀಣಿಸಿತ್ತು. ಅವರನ್ನು ಉಳಿಸುವ ಯಾವ ಪ್ರಯತ್ನಗಳೂ ಫಲಿಸಲಿಲ್ಲ. ಮಧ್ಯಾಹ್ನ 2 ಗಂಟೆವರೆಗೆ ಉಡುಪಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಿದ್ದು, ನಂತರ ಬೆಂಗಳೂರು ನ್ಯಾಶನಲ್ ಕಾಲೇಜ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬೆಂಗಳೂರಿನ ಮಠದಲ್ಲಿ ಸಂಜೆ ಅಂತಿಮ ವಿಧಿ ವಿಧಾನ ನಡೆಸಲಾಗುವುದು.

ಉಡುಪಿ ಮಠಕ್ಕೆ ಕರೆದೊಯ್ಯಲಾಗಿತ್ತು
ಕೃತಕ ಉಸಿರಾಟದಲ್ಲಿದ್ದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಾರದ ಹಿನ್ನೆಲೆಯಲ್ಲಿ ಅವರ ಕೊನೆಯ ಆಸೆಯಂತೆ ಉಡುಪಿ ಮಠಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರ ನಿಧನ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು.
ಪೇಜಾವರ ಶ್ರೀಗಳು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಹೊರಬರಲಿ ಎಂದು ಅವರ ಅಭಿಮಾನಿಗಳು, ಉಡುಪಿ ಮಠದ ಭಕ್ತರು ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದ್ದರು. ಆದರೆ ಅವರ ಪ್ರಾರ್ಥನೆ ಕೈಗೂಡಲಿಲ್ಲ.

ಪೇಜಾವರ ಶ್ರೀ
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದರಿಂದ ಅವರ ಚಿಕಿತ್ಸೆಗೆ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಯು ಅವರನ್ನು ನೋಡಲು ಬರುವವರಿಗೆ ನಿರ್ಬಂಧ ವಿಧಿಸಿತ್ತು.

1931ರ ಏಪ್ರಿಲ್ 27
1931ರ ಏಪ್ರಿಲ್ 27ರಂದು ಉಡುಪಿಯಿಂದ ಸುಮಾರು 120 ಕಿ.ಮೀ. ದೂರದ ಸುಬ್ರಮಣ್ಯ ಸಮೀಪದ ರಾಮಕುಂಜ ಎಂಬ ಹಳ್ಳಿಯಲ್ಲಿ ಜನಿಸಿದ ವಿಶ್ವೇಶ ತೀರ್ಥ ಸ್ವಾಮೀಜಿ, ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ 33ನೇ ಮಠಾಧೀಶರಾಗಿ ಸೇವೆ ಸಲ್ಲಿಸಿದ್ದರು.

ನಾರಾಯಣಾಚಾರ್ಯ ಮತ್ತು ಕಮಲಮ್ಮ ದಂಪತಿಯ ಎರಡನೆಯ ಮಗ
ನಾರಾಯಣಾಚಾರ್ಯ ಮತ್ತು ಕಮಲಮ್ಮ ದಂಪತಿಯ ಎರಡನೆಯ ಮಗನಾದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಮೂಲ ಹೆಸರು ವೆಂಕಟರಮಣ. ಆರು ವರ್ಷದ ಬಾಲಕನಿದ್ದಾಗ ಅವರ ಪೋಷಕರು ಉಡುಪಿ ಪೇಜಾವರ ಮಠದ ಪರ್ಯಾಯಕ್ಕೆ ಕರೆದೊಯ್ದಿದ್ದರು. ಆಗಿನ ಪೇಜಾವರ ಮಠಾಧೀಶರಾದ ವಿಶ್ವಮಾನ್ಯ ತೀರ್ಥರಿಂದ ಪ್ರಭಾವಿತರಾಗಿ ತಮ್ಮ ಎಂಟನೇ ವಯಸ್ಸಿನಲ್ಲಿ ಹಂಪಿಯಲ್ಲಿ ದೀಕ್ಷೆ ಪಡೆದರು. ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ ವಿಶ್ವೇಶ ತೀರ್ಥ ಎಂಬ ಹೆಸರಿನೊಂದಿಗೆ ವೇದಾಂತ ಪೀಠವನ್ನೇರಿದ್ದರು. 1954ರಲ್ಲಿ ವಿಶ್ವೇಶ ತೀರ್ಥರು ಮೊದಲ ಪರ್ಯಾಯ ನಡೆಸಿದ್ದರು. ಸೋದೆ ಮಠದ ಶ್ರೀ ವಾದಿರಾಜ ಸ್ವಾಮೀಜಿಗಳ ಬಳಿಕ ಐದು ಪರ್ಯಾಯಗಳನ್ನು ನಡೆಸಿದ ಏಕೈಕ ಸ್ವಾಮೀಜಿ ಎನಿಸಿದ್ದಾರೆ.
ಉಡುಪಿಯ ಎಂಟು ಮಠಗಳ ಮಠಾಧೀಶರಲ್ಲಿಯೇ ಅತ್ಯಂತ ಪ್ರಭಾವಶಾಲಿಯಾಗಿದ್ದ ವಿಶ್ವೇಶ ತೀರ್ಥರು, ಜಾಗತಿಕ ಮನ್ನಣೆ ಗಳಿಸಿದ್ದರು. ರಾಜಕೀಯ, ಸಾಮಾಜಿಕ ವಿಚಾರಗಳಲ್ಲಿಯೂ ಅವರು ತೊಡಗಿಸಿಕೊಂಡಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications