84ರ ವಯಸ್ಸಿನಲ್ಲಿ ರಾಜಕಾರಣಕ್ಕೆ ಗುಡ್ಬೈ ಹೇಳಿದ ಎಸ್ಸೆಂ ಕೃಷ್ಣ
ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಾಂಗ್ರೆಸ್ಸಿನಲ್ಲಿ ತಮ್ಮನ್ನು ಅವಗಣನೆ ಮಾಡುತ್ತಿರುವ ಬಗ್ಗೆ ಸೋನಿಯಾ ಅವರಿಗೆ ಬರೆದಿರುವ ಪತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬೇಸರ.
ಬೆಂಗಳೂರು, ಜನವರಿ 28: ಕಳೆದ 48 ವರ್ಷಗಳಿಂದಕಾಂಗ್ರೆಸ್ ಪಕ್ಷದ ನಿಷ್ಠಾವಂತ ರಾಜಕಾರಣಿಯಾಗಿದ್ದ, ಮಾಜಿ ಮುಖ್ಯಮಂತ್ರಿ ಎಂ.ಎಸ್. ಕೃಷ್ಣ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ.
ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ಪತ್ರ ಮುಖೇನ ತಮ್ಮ ಮನದಾಳದ ಮಾತನ್ನು ತಿಳಿಸಿರುವ ಅವರು, ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಸದಸ್ಯತ್ವಕ್ಕೂ ರಾಜಿನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದು, ತಾವು ಹೊಂದಿರುವ ಪಕ್ಷದ ಸದಸ್ಯತ್ವದ ಅವಧಿ ಮುಕ್ತಾಯವಾದ ನಂತರ ನವೀಕರಣಗೊಳಿಸದಿರಲು ನಿರ್ಧರಿಸಿರುವ ಬಗ್ಗೆಯೂ ಮನವರಿಕೆ ಮಾಡಿದ್ದಾರೆ.
ಅಲ್ಲದೆ, ನಿವೃತ್ತಿಯ ನಂತರ ಯಾವುದೇ ರಾಜಕೀಯ ಚಟುವಟಿಕೆ ನಡೆಸುವುದಿಲ್ಲ. ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳುವುದಿಲ್ಲವೆಂದರೂ ಅವರು ಆಶ್ವಾಸನೆ ನೀಡಿದ್ದಾರೆ.
ಭಾನುವಾರ ಪ್ರತ್ಯೇಕವಾಗಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ತಮ್ಮ ನಿವೃತ್ತಿಯನ್ನು ಅಧಿಕೃತವಾಗಿ ಅವರು ಘೋಷಿಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಅವಗಣನೆ ಮಾಡುತ್ತಿರುವ ಬಗ್ಗೆಯೂ ಅವರು ಪತ್ರದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆಂದು ಹೇಳಲಾಗಿದೆ.
ನಾಳೆ ಬೆಳಗ್ಗೆ ಸುದ್ದಿಗೋಷ್ಠಿ: ತಮ್ಮ ನಿವೃತ್ತಿಯ ಹಿನ್ನೆಲೆಯಲ್ಲಿ ತಮ್ಮನ್ನು ಸಂಪರ್ಕಿಸಿದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಶುಕ್ರವಾರ ಸೋನಿಯಾ ಅವರನ್ನು ಭೇಟಿಯಾಗಿದ್ದ ತಾವು ನಿವೃತ್ತಿಯ ಬಗ್ಗೆ ಸಮಾಲೋಚನೆ ನಡೆಸಿದ್ದು, ಅದರ ನಂತರವೇ ಈ ಬಗ್ಗೆ ನಿರ್ಧಾರ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾಗಿ ತಿಳಿಸಿದರು. ಅಲ್ಲದೆ, ಭಾನುವಾರ ಬೆಳಗ್ಗೆ 11:30 ಗಂಟೆಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸುವುದಾಗಿ ತಿಳಿಸಿದರು.
ಅನುಭವಿ ರಾಜಕಾರಣಿ: ನಾಲ್ಕು ದಶಕಗಳಿಂದ ಕಾಂಗ್ರೆಸ್ ನಲ್ಲಿ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಎಸ್.ಎಂ. ಕೃಷ್ಣ, 1999ರಿಂದ 2004ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅದಕ್ಕೂ ಮುನ್ನ, ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1992ರಿಂದ 1994ರವರೆಗೆ ಉಪ ಮುಖ್ಯಮಂತ್ರಿಯಾಗಿದ್ದರು.
ರಾಜ್ಯ ರಾಜಕಾರಣದ ಹೊರತಾಗಿಯೂ ರಾಷ್ಟ್ರ ಮಟ್ಟದಲ್ಲೂ ಮಿಂಚಿದ ಅವರು, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ 2009ರಿಂದ 2012ರವರೆಗೆ ವಿದೇಶಾಂಗ ಸಚಿವ ಸೇರಿದಂತೆ ಹಲವಾರು ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. 2004ರಿಂದ 2008ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.
ಪರಮೇಶ್ವರ್ ಪ್ರತಿಕ್ರಿಯೆ: ಎಸ್.ಎಂ. ಕೃಷ್ಣ ಅವರ ನಿವೃತ್ತಿಯ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್, ''ಕೃಷ್ಣಾ ಅವರು ಸಕ್ರಿಯ ರಾಜಕಾರಣದಿಂದ ನಿವೃತ್ತರಾದರೂ ಅವರು ನಮ್ಮ ಪಕ್ಷದ ಪರಮೋಚ್ಛ ನಾಯಕರು'' ಎಂದಿದ್ದಾರೆ.












Click it and Unblock the Notifications