ಉಡುಪಿ : ಕಾಂಗ್ರೆಸ್ ವಿರುದ್ಧ ಮುಸ್ಲಿಂಮರು ಗರಂ
ಉಡುಪಿ, ಫೆಬ್ರವರಿ 06 : ಈ ಬಾರಿಯ ಉಡುಪಿ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಒಂದು ಸ್ಥಾನದಲ್ಲಿಯೂ ಟಿಕೆಟ್ ನೀಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
26 ಸ್ಥಾನಗಳ ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂಮರಿಗೆ ಟಿಕೆಟ್ ಕೊಡದ ವಿಚಾರದಲ್ಲಿ ಕಾರ್ಯಕರ್ತರ ಅಸಮಧಾನ ಭುಗಿಲೆದ್ದಿದೆ. ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಮುಸ್ಲಿಂಮರನ್ನು ಕಡೆಗಣಿಸಲಾಗಿದೆ. ಅಭ್ಯರ್ಥಿಗಳ ನೇಮಕದಲ್ಲಿ ನಿರ್ಣಾಯಕರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ಕಾರಣ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. [ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿವರಗಳು]

ಉಡುಪಿ ಜಿಲ್ಲೆಯಲ್ಲಿ ಶಿರೂರು ಹಾಗೂ ಪಡುಬಿದ್ರೆ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಿದ್ದು, ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪಟ್ಟಿ ಬಿಡುಗಡೆ ಆದ ಬಳಿಕ ಈ ನಿರೀಕ್ಷೆ ಹುಸಿಯಾಗಿದೆ ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. [ಜಿಪಂ, ತಾಪಂ ಚುನಾವಣೆಯಲ್ಲಿ ಗೆಲುವು ನಮ್ಮದೆ]
ಇತ್ತೀಚೆಗೆ ಕಾಪುವಿನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ್ದ ಸಚಿವ ವಿನಯ್ ಕುಮಾರ್ ಸೊರಕೆ ಅವರು ಮುಸ್ಲಿಂಮರಿಗೆ ಟಿಕೆಟ್ ನೀಡದ ಬಗ್ಗೆ ಸಮರ್ಥನೆ ನೀಡಿದ್ದಾರೆ. 'ಮುಸ್ಲಿಂ ಅಭ್ಯರ್ಥಿಗಳಿಗೆ ಯಾರು ಮತ ಹಾಕಿಲ್ಲ. ಆದ ಕಾರಣ ಟಿಕೆಟ್ ನೀಡಿಲ್ಲ' ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಕಾರ್ಯಕರ್ತರು ದೂರಿದ್ದಾರೆ.
ಜಿಲ್ಲಾ ಪಂಚಾಯತಿ ಉಪ ತಾಲೂಕು ಕ್ಷೇತ್ರಗಳಲ್ಲಿ 13 ಸ್ಥಾನ ಬಿಲ್ಲವರಿಗೆ, 1 ಸ್ಥಾನ ಕ್ರಿಶ್ಚಿಯನ್, ಮೊಗವೀರ ಹಾಗೂ ಬಂಟ ಸಮುದಾಯ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಆಧ್ಯತೆ ನೀಡಿದೆ. ಆದರೆ, ಒಂದು ಕ್ಷೇತ್ರದಲ್ಲಿಯೂ ಮುಸ್ಲಿಂ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸದೆ ಇರುವುದು ಬೇಸರ ತಂದಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂದಹಾಗೆ ಫೆ.20ರಂದು ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೀದರ್ ಸೇರಿದಂತೆ 15 ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ.












Click it and Unblock the Notifications