ಡಿಕೆ ಶಿವಕುಮಾರ್ಗೆ ಸಂಬಂಧಿಸಿದ ವಿಡಿಯೊ ಬಹಿರಂಗಪಡಿಸಿದ ಎಚ್ಡಿಕೆ- ಏನಿದೆ ಅದರಲ್ಲಿ
ಬೆಂಗಳೂರು, ಮಾರ್ಚ್ 19: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಸಂಬಂಧಿಸಿದ ವಿಡಿಯೋವನ್ನ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಹಿರಂಗಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್ʼಗಳ ಲೋಡ್ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿಗಳನ್ನು ನಿಯೋಜಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಕೇಂದ್ರ ಆಯೋಗ ಏನು ಮಾಡುತ್ತಿದೆ?
ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಭಾನುವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದು ಆಯೋಗವನ್ನು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು; ಕಾಂಗ್ರೆಸ್ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್ʼಗಳ ಲೋಡ್ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಬಿಡುಗಡೆ ಮಾಡಿದರು.
ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮಿತಿಮೀರಿವೆ. ಕುಕ್ಕರ್ ಮತ್ತು ಹಣವನ್ನು ಅವ್ಯಾಹತವಾಗಿ ಹಂಚಲಾಗುತ್ತಿದೆ. ಮರಳವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯು ಮತದಾರರಿಗೆ ಹಂಚಲು ಇರಿಸಿದ್ದ ಕುಕ್ಕರ್ʼಗಳನ್ನು ಲೋಡ್ ಮಾಡಲಾಗಿದ್ದ ಎರಡು ಲಾರಿಗಳನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ. ಮಾಧ್ಯಮಗಳು ಕೂಡ ಅದನ್ನು ತೋರಿಸಿ ವರದಿ ಮಾಡಿವೆ.

ದೇಶದಲ್ಲಿ ಇಂಥ ಅಕ್ರಮ ಎಲ್ಲೇ ನಡೆದರೂ ಅದರ ವಿಡಿಯೋ ಅಥವಾ ಫೋಟೋ ತೆಗೆದು ಕಳಿಸಿದರೆ ಕೇವಲ ನೂರು ನಿಮಿಷದಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಮೂರು ಗಂಟೆ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದರು. ಈ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ 48 ಗಂಟೆ ಕಳೆದಿದೆ. ಇನ್ನೂ ಕ್ರಮ ಆಗಿಲ್ಲ ಯಾಕೆ? ಎಂದು ಕುಮಾರಸ್ವಾಮಿ ಅವರು ಆಯೋಗವನ್ನು ಪ್ರಶ್ನಿಸಿದರು. ಅಲ್ಲದೆ; ಕುಕ್ಕರ್ ಹಂಚಿಕೆಯ ದಾಖಲೆಯ ವಿಡಿಯೋ, ಫೋಟೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು.
ಈ ಬಗ್ಗೆ ತಹಸೀಲ್ದಾರ್ ಅವರಿಗೆ ದೂರು ಕೊಟ್ಟರೆ ಹೌದಾ..? ನನ್ನ ಗಮನಕ್ಕೆ ಬಂದೇ ಇಲ್ಲ ಎನ್ನುತ್ತಾರೆ. ವಾಣಿಜ್ಯ ತೆರಿಗೆ ಇಲಾಖೆಗೆ ಮಾಹಿತಿ ಕೊಟ್ಟರೆ ಜಿಲ್ಲಾಧಿಕಾರಿಗೆ ತಿಳಿಸುತ್ತೇವೆ ಎನ್ನುತ್ತಾರೆ. ಜಿಲ್ಲಾಧಿಕಾರಿ ಅವರನ್ನು ಪ್ರಶ್ನಿಸಿದರೆ ನಮ್ಮ ಗಮನಕ್ಕೆ ಬಂದಿಲ್ಲ, ಪರಿಶೀಲನೆ ನಡೆಸುತ್ತೇವೆ ಎಂದು ಹಾರಿಕೆಯ ಉತ್ತರ ಕೊಡುತ್ತಾರೆ. ಚುನಾವಣೆ ಎಂದರೆ ಇದೇನಾ? ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಆಯೋಗವು ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.












Click it and Unblock the Notifications