ಕಾಂಗ್ರೆಸ್ ವಿರುದ್ಧ ವೀರಶೈವ ಮಹಾಸಭಾ ಅಸಮಾಧಾನ
ಬೆಂಗಳೂರು, ಜೂ. 16 : ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ವೀರಶೈವ ಲಿಂಗಾಯತ ಸಮಾಜದ ಮುಖಂಡರಿಗೆ ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆಯಲ್ಲಿ ಪ್ರಾತಿನಿಧ್ಯ ನೀಡಲಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.
ಈ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾಸಭಾ ಕಾರ್ಯದರ್ಶಿ ಕೆ.ಎನ್.ಜಯಲಿಂಗಪ್ಪ ಅವರು, ಕಾಂಗ್ರೆಸ್ ಪಕ್ಷ ತಪ್ಪನ್ನು ಸರಿಪಡಿಸಿಕೊಂಡು ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ನೀಡದಿದ್ದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮಹಾಸಭಾ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ಹಾಲಿ ಅಧ್ಯಕ್ಷರು ಶಾಮನೂರು ಶಿವಶಂಕರಪ್ಪ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ತೋಟಗಾರಿಕಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಮನೂರು ಅಧ್ಯಕ್ಷರಾಗಿರುವ ಮಹಾಸಭಾ ಕಾಂಗ್ರೆಸ್ ವಿರುದ್ಧವೇ ಅಸಮಾಧಾನಗೊಂಡಿದೆ. [ವಿಧಾನ ಪರಿಷತ್ ಪ್ರವೇಶಿಸಿದ ಪರಮೇಶ್ವರ್, ಈಶ್ವರಪ್ಪ]
ಅಸಮಾಧಾನಕ್ಕೆ ಕಾರಣ : ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಮತ್ತು ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕ್ರಮವಾಗಿ ನಾಲ್ವರು ಹಾಗೂ ಇಬ್ಬರು ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ತಿಗೆ ಸರ್ಕಾರ ಐವರನ್ನು ನಾಮನಿರ್ದೇಶನ ಮಾಡುತ್ತಿದೆ ಆದರೆ ಇವುಗಳಲ್ಲಿ ವೀರಶೈವ ಲಿಂಗಾಯತ ಸಮಾಜದವರಿಗೆ ಆದ್ಯತೆ ನೀಡಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.
ರಾಜ್ಯಸಭೆ ಮತ್ತು ವಿಧಾನಪರಿಷತ್ ಸೇರಿ ಒಟ್ಟು 11 ಸ್ಥಾನಗಳಲ್ಲಿ ಒಂದು ಸ್ಥಾನವನ್ನೂ ವೀರಶೈವ-ಲಿಂಗಾಯತರಿಗೆ ನೀಡುತ್ತಿಲ್ಲ. ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ಕಳೆದ ಲೋಕಸಭಾ ಚುನಾವಣಾ ಫಲಿತಾಂಶದಿಂದ ಪಾಠ ಕಲಿತಿಲ್ಲ ಎಂದು ಮಹಾಸಭಾ ಆರೋಪಿಸಿದೆ.
ವೀರಶೈವರಿಗೆ ಆಗಿರುವ ಅನ್ಯಾಯವನ್ನು ಈಗಲಾದರೂ ಸರಿಪಡಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬೆಲೆ ತೆರಬೇಕಾಗುತ್ತದೆ. ತನ್ನ ತಪ್ಪು ತಿದ್ದಿಕೊಂಡು ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸದಿದ್ದರೆ ಸರ್ಕಾರ ಹಾಗೂ ಪಕ್ಷದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಮಹಾಸಭಾ ಎಚ್ಚರಿಕೆ ನೀಡಿದೆ.
ಸೋನಿಯಾ ಗಾಂಧಿಗೆ ಪತ್ರ " ಕರ್ನಾಟಕ ಕಾಂಗ್ರೆಸ್ ಧೋರಣೆಯನ್ನು ಪ್ರಶ್ನಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯಲು ಮಹಾಸಭಾ ಚಿಂತನೆ ನಡೆಸಿದೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷದ ನಾನಾ ಹುದ್ದೆಗಳಲ್ಲಿ ಲಿಂಗಾಯಿತರಿಗೆ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ಜಯಲಿಂಗಪ್ಪ ತಿಳಿಸಿದ್ದಾರೆ.












Click it and Unblock the Notifications