ಎಲ್ಲರೂ ಒಂದಾಗಿ ಬಂದರೆ ಪ್ರತ್ಯೇಕ ಧರ್ಮದ ವಿಚಾರ ತೀರ್ಮಾನ : ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್. 24 : 'ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಬಾರದು. ಅದರ ಬದಲು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು' ಎಂದು ಗುರುವಿರಕ್ತರ ಸಮಾವೇಶದಲ್ಲಿ ಒಕ್ಕೊರಲಿನಿಂದ ಒತ್ತಾಯಿಸಲಾಗಿದೆ. ಸಭೆಯಲ್ಲಿ 11 ನಿರ್ಣಯನ್ನು ಮಂಡಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ.
ಲಿಂಗಾಯತ ಧರ್ಮಕ್ಕೆ ಬೆಳಗಾವಿ ಸಮಾವೇಶದಲ್ಲಿ ನಿರ್ಣಯ ಅಂಗೀಕಾರ
ವೀರಶೈವ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ಪಂಚಾಚಾರ್ಯರು ಹಾಗೂ ವಿರಕ್ತ ಮಠಾಧೀಶರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಬೃಹತ್ ಸಮಾವೇಶ ನಡೆಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರದ ನೂರಕ್ಕೂ ಅಧಿಕ ಸ್ವಾಮೀಜಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯ ಬಳಿಕ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. 'ವೀರಶೈವ ಮಹಾಸಭಾದ ಕಾರ್ಯಕ್ರಮದಲ್ಲಿ ಪ್ರತ್ಯೇಕ ಧರ್ಮದ ವಿಚಾರ ಪ್ರಸ್ತಾಪವಾಗಿದೆ. ಎಲ್ಲರೂ ಒಟ್ಟಾಗಿ ಬಂದರೆ ಈ ವಿಚಾರದಲ್ಲಿ ತೀರ್ಮಾನ ಮಾಡಬಹುದು ಎಂದು ಹೇಳಿದ್ದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗಕ್ಕೆ ತಿಳಿಸಿದರು.
'ಲಿಂಗಾಯತ ಮುಖಂಡರು ಒಗ್ಗೂಡಲು ಶೀಘ್ರವೇ ಹೊಸ ವೇದಿಕೆ'
'ಪ್ರತ್ಯೇಕ ಧರ್ಮದ ವಿಚಾರವನ್ನು ನಾವು ಹುಟ್ಟು ಹಾಕಿದ್ದಲ್ಲ. ಪ್ರತ್ಯೇಕ ವಿಚಾರದಲ್ಲಿ ಹಲವಾರು ನಿಯೋಗಗಳು ಭೇಟಿಯಾಗಿವೆ. ಒಂದಾಗಿ ಬನ್ನಿ ಎಂದು ಎಲ್ಲರಿಗೂ ಹೇಳಿದ್ದೇನೆ, ಈಗಲೂ ಅದನ್ನೇ ಹೇಳುತ್ತೇನೆ. ಇದರಲ್ಲಿ ರಾಜಕೀಯವಾಗಿ ಲಾಭ ಮಾಡಿಕೊಳ್ಳುವ ಉದ್ದೇಶ ನಮಗಿಲ್ಲ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.