ನನ್ನ ಬಣ್ಣ ಪರ್ಮನೆಂಟ್ ಪರಮೇಶ್ವರ್ ಅವರೇ: ಹೆಚ್ ಡಿ ಕುಮಾರಸ್ವಾಮಿ ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಆಗಸ್ಟ್ 03: ಪರಮೇಶ್ವರ್ ಅವರು ಹೇಳುತ್ತಾರೆ, ನಾವು ಬಣ್ಣ ಬದಲಾಯಿಸಿದೇವೆ ಎಂದು. ನನ್ನ ಬಣ್ಣ ಬದಲಾಗಲು ಸಾಧ್ಯವೇ ಇಲ್ಲ ಪರಮೇಶ್ವರ್ ರವರೇ. ಇದು ಪರ್ಮನೆಂಟ್ ಬಣ್ಣ. ಎಂದು ತಮ್ಮ ಬಣ್ಣದ ಬಗ್ಗೆ ಮಾತನಾಡಿದ ಸಚಿವ ಪರಮೇಶ್ವರ್ ಅವರಿಗೆ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಏಕವಚನದಲ್ಲಿ ಮಾತನಾಡುತ್ತಿರಿ ನೀವು. ನಾನು,ಸಿದ್ದರಾಮಯ್ಯ ನವರ ಪರವಾಗಿದ್ದೇನೆ ಎನ್ನುತ್ತೀರಿ. ನಿಮ್ಮ ನಾಟಕ ಬಯಲಾಗತ್ತದೆ, ಕಾದು ನೋಡಿ ಪರಮೇಶ್ವರ್ ಅವರೇ.. ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಇನ್ನೂ ಸಿಡಿ ಶಿವು ಅವರು, ಕಾಂಗ್ರೆಸ್ ಎದುರಿಸಲು ಬಿಜೆಪಿ ಜತೆಗೆ ಜೆಡಿಎಸ್ ಸೇರಿಕೊಂಡಿದೆ ಎಂದು ಹೇಳಿದ್ದಾರೆ. ನಿಮ್ಮನ್ನು ಬುಡ ಸಮೇತ ಕಿತ್ತೊಗೆಯಲು ನಾವು ಜೊತೆಯಾಗೆ ಇರುತ್ತೇವೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.

ಸಚಿವ ಡಾ.ಪರಮೇಶ್ವರ ಅವರು ಹಲವಾರು ಪ್ರಶ್ನೆಗಳನ್ನು ಹಾಕಿದ್ದಾರೆ. ಆದರೆ, ಅವರು ನನ್ನ ಒಂದು ಪ್ರಶ್ನೆಗೆ ಉತ್ತರ ಕೊಡಲಿ. ಯಾದಗಿರಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಮ್ಮ ಸಮಾಜದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಕೆ ಅವರು ಜೀವ ಕಳೆದುಕೊಂಡರು? ಬದುಕು ಕೊನೆ ಮಾಡಿಕೊಂಡ ಆ ಪೊಲೀಸ್ ಅಧಿಕಾರಿಯ ಪತ್ನಿ ಹೇಳ್ತಾರೆ, ಪೋಸ್ಟಿಂಗ್ ಗೆ 25 ಲಕ್ಷ ರೂಪಾಯಿ ಲಂಚ ಹಣ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ತಾಯಿ ಯಾರ ವಿರುದ್ಧ ಆರೋಪ ಮಾಡಿದ್ದಾರೆ? ಅದರ ಬಗ್ಗೆ ಪರಮೇಶ್ವರ ಅವರು ಉತ್ತರ ಕೊಡಲಿ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.
