V Somanna: ಸಚಿವ ವಿ.ಸೋಮಣ್ಣ ನಾಳೆ ಮಾರ್ಚ್ 15ಕ್ಕೆ ದೆಹಲಿ ಭೇಟಿ
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂಬ ತೀವ್ರ ಚರ್ಚೆ ಹುಟ್ಟು ಹಾಕಿದ್ದ ವಸತಿ ಸಚಿವ ವಿ.ಸೋಮಣ್ಣ ಅವರು ನಾಳೆ ಬುಧವಾರ ಮಾರ್ಚ್ 15ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.
ಬೆಂಗಳೂರು, ಮಾರ್ಚ್ 14: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂಬ ತೀವ್ರ ಚರ್ಚೆ ಹುಟ್ಟು ಹಾಕಿದ್ದ ವಸತಿ ಸಚಿವ ವಿ.ಸೋಮಣ್ಣ ಅವರು ನಾಳೆ ಬುಧವಾರ ಮಾರ್ಚ್ 15ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಸಚಿವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಸೃಷ್ಟಿಸಿದೆ.
ಬುಧವಾರ ದೆಹಲಿಯಲ್ಲಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಅಲ್ಲಿ ಹಲವು ವಿಷಯಗಳ ಬಗ್ಗೆ ಅವರು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರದ ಪರ್ವವೂ ಸಕ್ರಿಯವಾದಂತಿದೆ. ಸಚಿವ ನಾರಾಯಣಗೌಡ ನಂತರ ಬಿಜೆಪಿಯ ಪ್ರಭಾವಿ ವಸತಿ ಸಚಿವ ವಿ.ಸೋಮಣ್ಣ ಅವರು ಕೂಡ ಕಾಂಗ್ರೆಸ್ಗೆ ಸೇರಲಿದ್ದಾರೆ ಎಂಬ ಸುದ್ದಿ ಭಾರಿ ಸದ್ದು ಮಾಡಿತ್ತು.

ಈ ಸಂಬಂಧ ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಚಿವರ ಮನವೊಲಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೆ ಸೊಮಣ್ಣ ಅವರು ದೆಹಲಿಗೆ ಪ್ರಯಾಣ ಕೈಗೊಳ್ಳಲು ಮುಂದಾಗಿದ್ದಾರೆ.
ವಿ.ಸೋಮಣ್ಣ ನಿಂತ ನೀರಲ್ಲ.... ಎಂದು ವೇದಿಕೆಯೊಂದರಲ್ಲಿ ಹೇಳಿದ್ದರು. ಆವಾಗಿನಿಂದ ಈ ವಿಚಾರ ಚರ್ಚೆಯಾಗಿತ್ತು. ಸಚಿವರು ಅಸಮಧಾನಗೊಂಡಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸ್ಪಷ್ಟನೆ ನೀಡಿದ್ದು, ಸೋಮಣ್ಣ ನಮ್ಮ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದು ತಿಳಿಸಿದ್ದರು.
ಮೌನ ಮುರಿದ ಸೋಮಣ್ಣ ಹೇಳಿದ್ದೇನು?
ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿ.ಸೋಮಣ್ಣ ಅವರ ಫೋಟೊ ವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಇದಾದ ಬಳಿಕ ಸ್ವತಃ ಮೌನ ಮುರಿದು ಪ್ರತಿಕ್ರಿಯೆ ನೀಡಿದ ವಿ. ಸೋಮಣ್ಣನವರು, ಇನ್ಮುಂದೆ ತೇಜೋವಧೆ ಮಾಡಬೇಡಿ ಎಂದು ಹೇಳುವ ಮೂಲಕ ತಮ್ಮ ರಾಜಕೀಯ ನಿಲುವು ಪ್ರಕಟಿಸಿದರು. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎನ್ನುವುದು ಕೇವಲ ಊಹಾಪೋಹ, ವದಂತಿ ಎಂದು ಗೊಂದಲಗಳಿಗೆ ತೆರ ಎಳೆದರು.

ಕಾಂಗ್ರೆಸ್ ಸೇರುವ ಆಲೋಚನೆ ಇಲ್ಲ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನನ್ನು ಸಂಪರ್ಕಿಸಿಯೂ ಇಲ್ಲ. ನಾನು ಕಾಂಗ್ರೆಸ್ಗೆ ಹೋಗುತ್ತೇನೆಂದು ವದಂತಿ ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಮೋದಿ, ಸಿಎಂ ಬೊಮ್ಮಾಯಿಯವರ ನಾಯಕತ್ವದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications