ಮೈಸೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ
ಬೆಂಗಳೂರು, ಫೆಬ್ರವರಿ 09: ವಿಧಾನಸಭಾ ಚುನಾವಣೆ ನಂತರ ಸೈಲೆಂಟ್ ಆಗಿದ್ದ ಕಮಲ ಪಾಳಯದ ನಾಯಕರು ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ನಾಯಕರು ಲೋಕಸಮರಕ್ಕೆ ಭರ್ಜರಿ ತಯಾರಿ ನಡೆಸುತ್ತಿದಾರೆ.
ಹೌದು, ವಿಧಾನಸಭೆ ಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಲೋಕಸಭಾ ಚುನಾವಣೆ ಹಿನ್ನಲೆ ಮೈಸೂರಿಗೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ(ಫೆಬ್ರವರಿ 10) ಮೈಸೂರಿಗೆ ಆಗಮಿಸಲಿರುವ ಅಮಿತ್ ಶಾ ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಫೆ 11 ರಂದು ಅಮಿತ್ ಶಾ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ
ಫೆಬ್ರವರಿ 11 ರಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆಯನ್ನ ಸಲ್ಲಿಸಲಿದ್ದಾರೆ. ಇನ್ನೂ ದರ್ಶನದ ಬಳಿಕ 11.45ಕ್ಕೆ ಹೆಲಿಕಾಪ್ಟರ್ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಸುತ್ತೂರು ಮಠದಲ್ಲಿ ಊಟ ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್ಗೆ ಆಗಮಿಸಲಿದ್ದಾರೆ.
ಬಿಜೆಪಿ ನಾಯಕರ ಜೊತೆಗೆ ಅಮಿತ್ ಶಾ ಸಭೆ
ಲೋಕಸಭಾ ಚುಣಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಲಿರುವ ಚುನಾವಣಾ ಚಾಣಕ್ಷ ಅಮಿತ್ ಶಾ ಅವರು, ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಕರ್ನಾಟಕಕ್ಕೆ ಆಗಮಿಸಲಿದ್ದು, ಹಲವು ತಂತ್ರಗಾರಿಕೆ ಹಾಗೂ ಚುನಾವಣಾ ಸಿದ್ದತೆಗೆ ಅಮಿತ್ ಶಾ ಅವರು ಸೂಚನೆ ನೀಡಿಲಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಜೊತೆಗಿನ ಮೈತ್ರಿ ಹಾಗೂ ಪಕ್ಷದಲ್ಲಿರುವ ಅಸಮಾಧಾನವನ್ನ ಶಮನಗೊಳಿಸಿಕೊಂಡು ಚುನಾವಣೆಗೆ ಸಿದ್ದರಾಗಿ ಎಂದು ರಾಜ್ಯ ಬಿಜೆಪಿ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ.












Click it and Unblock the Notifications