ಶಿಕಾರಿಪುರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ, ಬಿಎಸ್ವೈಗೆ ಅಮಿತ್ ಶಾ ಸೂಚನೆ
ಶಿಕಾರಿಪುರ ಬಿಟ್ಟು ಬೇರೆ ಕ್ಷೇತ್ರದಿಂದ ಈ ಬಾರಿ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿ ಎಸ್ ಯಡಿಯೂರಪ್ಪನವರಿಗೆ ಸೂಚಿಸಿದ್ದಾರೆಂದು ವರದಿಯಾಗಿದೆ. ಬಿಜೆಪಿ ಪ್ರಾಭಲ್ಯ ಹೆಚ್ಚಿರುವ ಉತ್ತರ ಕರ್ನಾಟಕದ ಯ
ಬೆಂಗಳೂರು, ನವದೆಹಲಿ, ಸೆ 17: ನಿಮ್ಮ ಸ್ವಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಿಂದ ಈ ಬಾರಿ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿ ಎಸ್ ಯಡಿಯೂರಪ್ಪನವರಿಗೆ ಸೂಚಿಸಿದ್ದಾರೆಂದು ವರದಿಯಾಗಿದೆ.
ಬಿಜೆಪಿ ಪ್ರಾಭಲ್ಯ ಹೆಚ್ಚಿರುವ ಉತ್ತರ ಕರ್ನಾಟಕದ ಯಾವುದಾದರೂ ಕ್ಷೇತ್ರವನ್ನು ಆಯ್ಕೆಮಾಡಿಕೊಂಡು ಅಲ್ಲಿಂದ ಸ್ಪರ್ಧಿಸಿ ಎಂದು ಅಮಿತ್ ಶಾ ಸೂಚಿಸಿದ್ದು, ಪಕ್ಷದ ಆದೇಶವನ್ನು ಪಾಲಿಸುವುದಾಗಿ ಬಿಎಸ್ವೈ ಹೇಳಿದ್ದಾರೆಂದು ತಿಳಿದು ಬಂದಿದೆ.

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿನ ಗೊಂದಲದ ಹಿನ್ನಲೆಯಲ್ಲಿ ಯಡಿಯೂರಪ್ಪ ಉತ್ತರ ಕರ್ನಾಟಕದಿಂದ ಸ್ಪರ್ಧಿಸಿದರೆ ಪಕ್ಷಕ್ಕೆ ಒಳ್ಳೆದು ಎನ್ನುವ ಸಂದೇಶವನ್ನು ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಮತ್ತು ಪಿಯೂಷ್ ಗೋಯೆಲ್, ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ರವಾನಿಸಿದ್ದಾರೆ.
ಇದುವರೆಗೆ ಶಿಕಾರಿಪುರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸದ ಯಡಿಯೂರಪ್ಪ ಬಾಗಲಕೋಟೆ ಜಿಲ್ಲೆಯಿಂದ ಸ್ಪರ್ಧಿಸುವುದು ಬಹುತೇಕ ಅಂತಮವಾಗಿದೆ ಎನ್ನುವ ಮಾಹಿತಿಯಿದೆ. ಬಿಜೆಪಿ ಮೂಲಗಳ ಪ್ರಕಾರ ಯಡಿಯೂರಪ್ಪ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚು.
ಶನಿವಾರ ರಾತ್ರಿ (ಸೆ 16) ನಡೆದ ಕೋರ್ ಕಮಿಟಿಯ ಸಭೆಯ ವೇಳೆ ಅಮಿತ್ ಶಾ, ಯಡಿಯೂರಪ್ಪನವರಿಗೆ ಕರೆ ಮಾಡಿ ಶಿಕಾರಿಪುರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಹೇಳಿದ್ದಾರೆ. ಅದಕ್ಕೆ ಪೂರಕ ಎನ್ನುವಂತೆ, ಪಕ್ಷದ ಹಿತ ನನಗೆ ಮುಖ್ಯ, ವರಿಷ್ಠರು ಏನು ಸೂಚಿಸುತ್ತಾರೋ ಅದಕ್ಕೆ ನನ್ನ ಒಪ್ಪಿಗೆಯಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗುತ್ತಿದೆ.
ಬಾಗಲಕೋಟೆಯಲ್ಲಿ ಇತ್ತೀಚೆಗೆ ನಡೆದ ಬೂತ್ ಮಟ್ಟದ ಸಭೆಯಲ್ಲೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಮನವಿ ಮಾಡಿದ್ದರು. ಹಾಗಾಗಿ, ಬಾದಾಮಿ ಅಥವಾ ಬಾಗಲಕೋಟೆ ಜಿಲ್ಲೆಯ 8 ಕ್ಷೇತ್ರಗಳ ಪೈಕಿ ( ಮುಧೋಳ, ತೇರದಾಳ, ಬಾದಾಮಿ, ಬಾಗಲಕೋಟೆ, ಜಮಖಂಡಿ, ಬೀಳಗಿ, ಹುನಗುಂದ, ನರಗುಂದ) ಯಾವುದಾದರೂ ಒಂದು ಕ್ಷೇತ್ರವನ್ನು ಯಡಿಯೂರಪ್ಪ ಆಯ್ಕೆ ಮಾಡುವ ಸಾಧ್ಯತೆಯಿದೆ.












Click it and Unblock the Notifications