ವಾಲ್ಮೀಕಿ ನಿಗಮದ ಹಗರಣ: ಇಡಿ ವಿರುದ್ಧದ ಎಫ್ಐಆರ್ಗೆ ತಡೆ
ಬೆಂಗಳೂರು, ಜುಲೈ 24: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಕ್ರಮದ ತನಿಖೆಯಲ್ಲಿ ದೂರುದಾರರೊಬ್ಬರ ವಿಚಾರಣೆ ವೇಳೆ ಮುಖ್ಯಮಂತ್ರಿಗಳ ಹೆಸರನ್ನು ಹೇಳುವಂತೆ ಒತ್ತಡ ಹೇರಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಅಲ್ಲದೆ, ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಹೀಗೆ ಆದರೆ ಯಾವ ಅಧಿಕಾರಿ ಕೆಲಸ ಮಾಡಲು ಸಾಧ್ಯ? ಎಂದು ಖಾರವಾಗಿ ಪ್ರಶ್ನಿಸಿದೆ. ಜತೆಗೆ ಪ್ರಕರಣ ಸಂಬಂಧ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಹೇಳಿಕೆ: ಜಾರಿ ನಿರ್ದೇನಾಲಯದ ಪರ ವಾದ ಮಂಡಿಸಿದ ಸಹಾಯಕ ಸಾಲಿಸಿಟರ್ ಜನರಲ್ ಅರವಿಂದ ಕಾಮತ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಇಡಿ ಅಧಿಕಾರಿಗಳು ಕಛೇರಿ ಮೇಲೆ ಜೂನ್ 18 ಮತ್ತು 19ರಂದು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದರಲ್ಲಿ ಹಲವ ಮಂದಿಯ ವಿರುದ್ಧ ದೋಷಾರೋಪವನ್ನು ಸಾಬೀತು ಪಡಿಸಬಹುದಾದಂತಹ ಸಾಕ್ಷ್ಯಗಳು ಲಭ್ಯವಾಗಿದ್ದವು.
ಈ ಆಧಾರದಲ್ಲಿ ನಿಗಮದ ಹೆಚ್ಚುವರಿ ನಿರ್ದೇಶಕರಾದ ಕಲ್ಲೇಶ್ ಎಂಬುವರನ್ನು ಜುಲೈ 16ರಂದು ವಿಚಾರಣೆಗೆ ಕರೆದದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಮಾಹಿತಿ ಪಡೆದು ಕಳುಹಿಸಿದ್ದರು. ಈ ವೇಳೆ ವಿಚಾರಣೆ ವೇಳೆ 17 ಪ್ರಶ್ನೆಗಳನ್ನು ಕೇಳಿದ್ದು, ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತ ಬೇಕಾಗಿದೆ. ಕೆಳ ಹಂತದ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು ಎಂದು ಕೋರಿದ್ದರು.
ಇದಾದ ಆರು ದಿನಗಳ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಕಲ್ಲೇಶ್ ಅವರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಇಡಿ ಕಚೇರಿ ಮತ್ತು ಪೊಲೀಸ್ ಠಾಣೆಗೆ ಎರಡು ನಿಮಿಷದ ನಡಿಗೆಯಾದರೂ, 6 ದಿನಗಳ ಬಳಿಕ ದೂರು ದಾಖಲಿಸಿದ್ದಾರೆ ಎಂದು ವಾದ ಮಂಡಿಸಿದರು.
ಈ ಘಟನೆ ಆ ಮೂಲಕ ಇಡಿ ಅಧಿಕಾರಿಗಳು ಅವರ ನಿಯಮಗಳ ಪ್ರಕಾರ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ಬೆದರಿಕೆ ಹಾಕಲಾಗುತ್ತಿದೆ. ಇಡಿ ಬಳಿ ದೋಷಾರೋಪ ರೂಪಿಸಲು ಅಗತ್ಯವಿರುವ ದಾಖಲೆಗಳಿದ್ದರೂ, ಅಧಿಕಾರಿಗಳ ವಿರುದ್ಧವೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಸಿಕ್ಕಿಹಾಕಿಸುವ ಕೆಲಸ ನಡೆಯುತ್ತಿದೆ. ಇವೆಲ್ಲವನ್ನೂ ಗಮನಿಸಿದರೆ ಇದೊಂದು ವಾಮಮಾರ್ಗದ ಯೋಜನೆಯಾಗಿದ್ದು, ದುರುದ್ದೇಶದಿಂದ ಕೂಡಿದೆ ಎಂದು ವಿವರಿಸಿದರು.
