ಕೇಂದ್ರ ಸಚಿವರ ಸ್ಥಿತಿ ಚಿಂತಾಜನಕ: ಗೋವಾ ಆಸ್ಪತ್ರೆಗೆ ರವಾನೆ
ಬೆಂಗಳೂರು, ಜ. 11: ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಹೆದ್ದಾರಿಯಲ್ಲಿ ಸಂಭವಿಸಿರುವ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಗೋವಾದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಲ್ಲಿ ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್ ಅವರ ಪತ್ನಿ ವಿಜಯಾ ನಾಯ್ಕ್ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾದ್ ಗೂಮೆ ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಅವರು ಕುಟುಂಬಸ್ಥರ ಜೊತೆ ಯಲ್ಲಾಪುರ ಚಂದಗುಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ದಂಪತಿ, ಬಳಿಕ ಸಚಿವ ಶಿವರಾಂ ಹೆಬ್ಬಾರ್ ಅವರನ್ನು ಭೇಟಿ ಮಾಡಿದ್ದರು. ಭೇಟಿ ಸಂದರ್ಭದಲ್ಲಿ ಶ್ರೀಪಾದ್ ನಾಯ್ಕ್ ಅವರನ್ನು ಸಚಿವ ಹೆಬ್ಬಾರ್ ಸನ್ಮಾನಿಸಿದ್ದರು.

ಅಲ್ಲಿಂದ ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿತ್ತು. ಸಚಿವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸಚಿವ ಆಪ್ತ ಸಹಾಯಕ ಕೂಡಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರು ಶ್ರೀಪಾದ ನಾಯ್ಕ ಹಾಗೂ ಇನ್ನುಳಿದ ಮೂವರನ್ನು ಅಂಕೋಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗೋವಾಕ್ಕೆ ರವಾನೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಿಗ್ಭ್ರಮೆ: ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ವಿಜಯಾ ನಾಯಕ್ ಅವರ ನಿಧನ ಹೊಂದಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಚಿವ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಯಡಿಯೂರಪ್ಪ ಅವರು ಹಾರೈಸಿದ್ದಾರೆ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications