ಜಿಪಂ, ತಾಪಂ ಚುನಾವಣೆಯಲ್ಲಿ ಗೆಲುವು ನಮ್ಮದೆ: ಸೊರಕೆ
ಮಡಿಕೇರಿ,ಜನವರಿ,20: ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳಿಸಿ ಜಯಬೇರಿ ಸಾಧಿಸಲಿದೆ ಎಂಬ ವಿಶ್ವಾಸವನ್ನು ರಾಜ್ಯ ನಗರಾಭಿವೃದ್ದಿ ಸಚಿವ ವಿನಯ್ ಕುಮಾರ್ ಸೊರಕೆ ವ್ಯಕ್ತಪಡಿಸಿದರು.
ಉಡುಪಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಮಡಿಕೇರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಮಾರ್ ಸೊರಕೆ ಅವರು, 'ಜಿ.ಪಂ. ಹಾಗೂ ತಾ.ಪಂ ಚುನಾವಣೆಯನ್ನು ಕೊಡಗು ಜಿಲ್ಲೆಯಲ್ಲಿ ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಪಕ್ಷ ಸರ್ವ ಸನ್ನದ್ಧವಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಗ್ರಾಮಾಂತರ ಪ್ರದೇಶಗಳಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಚುನಾವಣೆ ತಯಾರಿ ಬಗ್ಗೆ ತಿಳಿಸಿದರು.[ಚುನಾವಣೆ ವೇಳಾಪಟ್ಟಿ]
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿರುವುದರಿಂದ ಗೆಲುವು ಸುಲಭ ಸಾಧ್ಯ ಎಂದ ಅವರು, ನಮ್ಮ ಸರಕಾರ ಜಿಲ್ಲೆಗೆ ಸಾಕಷ್ಟು ಅನುದಾನ ನೀಡಿದೆ. ಜಿಲ್ಲೆಯ ಕೆಲವೆಡೆ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಮುಖ್ಯಮಂತ್ರಿಯವರಿಗೆ ಕೊಡಗಿನ ಮೇಲೆ ವಿಶೇಷ ಅಭಿಮಾನವಿರುವುದರಿಂದ ಮುಂದಿನ ಸಾಲಿನ ಬಜೆಟ್ ನಲ್ಲಿ ಇನ್ನಷ್ಟು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಲಿದ್ದಾರೆ ಎಂಬುದಾಗಿ ಹೇಳಿದರು.
ಈಗಾಗಲೇ ಸರಕಾರ ನೀಡಿರುವ ಸರಕಾರದ ಕಾರ್ಯಕ್ರಮಗಳನ್ನು ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗ್ರಾಮಾಂತರ ಪ್ರದೇಶಗಳ ಜನರಿಗೆ ತಲುಪಿಸುವ ಮೂಲಕ ಜಿ.ಪಂ ಹಾಗೂ ತಾ.ಪಂ ಚುನಾವಣೆಯಲ್ಲಿ ಪಕ್ಷದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ನಿರ್ವಹಿಸುತ್ತಾರೆ ಎಂಬ ದೃಢ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟರು.[ಮತಪತ್ರ ಪ್ರದರ್ಶಿಸಿ ಗೋಜಿಗೆ ಸಿಕ್ಕಿದ ಜಿಲ್ಲಾ ಪಂಚಾಯತಿ ಸದಸ್ಯ]
ಮಡಿಕೇರಿ ನಗರದ ನಾಗರಿಕರಿಗೆ ಕುಡಿಯುವ ನೀರಿನ ಸರಬರಾಜು ಮಾಡಲು ಸಮರ್ಪಕವಾಗಿ ಒದಗಿಸುವ ಈ ಮೊದಲೇ ಉದ್ದೇಶಿಸಿದ ಬೇತ್ರಿ ಯೋಜನೆಯನ್ನು ಅತೀ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುತ್ತದೆ. ಕೇಂದ್ರದ ಅಮೃತ ಯೋಜನೆಯಡಿ ಎರಡು ಸರಕಾರಗಳ ಸಹಭಾಗಿತ್ವದಲ್ಲಿ ಬೇತ್ರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ 50 ಕೋಟಿ ರೂ. ನೀಡುತ್ತಿದೆ ಎಂದು ಸಚಿವರು ತಿಳಿಸಿದರು.