ಪೊಲೀಸರ ವಿರುದ್ಧ ಅಸಂಸದೀಯ ಪದ ಬಳಕೆ; ಇಬ್ಬರ ವಿರುದ್ಧದ ಕೇಸ್ ರದ್ದು
ಬೆಂಗಳೂರು, ಡಿಸೆಂಬರ್ 08: ಪೊಲೀಸ್ ಅಧಿಕಾರಿಗಳ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ ಹಿನ್ನೆಲೆಯಲ್ಲಿ ಚನ್ನಪಟ್ಟಣದ ಇಬ್ಬರ ವಿರುದ್ಧ ಹೂಡಲಾಗಿದ್ದ ಕೇಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.
ಬಲಪ್ರಯೋಗ ಮಾಡಿ ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಚನ್ನಪಟ್ಟಣ ಪೂರ್ವ ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಇಬ್ಬರೂ ಅರ್ಜಿ ಸಲ್ಲಿಸಿದ್ದರು.

ಚನ್ನಪಟ್ಟಣದ ನಿವಾಸಿಗಳಾದ ಸಯದ್ ಈಸ ಇಬ್ರಾಹಿಂ ಮತ್ತು ಸಯದ್ ಮುಜಾಹಿದ್ ಮೆಹ್ದಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿದಾರರು ಪೊಲೀಸರ ಮೇಲೆ ಯಾವುದೇ ಬಲ ಪ್ರಯೋಗ ಅಥವಾ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಿಲ್ಲ. ಬಲವಂತವಾಗಿ ಸರ್ಕಾರಿ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಬಲಪ್ರಯೋಗ ಮಾಡಿರಬೇಕು ಅಥವಾ ಹಲ್ಲೆ ನಡೆಸಿರಬೇಕು.
ಈ ಕೃತ್ಯ ಎಸಗಿರುವ ಸಂಬಂಧ ಅರ್ಜಿದಾರರ ವಿರುದ್ಧ ಯಾವುದೇ ಆರೋಪವಿಲ್ಲ. ಹಲ್ಲೆ ಅಥವಾ ಬಲಪ್ರಯೋಗವನ್ನು ಬಳಸಿ ಸರ್ಕಾರಿ ಸೇವಕರ ಕರ್ತವ್ಯ ನಿರ್ವಹಣೆಯಿಂದ ತಡೆಯಲಾಗಿದೆ ಎಂಬುದನ್ನು ಸಾಬೀತುಪಡಿಸಲು, ಅರ್ಜಿದಾರರು ಪೊಲೀಸ್ ಸಿಬ್ಬಂದಿ ನಿಂದಿಸಿ ಬೆದರಿಕೆ ಹಾಕಿರುವುದಷ್ಟೇ ಸಾಕಾಗುವುದಿಲ್ಲ, ಆರೋಪ ಸಾಬೀತಿಗೆ ಸಾಕ್ಷಿಗಳೂ ಇಲ್ಲ ಎಂದು ಪ್ರಕರಣ ರದ್ದುಪಡಿಸಿದೆ.
ಪ್ರಕರಣದ ಹಿನ್ನೆಲೆ: 2020ರಲ್ಲಿ ರಾತ್ರಿ 11.30ರ ನಂತರವೂ ಹೋಟೆಲ್ ತೆರೆದಿದ್ದ ಹಿನ್ನೆಲೆಯಲ್ಲಿ ಅದನ್ನು ನಡೆಸುತ್ತಿದ್ದ ಅರ್ಜಿದಾರರನ್ನು ಪೊಲೀಸರು ಪ್ರಶ್ನೆ ಮಾಡಿದ್ದರು. ಆಗ ಅರ್ಜಿದಾರರು ಪೊಲೀಸರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದರು. ಜತೆಗೆ, ಭೀಕರ ಪರಿಣಾಮ ಎದರಿಸಬೇಕಾಗುತ್ತದೆ ಎಂಬುದಾಗಿ ಬೆದರಿಕೆ ಹಾಕಿದ್ದರು. ಆ ಮೂಲಕ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿತ್ತು.
ಆ ಸಂಬಂಧ ಅವರ ವಿರುದ್ಧ ಆದೇಶ ಉಲ್ಲಂಘನೆ, ಸಂಯಮ ಮೀರಿದ ಅಪರಾಧಿಕ ಬಲ ಬಳಸಿದ ಅದರಿಂದ ಸರ್ಕಾರಿ ಸೇವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣ ಚನ್ನಪಟ್ಟಣದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿತ್ತು. ಅದನ್ನು ರದ್ದುಪಡಿಸಲು ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.












Click it and Unblock the Notifications