ಉರಿಗೌಡ-ನಂಜೇಗೌಡ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಅಶ್ವಥ ನಾರಾಯಣ
ಬೆಂಗಳೂರು, ಮೇ 30; "ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು" ಎಂಬ ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿಕೆ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಕೂಡಲೇ ಎಫ್ಐಆರ್ ಹಾಕಲಾಗಿದ್ದು, ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಹಾಗೂ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಶಾಸಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಪ್ರಕರಣ ಸಂಬಂಧ ಮೈಸೂರಿನ ದೇವರಾಜ ಠಾಣೆಯ ಪೊಲೀಸರು ಮೇ 24ರಂದು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಶಾಸಕ ಅಶ್ವತ್ಥ ನಾರಾಯಣ ಕೋರಿದ್ದಾರೆ. ಅರ್ಜಿ ಇತ್ಯರ್ಥವಾಗುವರೆಗೆ ಎಫ್ಐಆರ್ಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. ದೇವರಾಜ ಠಾಣಾ ಪೊಲೀಸರು ಮತ್ತು ದೂರುದಾರರಾದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ.
ಅಶ್ವತ್ಥ ನಾರಾಯಣ ಪರ ಹಿರಿಯ ವಕೀಲರು ವಾದ ಮಂಡಿಸಿ, ಅರ್ಜಿದಾರರು ವಿವಾದಕ್ಕೆ ಗುರಿಯಾಗಿರುವ ಭಾಷಣ ಮಾಡಿ ಹಲವು ತಿಂಗಳು ಕಳೆದಿವೆ. ತಮ್ಮ ಭಾಷಣದ ಕುರಿತು ಸ್ಪಷ್ಟನೆ ಸಹ ನೀಡಿದ್ದಾರೆ. ಅದೊಂದು ಮುಗಿದ ಅಧ್ಯಾಯವಾಗಿದೆ. ಆದರೆ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಕೆಲವೇ ದಿನದಲ್ಲಿ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಗಾಗಿ, ಅರ್ಜಿಯನ್ನು ತುರ್ತಾಗಿ ವಿಚಾರಣೆ ಪರಿಗಣಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಮಂಗಳವಾರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದು ತಿಳಿಸಿತು.

ರಾಜಕೀಯ ಷಡ್ಯಂತ್ರ?; ಇದೀಗ ಎಫ್ಐಆರ್ ಪ್ರಶ್ನಿಸಿರುವ ಅಶ್ವತ್ಥ ನಾರಾಯಣ, ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸುವ ಏಕೈಕ ಉದ್ದೇಶದಿಂದ ವಿವಾದಿತ ಭಾಷಣ ಮಾಡಲಾಗಿತ್ತು. ಆ ಕುರಿತು ಸದನ ಮತ್ತು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದೇನೆ. ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಉದ್ದೇಶ ಇರಲಿಲ್ಲ. ಅವರೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯ ಸಹ ಹೊಂದಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಭಾಷಣದ ನಂತರ ಯಾವುದೇ ಗಲಭೆ ನಡೆದಿಲ್ಲ. ಪ್ರಕರಣ ಈಗಾಗಲೇ ಮುಗಿದ ಅಧ್ಯಾಯ. ಹೀಗಿದ್ದರೂ ಅನಗತ್ಯವಾಗಿ ಎಫ್ಐಆರ್ ದಾಖಲಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ, ಘಟನೆ ನಡೆದು ಹಲವು ತಿಂಗಳು ಕಳೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪೊಲೀಸರು ಒತ್ತಡಕ್ಕೆ ಮಣಿದು ಎಫ್ಐಆರ್ ದಾಖಲಿಸಿದ್ದು, ಅದನ್ನು ರದ್ದುಪಡಿಸಬೇಕು ಎಂದು ಕೋರಿದ್ದಾರೆ. ಅಲ್ಲದೇ, ಎಫ್ಐಆರ್ಗೆ ತಡೆ ನೀಡದೆ ಹೋದರೆ ಶಾಸಕರಾಗಿರುವ ತಮಗೆ ಸಮಸ್ಯೆಯಾಗಲಿದೆ. ಆದ್ದರಿಂದ ಎಫ್ಐಆರ್ಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.
ಏನಿದು ವಿವಾದ?' 2023ರ ಫೆ.15ರಂದು ಮಂಡ್ಯದ ಸಾತನೂರಿನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಂದು ಸಚಿವರಾಗಿದ್ದ ಅಶ್ವತ್ಥ ನಾರಾಯಣ, "ಟಿಪ್ಪುವನ್ನು ಉರಿಗೌಡ-ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು" ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಫೆ.27ರಂದು ದೂರು ನೀಡಿದ್ದರು. ಆ ದೂರು ಆಧರಿಸಿ ಮೇ 24ರಂದು ಮೈಸೂರಿನ ದೇವರಾಜ ಠಾಣಾ ಪೊಲೀಸರು, ಕ್ರಿಮಿನಲ್ ಬೆದರಿಕೆ ಹಾಗೂ ಗಲಭೆಗೆ ಪ್ರಚೋದನೆ ನೀಡಿದ ಅಪರಾಧ ಸಂಬಂಧ ಎಫ್ಐಆರ್ ದಾಖಲಿಸಿದ್ದರು. ಆ ನಂತರ ಪ್ರಕರಣವನ್ನು ಮಂಡ್ಯ ಠಾಣೆಗೆ ವರ್ಗಾಯಿಸಲಾಗಿದೆ.












Click it and Unblock the Notifications