ಸರ್ಕಾರ ಆತಂಕ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮ ಹಗರಣದಲ್ಲಿ ಮುಖ್ಯಮಂತ್ರಿಗಳ ಹೆಸರನ್ನು ಸಿಲುಕಿಸಲು ಕೇಂದ್ರ ತನಿಖಾ ಸಂಸ್ಥೆಗಳು, ಕೆಲವರನ್ನು ಬಂಧಿಸುವುದಕ್ಕೆ ಪಿತೂರಿ ಮಾಡುತ್ತಿದ್ದು, ಇಡೀ ಸರ್ಕಾರವನ್ನೇ ಗುರಿ ಪಡಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಮುಖ್ಯ ಮಂತ್ರಿಗಳ ಹೆಸರನ್ನು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಒತ್ತಡ ಹೇರಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧದ ಪ್ರಕರಣ ವಿಚಾರಣೆ ವೇಳೆ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನ್ಯಾಯಪೀಠಕ್ಕೆ ಈ ಕುರಿತು ವಿವರಿಸಿದರು.
ಪ್ರಕರಣದ ಹಿನ್ನೆಲೆ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ನಿಗಮದ ಅಕ್ರಮ ಬೆಳಕಿಗೆ ಬಂದ ಬಳಿಕ ನಿಗಮದಲ್ಲಿ ಲೆಕ್ಕಾಧಿಕಾರಿಯಾಗಿದ್ದ ಚಂದ್ರಶೇಖರ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಲೆಕ್ಕಾಧಿಕಾರಿ ಮತ್ತು ಯೂನಿಯನ್ ಬ್ಯಾಂಕ್ 6 ಮಂದಿ ಅಧಿಕಾರಿಗಳ ವಿರುದ್ಧ ಡೆತ್ನೋಟ್ ಬರೆದಿಟ್ಟಿದ್ದರು.
ಅದಾದ ಬಳಿಕ ಅವರ ಪತ್ನಿ ಕವಿತಾ ಎಂಬುವರು 2024ರ ಮೇ 27ರಂದು ಶಿವಮೊಗ್ಗ ಪೊಲೀಸರಿಗೆ ಕೊಲೆ ಆರೋಪದಲ್ಲಿ ದೂರು ದಾಖಲಿಸಿದ್ದರು. ನಂತರ ಹಲವು ಸಂದರ್ಭಗಳಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಸಂಬಂಧ ಸಿಬಿಐ ಈ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಇಡಿ ಅಧಿಕಾರಿಗಳಿಗೆ ಗಮನಕ್ಕೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ನಿಗಮದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಲಾಗಿದ್ದು, ಈ ಸಂದರ್ಭದಲ್ಲಿ ಹಲವ ಮಂದಿಯ ವಿರುದ್ಧ ದೋಷಾರೋಪವನ್ನು ಸಾಬೀತು ಪಡಿಸಬಹುದಾದಂತಹ ಸಾಕ್ಷ್ಯಗಳು ಲಭ್ಯವಾಗಿದ್ದವು. ಅದರಂತೆ ನಿಗಮದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಲ್ಲೇಶ್ ಎಂಬುವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಕಚೇರಿಗೆ ಬರಲು ಸೂಚಿಸಿ ವಿಚಾರಣೆಗೊಳಪಡಿಸಿ ಕಳುಹಿಸಲಾಗಿತ್ತು.
ಇದಾದ ಒಂದು ವಾರದ ಬಳಿಕ ಜಾರಿ ನಿದೇರ್ಶನಾಲಯದ ಉಪ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ವಿರುದ್ಧ ಕಲ್ಲೇಶ್ ಅವರು ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದರು. ಆ ಬಳಿಕ, ಸ್ಥಳದ ಆಧಾರದಲ್ಲಿ ದೂರನ್ನು ವರ್ಗಾವಣೆ ಪಡೆದಿರುವ ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಇಡಿ ಅಧಿಕಾರಿಗಳಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು.












Click it and Unblock the Notifications