'ವಿದ್ಯಾಗಮ' ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಸುರೇಶ್ ಕುಮಾರ್!

ಬೆಂಗಳೂರು. ಅ. 09: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ಇಡೀ ರಾಜ್ಯಾದ್ಯಂತ 'ವಿದ್ಯಾಗಮ' ಯೋಜನೆ ಕುರಿತು ಪಾಲಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಜೊತೆಗೆ ಬೆಳಗಾವಿಯ ತಿಮ್ಮಾಪುರದ 23 ಮಕ್ಕಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಕೂಡ ಮಕ್ಕಳ ಪಾಲಕರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ.

ರಾಜ್ಯಾದ್ಯಂತ ವಿವಿಧ ತರಗತಿಗಳ ಒಟ್ಟು 49.34 ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳು 'ವಿದ್ಯಾಗಮ' ಯೋಜನೆಯ ಮೂಲಕ ಕೊರೊನಾ ವೈರಸ್ ಆತಂಕದ ಸಂದರ್ಭದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯಾಗಮ ಯೋಜನೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾಗಮ ಯೋಜನೆಯನ ಕುರಿತು ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು 'ವಿದ್ಯಾಗಮ'ದ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ.

ಶಾಲೆಯಿಂದ ಸೋಂಕು ಹರಡಿಲ್ಲ

ಶಾಲೆಯಿಂದ ಸೋಂಕು ಹರಡಿಲ್ಲ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ ಒಂದು ತಿಂಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದು, ಅವರು ಈಗ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಆರೋಗ್ಯದಿಂದಿದ್ದಾರೆ. ಈ ಅವಧಿಯಲ್ಲಿ ಶಾಲೆಯ ಯಾವುದೇ ಶಿಕ್ಷಕರಿಗೆ ಯಾವುದೇ ರೀತಿಯ ಸೋಂಕು ತಗುಲಿರುವುದಿಲ್ಲ.

ಸೆ. 22ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರ‍್ಯಾಂಡಮ್ ಆಗಿ ಸುಮಾರು 203 ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದಾಗ 4 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಶಾಲಾವರಣದಲ್ಲಿ ಈ ಸೋಂಕು ತಗುಲಿಸಿಕೊಂಡಿರುವುದು ಸಾಧ್ಯವಿಲ್ಲ ಎಂಬ ಅಂಶಗಳನ್ನು ಸ್ಥಳೀಯ ಜಿಲ್ಲಾ ಉಪನಿರ್ದೇಶಕರು ದೃಢಪಡಿಸಿದ್ದಾರೆ. ಹಾಗಾಗಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಯೋಜನೆಯ ವೈಫಲ್ಯವಲ್ಲ

ಯೋಜನೆಯ ವೈಫಲ್ಯವಲ್ಲ

ಎಲ್ಲಿಯೂ ವಿದ್ಯಾರ್ಥಿಗಳಿಗೆ ವಿದ್ಯಾಗಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಕಾರಣಕ್ಕಾಗಿ ಕೋವಿಡ್ ಸೋಂಕು ತಗುಲಿರುವುದು ವರದಿಯಾಗಿಲ್ಲ. ಹೀಗಾಗಿ ಶಾಲಾ ಮಕ್ಕಳಿಗೆ ಸುರಕ್ಷಿತ ಕ್ರಮಗಳೊಂದಿಗೆ ಕಲಿಕೆಯನ್ನು ಮುಂದುವರೆಸುವ 'ವಿದ್ಯಾಗಮ' ಯೋಜನೆಯ ವೈಫಲ್ಯವೆಂಬಂತೆ ಬಿಂಬಿತವಾಗುತ್ತಿರುವುದು ಸರಿಯಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

'ವಿದ್ಯಾಗಮ' ಸುರಕ್ಷಿತ

'ವಿದ್ಯಾಗಮ' ಸುರಕ್ಷಿತ

ನಿಗದಿತ ಕನಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಸೂಚಿತ ಶಿಕ್ಷಕರ ಮಾಗದರ್ಶನದಡಿ ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಕಲಿಕೆಯಲ್ಲಿ ಮುಂದುವರೆದಿದ್ದು, ವಿದ್ಯಾಗಮದ ಕಾರಣ ಈ ಸೋಂಕು ತಗಲಿರುತ್ತದೆನ್ನುವುದು, ಶಿಕ್ಷಕರು ವಿದ್ಯಾಗಮದ ಕಾರಣವೇ ಸೋಂಕು ಹೊಂದಿರುವ ರೀತಿಯಲ್ಲಿ ಬಿಂಬಿಸುವುದು ನಾವು ವಿದ್ಯಾರ್ಥಿ ಸಮೂಹಕ್ಕೆ ಎಸಗುವ ಅನ್ಯಾಯವಾಗುತ್ತದೆ.

ಈಗಾಗಲೇ ಹೆಚ್ಚುತ್ತಿರುವ ಸಾಮಾಜಿಕ ಪಿಡುಗುಗಳ ನಡುವೆ ವಿದ್ಯಾರ್ಥಿಗಳನ್ನು ಸುರಕ್ಷಿತವಾದ ವಾತಾವರಣದಲ್ಲಿ ಕಲಿಕೆಗೆ ತೊಡಗಿಸಿಕೊಳ್ಳದೇ ಹೋದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಚಾರವಾದಂತಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಅಪ ಪ್ರಚಾರ ಬೇಡ

ಅಪ ಪ್ರಚಾರ ಬೇಡ

ರಾಜ್ಯದ ಯಾವುದೇ ಶಾಲೆಯಲ್ಲಿಯೂ ವಿದ್ಯಾಗಮ ದುರುಪಯೋಗವಾಗುತ್ತಿಲ್ಲ. ಕಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ತರಬೇತಿ ಹೊಂದಿದ ವೃತ್ತಿಪರರಾಗಿದ್ದಾರೆ ಹಾಗೆಯೇ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಸೂಕ್ತ ಅರ್ಹತೆ ಹೊಂದಿದವರಾಗಿದ್ದಾರೆ ಎಂದಿರುವ ಸಚಿವರು, ವಿದ್ಯಾಗಮದಂತಹ ಮಹತ್ವದ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಬೇಡ ಎಂದು ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.

ವಿದ್ಯಾಗಮ ಕಾರಣವಲ್ಲ

ವಿದ್ಯಾಗಮ ಕಾರಣವಲ್ಲ

ಬೆಳಗಾವಿಯ ರಾಮದುರ್ಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ನೂರಾರು ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ ಈ 23 ಬಾಲಕರೂ ಇದ್ದಾರೆ. ಇವರಿಗೆ ವಿದ್ಯಾಗಮದ ಕಾರಣ ಸೋಂಕು ತಗುಲಿದೆಯೆಂದು ಯಾವ ಆಧಾರವೂ ಇಲ್ಲವೆಂದು ಅಲ್ಲಿನ ಉಪನಿರ್ದೇಶಕರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟನೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+