ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲು ಹಾಕಿದ ಎಚ್ಡಿಕೆ
ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಸವಾಲನ್ನು ಹಾಕಿದ್ದಾರೆ. ನಿನ್ನೆ ಸರ್ಕಾರದ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮಾನವ ಸರಪಳಿ ಚಳವಳಿಯನ್ನು ಕೂಡ ಟೀಕಿಸಿದ್ದಾರೆ. ಸರ್ಕಾರಕ್ಕೆ ನಿಜವಾಗಿಯೂ ಪ್ರಜಾಪ್ರಭುತ್ವದ ಮೇಲೆ ಕಾಳಜಿ ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆಗಳನ್ನು ನಡೆಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ, ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದೂ ವ್ಯಂಗ್ಯವಾಡಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ ನಾಲ್ಕು ತಿಂಗಳುಗಳು ಕಳೆದಿವೆ. ಆದರೆ ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ.
ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕುಟುಕಿದ್ದಾರೆ.
ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ಪ್ರಶ್ನಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿನ್ನೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಕರೆ ನೀಡಿದ್ದರು.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದು ಹೇಳಿದ್ದರು. ಬುದ್ಧ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತವಾಗಿದೆ ಎಂದು ಹೇಳಿದ್ದರು.
ನಾವೀಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಜನರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ನೀಡಿದರೆ ಸಾಲದು, ಅದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ನೀಡಬೇಕು. ಇಲ್ಲದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆ ಅವರು ನೀಡಿದ್ದರು. ಹೀಗಾಗಿ ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರತಮ್ಯವು ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ ಎಂದು ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.












Click it and Unblock the Notifications