ಸಾಮಾಜಿಕ ನ್ಯಾಯ ಎಂದು ಹೇಳಿಕೊಂಡು ರಾಜಕೀಯ ಲಾಭ ಪಡೆಯುವ ನೀವು, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊಡುವ ಗೌರವ ಇದೇನಾ? 2012ರಲ್ಲಿ ನಿಮ್ಮ ಆಡಳಿತದ ಅವಧಿಯಲ್ಲಿ ಓರ್ವ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಮ್ಮದೇ ಸಮಾಜದ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗಲೂ ಅದು ಮುಂದುವರಿದೆ. ಇಂಥ ಸಾವುಗಳನ್ನು ತಡೆಯುವ ಶಕ್ತಿ ನಿಮಗೆ ಇಲ್ಲವೇ? ಎಂದು ಮುಖ್ಯಮಂತ್ರಿ ಅವರನ್ನು ಕೇಂದ್ರ ಸಚಿವರು ತರಾಟೆಗೆ ತೆಗೆದುಕೊಂಡರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಹಕ್ಕಿದೆ. ಅದನ್ನು ಎತ್ತಿ ಹಿಡಿಯುವ ಕೆಲಸವನ್ನು ನಾವ್ಯಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಈ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದೇವೆ. ಮೂಡಾ ಹಗರಣದಲ್ಲಿ ನಿಮ್ಮ ಹೆಸರು ಬಂದಿದೆ. ನಿವು ನಿವೇಶನ ಪಡೆದಿರುವುದಕ್ಕೆ ನಮಗೆ ಅಭ್ಯಂತರ ಇಲ್ಲ. ಆದರೆ,ಸರ್ಕಾರದ ಜಮೀನು ನಿಮ್ಮ ಬಾಮೈದನ ಹೆಸರಿಗೆ ಖರೀದಿಸಿ, ಆ ನಂತರ ಸಹೋದರಿಗೆ ಕೊಡುತ್ತೀರಿ..! ಇದು ಹೇಗೆ ರವಾನೆಯಾಗಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಸಿದ್ದರಾಮಯ್ಯನವರೇ..? ಎಂದು ಕೇಂದ್ರ ಸಚಿವರು ರಾಜ್ಯದ ಮುಖ್ಯಮಂತ್ರಿಗಳನ್ನು ತೀಕ್ಷ್ಣವಾಗಿ ಪ್ರಶ್ನಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಎಂದು ಮಾತು ಮಾತಿಗೂ ಹೇಳುತ್ತೀರಿ. ದಲಿತರ ಉದ್ಧಾರ ಎಂದು ಭಾಷಣ ಬಿಗಿಯುತ್ತೀರಿ. ಆದರೆ, ಅಂಬೇಡ್ಕರ್ ಹೆಸರಿನಲ್ಲಿ ಹಣ ಲೂಟಿ ಮಾಡಿದ್ದೀರಿ. ಬಾಬಾ ಸಾಹೇಬ್ ಅವರಿಗೆ ಗೌರವ ಕೊಡೋದು ಎಂದರೆ, ಯಾರಿಗಾಗಿ ಅವರು ತಮ್ಮ ಬದುಕು ಮುಡಿಪಿಟ್ಟು ಹೋರಾಟ ನಡೆಸಿದರೋ ಆ ಜನಗಳ ಹಣ ಕೊಳ್ಳೆ ಹೊಡೆಯೋದಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು, ಯಡಿಯೂರಪ್ಪನವರು ಸೇರಿ ವಾಲ್ಮೀಕಿ ನಿಗಮ ಸ್ಥಾಪನೆ ಮಾಡಿದೆವು. ದುರ್ಬಲರಿಗೆ ಶಕ್ತಿ ಬರಲಿ ಎನ್ನುವ ಒಳ್ಳೆಯ ಉದ್ದೇಶದಿಂದ ಈ ಕೆಲಸ ಮಾಡಿದೆವು. ಈ ನಿಗಮದಲ್ಲಿ 89 ಕೋಟಿ ರೂ. ಅಕ್ರಮ ಆಗಿದೆ ಎಂದು ನೀವೇ ಹೇಳಿದ್ದೀರಿ. ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದೀರಿ. ನಿಮ್ಮ ನಿಜವಾದ ಬಣ್ಣ ಬಯಲಾಗತ್ತದೆ ಎಂದು ಹೆದರಿ ಕದ್ದು ಓಡಿದವರು ನೀವು. ಈಗ ನೋಡಿದರೆ ಮೂಡ ಹಗರಣ ಮುಚ್ಚಿಹಾಕಲು ಮುಂದಾಗಿದ್ದೀರಿ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.
ಇನ್ನೂ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಜೆಡಿಎಲ್ಪಿ ನಾಯಕ ಸುರೇಶ್ ಬಾಬು ಸೇರಿದಂತೆ ಎರಡೂ ಪಕ್ಷಗಳ ಸಂಸದರು, ನಾಯಕರು, ಕಾರ್ಯಕರ್ತರು ಭಾಗಿಯಾಗಿದ್ದರು.












Click it and Unblock the Notifications