ಶಾಲಾ ಮೈದಾನದಲ್ಲಿ ಶಿಕ್ಷಣೇತರ ಚಟುವಟಿಕೆ ನಿರ್ಬಂಧ, ಸುತ್ತೋಲೆ
ಬೆಂಗಳೂರು, ಡಿಸೆಂಬರ್ 11; ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಬಿ. ಬಿ. ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.

ಸುತ್ತೋಲೆಯ ವಿವರಗಳು; ಅಲ್ಲದೇ ಈ ಸುತ್ತೋಲೆಯಲ್ಲಿ ಸರ್ಕಾರದ ಸುತ್ತೋಲೆ ದಿನಾಂಕ 2/8/2023. ಸುತ್ತೋಲೆ ದಿನಾಂಕ 07/02/2013 ಉಲ್ಲೇಖ ಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇನ್ನಿತರ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿರುತ್ತದೆ ಎಂದು ಹೇಳಿದೆ.
ಆದಾಗ್ಯೂ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರ ಚಟುವಟಿಕೆಗಳಿಗೆ ಇಲಾಖೆ ಅನುಮತಿ ಇಲ್ಲದೇ ಬಳಸಿಕೊಳ್ಳುವುದಕ್ಕೆ ಹಾಗೂ ಅನುಮತಿಸುವುದಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡುತ್ತಾ, ಶಾಲಾ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ ಮತ್ತೊಮ್ಮೆ ಈ ಮೂಲಕ ತಿಳಿಸಲಾಗಿದೆ ಎಂದು ತಿಳಿಸಿದೆ.
ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠ ಪ್ರವಚನಗಳೊಂದಿಗೆ ಪಕ್ಷೇತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ, ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗವಾಗಬೇಕು ಎಂಬ ಉದ್ದೇಶದಿಂದ ಶಾಲಾ ಮೈದಾನ/ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಉದ್ದೇಶಗಳಿಗೆ ಸರ್ಕಾರ/ ಇಲಾಖೆ ಅನುಮತಿ ಇಲ್ಲದೆ ಬಳಸಬಾರದು ಹಾಗೂ ಅನುಮತಿ ನೀಡಬಾರದು ಎಂದು ತಿಳಿಸಲಾಗಿದ್ದು, ಅದರಂತ ಕುಮವಹಿಸಲು ಮತ್ತೊಮ್ಮೆ ಸೂಚಿಸಲಾಗಿದೆ.
ಮುಂದುವರೆದು ಶಾಲೆಗೆ ಸಂಬಂಧವಿರದ ಯಾವುದೇ ವ್ಯಕ್ತಿಗಳು ಶಾಲೆಯ ಆವರಣದಲ್ಲಿ ಅನಗತ್ಯವಾಗಿ ಸುತ್ತಾಡುತ್ತಿರುವುದು ಕಂಡುಬಂದಲ್ಲಿ ಹಾಗೂ ಯಾವುದೇ ವ್ಯಕ್ತಿಗಳಿಂದ ಶಾಲಾ ಸುರಕ್ಷತೆಗೆ ಭಂಗ ತರುವಂತಹ ಅನಾಮಧೇಯ ದೂರವಾಣಿ ಕರೆಗಳು, ಪತ್ರಗಳು ಬಂದಲ್ಲಿ ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸಿದಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಒಟ್ಟಾರ ಶಾಲಾ ಮಕ್ಕಳ ಸುರಕ್ಷತೆಗೆ ಧಕ್ಕೆಯಾಗದಂತೆ ಎಚ್ಚರಿಕ ವಹಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರು, ಉಸ್ತುವಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಸುತ್ತೋಲೆಯನ್ನು ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ರವರಿಗೆ ಅಗತ್ಯ ಕ್ರಮಕ್ಕಾಗಿ ಕಳಿಸಲಾಗಿದೆ.
ರಾಜ್ಯದ ಎಲ್ಲಾ ಪ್ರಾಂಶುಪಾಲರು, ಡಯಟ್ ಹಾಗೂ ಪದನಿಮಿತ್ತ ಉಪನಿರ್ದೇಶಕರು (ಅಭಿವೃದ್ಧಿ) ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರುಗಳಿಗೆ ಸಹ ಕಳುಹಿಸಿಕೊಡಲಾಗಿದೆ.
ಬೆಂಗಳೂರು ನಗರದ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದ ಬಳಿಕ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಸುತ್ತೋಲೆ ಮೂಲಕ ಮತ್ತೊಮ್ಮೆ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಶಾಲಾ ಆವರಣ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದೆ.
ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿಗಳು ಸಹ ಈಗಾಗಲೇ ಶಾಲಾ ಆವರಣದಲ್ಲಿ ಶಾಲಾ ಆವಧಿ ಮುಗಿದ ಬಳಿಕ ಯಾರೂ ಸಹ ಸಂಚಾರ ನಡೆಸಬಾರದು ಎಂದು ಆದೇಶಿಸಿವೆ. ಆದರೆ ಈ ಆದೇಶಗಳು ಹೇಗೆ ಜಾರಿಗೆ ಬರಲಿವೆ? ಎಂದು ಕಾದು ನೀಡಬೇಕು.
ಮತ್ತೊಂದು ಕಡೆ ಖಾಸಗಿ ಶಾಲಾ ಆಡಳಿತ ಮಂಡಳಿ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಮಾತನಾಡಿ, "ನ್ಯಾಯಾಲಯ, ಆಸ್ಪತ್ರೆ, ವಕೀಲರು, ವೈದ್ಯರು ಇತರರು ತಮ್ಮ ರಕ್ಷಣೆಗೆ ಕಾನೂನು ಹೊಂದಿದ್ದಾರೆ. ಆದರೆ ಶಾಲೆಗಳಲ್ಲಿ ಅಪರಾಧಗಳು ನಡೆದರೆ ಸಿಬ್ಬಂದಿ ಮತ್ತು ಶಾಲೆಯ ಆಸ್ತಿಗಳಿಗೆ ಕಾನೂನು ರಕ್ಷಣೆ ಇರುವುದಿಲ್ಲ" ಎಂದು ಹೇಳಿದ್ದಾರೆ.
"ಶಾಲೆ ಮತ್ತು ಅದರ ಆಸ್ತಿ ರಕ್ಷಣೆಗೆ ಸರ್ಕಾರ ಶಾಲಾ ಸಂರಕ್ಷಣಾ ನೀತಿಯನ್ನು ಜಾರಿಗೆ ತರಬೇಕು. ಈ ಮೂಲಕ ಶಾಲೆಗಳ ಆಸ್ತಿಗಳ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದಾರೆ.












Click it and Unblock the Notifications