ಬಸವರಾಜ ಬೊಮ್ಮಾಯಿ ಆಯ್ಕೆ ಸ್ವಾಗತಿಸಿದ ಲಿಂಗಾಯತ ಸಂಘಟನೆ
ಬೆಂಗಳೂರು, ಜುಲೈ 27: ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಿಎಂ ಆಯ್ಕೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಲಿಂಗಾಯತ ಸಮುದಾಯದ ಮೇರು ನಾಯಕ ಯಡಿಯೂರಪ್ಪ ನಂತರ ಮತ್ತೊಮ್ಮೆ ಅದೇ ಸಮುದಾಯದವರು ಸಿಎಂ ಸ್ಥಾನಕ್ಕೇರುತ್ತಿದ್ದಾರೆ.
ಬಸವರಾಜ ಬೊಮ್ಮಾಯಿ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ವೀರಶೈವ ಲಿಂಗಾಯತ ಸಮುದಾಯದ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಆಯ್ಕೆ ಮಾಡಿದಕ್ಕೆ ಹರ್ಷ ವ್ಯಕ್ತಪಡಿಸಿದೆ.
ರಾಜ್ಯ ರಾಜಕಾರಣದಲ್ಲಿ ಬಿ. ಎಸ್. ಯಡಿಯೂರಪ್ಪನವರ ರಾಜಿನಾಮೆಯಿಂದ ವೀರಶೈವ ಲಿಂಗಾಯತ ಸಮುದಾಯದವರಿಗೆ ನೋವು ನೀಡಿತು. ಈಗ ನಮ್ಮ ಸಮುದಾಯದ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದಕ್ಕೆ ಅಖಂಡ ವೀರಶೈವ ಲಿಂಗಾಯತ ಸಮುದಾಯದ ಪರವಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಭಾರತೀಯ ಜನತಾ ಪಾರ್ಟಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ಪ್ರತಿಕ್ರಿಯಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಜಾತಿ, ಮತ, ಪಂಥ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಅಚ್ಚರಿಯ ಹೆಸರೊಂದನ್ನು ಹೈಕಮಾಂಡ್ ಘೋಷಿಸಿದೆ. ಸಿಎಂ ಸ್ಥಾನದ ರೇಸಿನಲ್ಲಿ ಲಿಂಗಾಯತ ನಾಯಕರ ಕೋಟಾದಡಿಯಲ್ಲಿ ಅರವಿಂದ್ ಬೆಲ್ಲದ್ ಹಾಗೂ ಮುರುಗೇಶ್ ನಿರಾಣಿ ಮುಂಚೂಣಿಯಲ್ಲಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಆರೆಸ್ಸೆಸ್ ಹಾಗೂ ಬಿಜೆಪಿ ವರಿಷ್ಠರ ಒಲವು ಗಳಿಸಿದ ಬೊಮ್ಮಾಯಿಗೆ ಹಂಗಾಮಿ ಸಿಎಂ ಯಡಿಯೂರಪ್ಪ ಅವರ ಶ್ರೀರಕ್ಷೆಯೂ ದೊರೆತ್ತಿದ್ದು, ಸಿಎಂ ಆಗಿ ಶಾಸಕರ ಬೆಂಬಲವನ್ನು ಗಳಿಸಿದ್ದಾರೆ.












Click it and Unblock the Notifications