ಸಿ ಗ್ರೂಪ್ ಸಿಬ್ಬಂದಿ ಬಿ ಗ್ರೂಪನಲ್ಲಿ ವಿಲೀನ: ಯುಡಿಡಿ ಕಾರ್ಯದರ್ಶಿ ಹೈಕೋರ್ಟ್ ಹಾಜರ್
ಬೆಂಗಳೂರು, ಜೂ.4. ರಾಜ್ಯದ ಹಲವು ಪೌರ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್-ಸಿ ಸಿಬ್ಬಂದಿಯನ್ನು ಗ್ರೂಪ್-ಬಿಗೆ ವಿಲೀನಗೊಳಿಸುವ ವಿಚಾರಕ್ಕೆ ಸಂಬಂಧ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹೈಕೋರ್ಟ್ ಗೆ ಹಾಜರಾಗಿ ಕ್ಷಮೆ ಕೋರಿದರು.
ಕರ್ನಾಟಕ ನಗರ ಪಾಲಿಕೆಗಳ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ಹಾಜರಾದ ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್.ಅರ್ಚನಾ ಖುದ್ದು ಹಾಜರಾದರು.
ಅಲ್ಲದೆ, ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿಲ್ಲ. ಈಗಾಗಲೇ ಜೂನ್ 3ರಂದು ಕರಡು ನಿಯಮಗಳನ್ನು ಪ್ರಕಟಿಸಲಾಗಿದ್ದು, ಅವುಗಳಿಗೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ, ಆನಂತರ ನಿಯಮಗಳನ್ನು ಅಂತಿಮಗೊಳಿಸಲಾಗುವುದು ಎಂದು ಮೆಮೋ ಸಲ್ಲಿಸಿದರು.
ಅದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಆರು ವಾರ ಮುಂದೂಡಿತು.
ಸರ್ಕಾರದ ಉತ್ತರಕ್ಕೆ ಅತೃಪ್ತಿ:
ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ಕರಡು ನಿಯಮ ಸಿದ್ಧವಿದೆ, ಸಚಿವ ಸಂಪುಟದ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಸರ್ಕಾರಿ ವಕೀಲರು ನೀಡಿದ ಉತ್ತರದಿಂದ ಅತೃಪ್ತಿ ವ್ಯಕ್ತಪಡಿಸಿತ್ತು.
ಗ್ರೂಪ್-ಸಿ ಉದ್ಯೋಗಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ವೃಂದ ಮತ್ತು ನೇಮಕ ನಿಯಮಗಳಿಗೆ ತಿದ್ದುಪಡಿ ತರಬೇಕು.
ಆ ಕುರಿತು ಎರಡು ತಿಂಗಳಲ್ಲಿ ಕರಡು ನಿಯಮಗಳನ್ನು ಪ್ರಕಟಿಸುವಂತೆ 2021ರ ಜು.19ರಂದು ಏಕಸದಸ್ಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ. ಆದರೆ, ಈವರೆಗೂ ಕರಡು ನಿಯಮಗಳನ್ನು ಪ್ರಕಟಿಸಿಲ್ಲ. ಆ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ನ್ಯಾಯಪೀಠ ಹೇಳಿತು.
ಜೊತೆಗೆ ಪ್ರಕರಣದ ಕುರಿತು ವಿವರಣೆ ನೀಡಲು ಜೂ.6ರಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್. ಅರ್ಚನಾ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಪ್ರಕರಣ ಹಿನ್ನೆಲೆ ಏನು? ರಾಜ್ಯದ ಪೌರಸಂಸ್ಥೆಯಲ್ಲಿ 10,000 ರಿಂದ 21,600 ರೂ. ವೇತನ ಶ್ರೇಣಿ ಹೊಂದಿರುವ ಕಂದಾಯ ಅಧಿಕಾರಿಗಳು, ಕಚೇರಿ ವ್ಯವಸ್ಥಾಪಕರು ಮತ್ತು ಹಿರಿಯ ಆರೋಗ್ಯಾಧಿಕಾರಿಗಳ ಗ್ರೂಪ್-ಸಿ ಉದ್ಯೋಗಗಳನ್ನು ಗ್ರೂಪ್ ಬಿ ಗೆ ವಿಲೀನಗೊಳಿಸಿ 2020ರ ಸೆ.29ರಂದು ಸರ್ಕಾರ ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿದ್ದ ಅರ್ಜಿದಾರರು, ವೃಂದ ಮತ್ತು ನೇಮಕ ಅಧಿನಿಯಮಗಳಿಗೆ ತಿದ್ದುಪಡಿ ತರದೇ ಕೇವಲ ಕಾರ್ಯಕಾರಿ ಆದೇಶದ ಮೂಲಕ ನೇರವಾಗಿ ಗ್ರೂಪ್-ಸಿ ಉದ್ಯೋಗಿಗಳನ್ನು ಗ್ರೂಪ್-ಬಿಗೆ ವಿಲೀನಗೊಳಿಸಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿದ್ದರು.
ಏಕ ಸದಸ್ಯಪೀಠ, ಗ್ರೂಪ್-ಸಿ ಉದ್ಯೋಗಗಳನ್ನು ಗ್ರೂಪ್ ಬಿಗೆ ವಿಲೀನಗೊಳಿಸಲು ವೃಂದ ಮತ್ತು ನೇಮಕ ನಿಯಮಗಳಿಗೆ ಎರಡು
ತಿಂಗಳಲ್ಲಿ ಕರಡು ತಿದ್ದುಪಡಿ ನಿಯಮಗಳ ಪ್ರಕಟಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿತ್ತು. ಈ ಆದೇಶ ಪಾಲಿಸಿಲ್ಲ ಎಂದು
ಆರೋಪಿಸಿ ಅರ್ಜಿದಾರರು ಮತ್ತೆ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.