ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್.ಸುದರ್ಶನ್?
ಬೆಂಗಳೂರು, ಡಿ. 24 : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಸರ್ಕಾರ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದೆ.
ಕೆಪಿಎಸ್ಸಿಯಲ್ಲಿ ಅಧ್ಯಕ್ಷ ಮತ್ತು 8 ಸದಸ್ಯರ ಹುದ್ದೆಗಳು ಖಾಲಿ ಇವೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಸಭಾಪತಿ ಮತ್ತು ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಅವರ ಹೆಸರನ್ನು ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿ ರಾಜ್ಯಪಾಲ ವಜೂಭಾಯಿ ಅವರಿಗೆ ಕಳುಹಿಸಿಕೊಟ್ಟಿದೆ.

ಮೈಸೂರಿನ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು, ಬಿಡಿಎ ಆಯುಕ್ತ ಶ್ಯಾಂ ಭಟ್, ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯಾದ ಕೆ.ಆರ್.ಶ್ರೀನಿವಾಸ್ ಸೇರಿದಂತೆ ಹಲವು ಮಂದಿಯ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿತ್ತು. ಆದರೆ, ಸರ್ಕಾರ ಸುದರ್ಶನ್ ಅವರ ಹೆಸರನ್ನು ಶಿಫಾರಸು ಮಾಡಿದೆ.[ಅಡ್ಡಮತ ಹಾಕಿದವರಿಗೆ ಟಿಕೆಟ್ : ಸುದರ್ಶನ್ ಕಿಡಿ]
2013ರ ವಿಧಾನಸಭೆ ಚುನಾವಣೆ ಸಮಯದಲ್ಲಿ ವಿ.ಆರ್.ಸುದರ್ಶನ್ ಅವರಿಗೆ ಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅವರಿಗೆ ಟಿಕೆಟ್ ನೀಡಿರಲಿಲ್ಲ. ಆದ್ದರಿಂದ ಸುದರ್ಶನ್ ಹೆಸರನ್ನು ಕೆಪಿಎಸ್ಸಿ ಅಧ್ಯಕ್ಷ ಗಾದಿಗೆ ಶಿಫಾರಸು ಮಾಡಲಾಗಿದೆ ಎಂಬ ವಾದವಿದೆ. [ಲೋಕಸೇವಾ ಆಯೋಗದ ಹಗರಣದ ಮಾಹಿತಿ ಇಲ್ಲಿದೆ]
ಅಂದಹಾಗೆ ಹಿಂದೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗೋನಾಳ್ ಭೀಮಪ್ಪ ಅಧ್ಯಕ್ಷರಾಗಿದ್ದರು, 2013ರಲ್ಲಿ ಅವರು ನಿವೃತ್ತಿ ಹೊಂದಿದರು. ನಂತರ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಹಗರಣ ಬಯಲಿಗೆ ಬಂದ ಬಳಿಕ ಸರ್ಕಾರ ಕೆಪಿಎಸ್ಸಿಗೆ ಹೊಸ ಅಧ್ಯಕ್ಷರನ್ನು ನೇಮಕಮಾಡಿರಲಿಲ್ಲ.












Click it and Unblock the Notifications