Upper Bhadra Project: ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಿಗೆ ಭದ್ರಾ ನೀರು ಯಾವಾಗ?
ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ನೀರು ಹರಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಮುಗಿಯೋದು ಯಾವಾಗ ಎನ್ನುವ ಪ್ರಶ್ನೆಗೆ ಕೊನೆಗೂ ಡಿಸಿಎಂ ಡಿ. ಕೆ ಶಿವಕುಮಾರ್ ಉತ್ತರ ನೀಡಿದ್ದಾರೆ. ಕಾಮಗಾರಿ ಇನ್ನೂ ನಡೆಯುತ್ತಿದ್ದು ಮಾರ್ಚ್ 2028ರ ವೇಳೆಗೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಚಳಿಗಾಲದ ಅಧಿವೇಶನದಲ್ಲಿ ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದರು. ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕುರಿತಂತೆ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದು, 2028ರ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಏನಿದು ಭದ್ರಾ ಮೇಲ್ದಂಡೆ ಯೋಜನೆ?
ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ವರದಾನವಾಗಿದೆ. ಈ ನಾಲ್ಕು ಜಿಲ್ಲೆಗಳ 2,25,515 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವದ ಯೋಜನೆಯಾಗಿದೆ. 367 ಕೆರೆಗಳಿಗೆ ಅವುಗಳ ಸಾಮರ್ಥ್ಯದ 50% ನೀರನ್ನು ತುಂಬಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ನಾಲ್ಕು ಜಿಲ್ಲೆಗಳು 29.90 ಟಿಎಂಸಿ ನೀರನ್ನು ಪಡೆಯಲಿವೆ. ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರ ಜಲಾಶಯಕ್ಕೂ ಕೂಡ 2 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. 21,473 ಕೋಟಿ ರೂಪಾಯಿ ವೆಚ್ಚದ ಈ ಮಹತ್ವದ ಯೋಜನೆಗೆ 2020ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಭೂಸ್ವಾಧೀನ ಪ್ರಕ್ರಿಯೆ ಸವಾಲು
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧಿನ ಪ್ರಕ್ರಿಯೆ ಸವಾಲಾಗಿದೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ ತ್ವರಿತವಾಗಿ ಕಾಮಗಾರಿ ಮುಗಿಸಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು. 2023-2024ರ ಸಾಲಿನ ಆಯವ್ಯಯದಲ್ಲಿ ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗಾಗಿ 5,300 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದೆ, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವ ಪ್ರಕ್ರಿಯೆ ತಡವಾಗುತ್ತಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ 1430 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದ್ದು, 2024ರ ಅಕ್ಟೋಬರ್ ವೇಳೆಗೆ ಯೋಜನೆಗಾಗಿ 10,115 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದರು.












Click it and Unblock the Notifications