ದೇಶ ವಿರೋಧಿ ಚಟುವಟಿಕೆ: ಎನ್ಐಎಗೆ ಮಹತ್ವದ ಮಾಹಿತಿ ಕೊಟ್ಟ ರಾಜ್ಯ ಪೊಲೀಸರು!
ಬೆಂಗಳೂರು, ಸೆ. 01: ದೇಶವಿರೋಧಿ ಚಟುವಟಿಕೆ ಕುರಿತು ರಾಜ್ಯ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಜೊತೆಗೆ ನಿಕಟ ಸಂಪರ್ಕದಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದೆ. ಅದರ ಆಧಾರದಲ್ಲಿಯೇ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಹಲವರನ್ನು ಎನ್ಐಎ ಬಂಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ.
"ನಮ್ಮ ಪೊಲೀಸರು ನಿರಂತರವಾಗಿ ಕರಾವಳಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದಾರೆ. ದೇಶ ವಿರೋಧಿ ಚಟುವಟಿಕೆಗಳನ್ನು ನಾವು ಸಹಿಸುವುದಿಲ್ಲ. ಅದರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಇರುತ್ತದೆ. ಎನ್ಐಎ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ದೇಶ ವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕಲಾಗುತ್ತಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸಮಾಲೋಚಿಸಿ ಮುಂದಿನ ತೀರ್ಮಾನ!
ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತಿತರ ಮಾಹಿತಿ ಪಡೆದುಕೊಂಡು, ಸೆಪ್ಟೆಂಬರ್ 5 ರಂದು ತಜ್ಞರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಗಣೇಶೋತ್ಸವ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಆಚರಿಸಲಾಗುತ್ತಿದೆ. ಹೀಗಾಗಿ ಕಳೆದ ಬಾರಿ ಹೇಗೆ ನಿರ್ವಹಣೆ ಮಾಡಲಾಗಿದೆ. ಈ ವರ್ಷದ ಪರಿಸ್ಥಿತಿಯಲ್ಲಿ ಹೇಗೆ ಆಚರಿಸಬೇಕು ಎಂಬ ಬಗ್ಗೆ ಜಿಲ್ಲೆಗಳಿಂದ ಸಂಪೂರ್ಣ ವರದಿ ಪಡೆದು, ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಯಾವುದೇ ಕಾರಣಕ್ಕೂ ಆತುರಾತುರವಾಗಿ ಯಾವುದೇ ನಿರ್ಧಾರವನ್ನು ತೆತೆದುಕೊಳ್ಳುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
ಕೋವಿಡ್ ನಿರ್ಬಂಧ ಯಾವಾಗ ಸಡಿಲಿಕೆ?
ಕೋವಿಡ್ 19 ಪರಿಸ್ಥಿತಿ ಸುಧಾರಿಸಿರುವ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು. ಪರಿಸ್ಥಿತಿ ಸುಧಾರಿಸಿದಂತೆಲ್ಲ, ನಿರ್ಬಂಧಗಳನ್ನು ಸಡಿಲಿಸಲಾಗುವುದು. ಆದರೆ ಪಕ್ಕದ ರಾಜ್ಯಗಳಲ್ಲಿನ ಕೊರೊನಾ ಪರಿಸ್ಥಿಯ ಬಗ್ಗೆಯೂ ನಿಗಾ ವಹಿಸಲು ಗಡಿ ಭಾಗದ ಜಿಲ್ಲಾ ಆಡಳಿತಕ್ಕೆ ಸೂಚನೆ ಕೊಟ್ಟಿದ್ದೇವೆ. ಮೂರನೇ ಅಲೆಯ ಬಗ್ಗೆಯೂ ಸರ್ಕಾರ ಗಮನ ಹರಿಸಿ, ಮುಂಜಾಗ್ರತೆ ತೆಗೆದುಕೊಳ್ಳಲಿದೆ.
ನಾಳೆ ರಾಜ್ಯಕ್ಕೆ ಬರಲಿದ್ದಾರೆ ಅಮಿತ್ ಶಾ!
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇತರ ಹಲವು ಕೇಂದ್ರ ಸಚಿವರು ಸಹ ರಾಜ್ಯಕ್ಕೆ ಆಗಮಿಸಲಿದ್ದು, ಅವರೊಂದಿಗೆ ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಹಾಗೂ ರಾಜ್ಯದಲ್ಲಿ ಹಲವು ಕೇಂದ್ರದ ಯೋಜನೆಗಳಿಗೂ ಚಾಲನೆ ದೊರೆಯಲಿದೆ ಎಂದು ಹೇಳಿದ್ದಾರೆ.
ನಗರಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜೊತೆಗೆ, ಬಡ ಜನರ ಜೀವನ ಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಸ್ವಕ್ಷೇತ್ರಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿಯಿಂದ ಸ್ವಕ್ಷೇತ್ರ ಶಿಗ್ಗಾಂವ ತಾಲೂಕಾ ತಡಸ ಗ್ರಾಮಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ಮಾಡಿದ್ದಾರೆ. 3.30 ಕೋಟಿ ರೂ. ವೆಚ್ಚದ ಕುಮಟಾ-ತಡಸ ಹೆದ್ದಾರಿ ಸುಧಾರಣೆ, 2 ಕೋಟಿ ರೂ. ವೆಚ್ಚದ ಪಡುಬಿದ್ರಿ-ಚಿಕ್ಕಲಗುಡ್ಡ ಹೆದ್ದಾರಿ ಸುಧಾರಣಾ ಕಾಮಗಾರಿಗಳಿಗೆ ಭೂಮಿ ಪೂಜೆ ಮತ್ತು ಎರಡು ಕೋಟಿ ರೂಪಾಯಿಗಳನ್ನು ವ್ಯಯಿಸಿ ನಿರ್ಮಾಣ ಮಾಡಲು ಉದ್ದೇಶಿಸಿಲಾಗಿರುವ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.
Recommended Video