ಆನಂದ್ ಸಿಂಗ್ ದಿಢೀರ್ ರಾಜೀನಾಮೆ: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ?
Recommended Video
ಬೆಂಗಳೂರು, ಜುಲೈ 1: ತೂಗುಯ್ಯಾಲೆಯಲ್ಲಿದ್ದ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಅತ್ತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಲ್ಲಿರುವಾಗಲೇ ಇತ್ತ ಕಾಂಗ್ರೆಸ್ನ ಮತ್ತೊಂದು ವಿಕೆಟ್ ಪತನಗೊಂಡಿದೆ.
ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಆನಂದ್ ಸಿಂಗ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ದೊರಕಿಲ್ಲ.
ಬಿಜೆಪಿಯಿಂದ 10 ಕೋಟಿ ಆಮಿಷಕ್ಕೊಳಗಾದ ಜೆಡಿಎಸ್ ಶಾಸಕ ಯಾರು?
ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಅವರು ಬಿಜೆಪಿ ಸೇರ್ಪಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ಹೇಳಲಾಗುತ್ತಿದೆ.
ಆನಂದ್ ಅವರ ರಾಜೀನಾಮೆ ರಾಜ್ಯದಲ್ಲಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಸಂಚಕಾರ ತರುವ ಸೂಚನೆ ನೀಡಿದೆ. ಏಕೆಂದರೆ ಆನಂದ್ ಸಿಂಗ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ನ ಇನ್ನೂ ಏಳು ಮಂದಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಮತ್ತೊಂದು ಸುತ್ತು ರಾಜಕೀಯ ಅಲ್ಲೋಲ ಕಲ್ಲೋಲ ನಡೆಸಲು ಹೊರಟ ಜಾರಕಿಹೂಳಿ?
ಆನಂದ್ ಸಿಂಗ್ ಅವರು ಭಾನುವಾರ ದೆಹಲಿಗೆ ತೆರಳಿದ್ದರು. ಈ ವೇಳೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸಾಮೂಹಿಕ ರಾಜೀನಾಮೆಗೆ ಸಿದ್ಧ?
ಆರಂಭದಿಂದಲೂ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯ ಏಳುತ್ತಲೇ ಇದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವರ ಬೆಂಬಲಿಗ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಕಂಪ್ಲಿ ಶಾಸಕ ಗಣೇಶ್, ಹಿರೇಕೆರೂರು ಶಾಸಕ ಬಿಸಿ ಪಾಟೀಲ್, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಕೂಡ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಮೂರು ತಂಡಗಳಲ್ಲಿ ರಾಜೀನಾಮೆ?
ಕಾಂಗ್ರೆಸ್ನ ಅತೃಪ್ತ ಶಾಸಕರು ಮೂರು ತಂಡಗಳಾಗಿ ರಾಜೀನಾಮೆ ನೀಡಲಿದ್ದಾರೆ. ಅದರಲ್ಲಿ ಮೊದಲ ಹಂತವಾಗಿ ಅನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಬಳಿಕ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಅವರ ತಂಡ ರಾಜೀನಾಮೆ ಸಲ್ಲಿಸಲಿದೆ. ಅದರ ನಂತರ ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್ ಅವರ ನೇತೃತ್ವದ ತಂಡ ರಾಜೀನಾಮೆ ಸಲ್ಲಿಸಲಿದೆ ಎಂದು ಹೇಳಲಾಗುತ್ತಿದೆ.
ಅತೃಪ್ತರೊಂದಿಗೆ ರಮೇಶ್ ಜಾರಕಿಹೊಳಿ ಭೇಟಿ: ಸರ್ಕಾರದ ಭವಿಷ್ಯ ನಿರ್ಧಾರ?
ಆಷಾಢದಲ್ಲಿ ಆಘಾತ
ಆಷಾಢ ಶುರುವಾಗುವ ಒಂದು ದಿನ ಮೊದಲೇ ಸಮ್ಮಿಶ್ರ ಸರ್ಕಾರಕ್ಕೆ ಆನಂದ್ ಸಿಂಗ್ ಆಘಾತ ನೀಡಿದ್ದಾರೆ. ರಾಜೀನಾಮೆ ಪರ್ವಕ್ಕೆ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ನಾಂದಿ ಹಾಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್ನ ಸೋಲರಿಯದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಕ್ ನೀಡಿದ್ದರು. ಈಗ ಮತ್ತೊಂದು ಆಘಾತ ಕಾಂಗ್ರೆಸ್ಗೆ ಎದುರಾಗಿದೆ.
ಜೆಡಿಎಸ್ ಶಾಸಕರಿಂದಲೂ ರಾಜೀನಾಮೆ?
ಕಾಂಗ್ರೆಸ್ ಶಾಸಕರು ಮಾತ್ರವಲ್ಲದೆ, ಜೆಡಿಎಸ್ ಶಾಸಕರೂ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಜಿಗಿಯಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಅವರಲ್ಲಿ ಇತ್ತೀಚೆಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್ ವಿಶ್ವನಾಥ್ ಅವರ ಹೆಸರೂ ಇದೆ. ಮಾತ್ರವಲ್ಲ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಭಾವ್ಯ ಹೆಸರು ಎಂದು ಪರಿಗಣಿಸಲಾಗಿರುವ ಎಚ್ಕೆ ಕುಮಾರಸ್ವಾಮಿ ಅವರೂ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಕೆಆರ್ ಪೇಟೆ ಶಾಸಕ ನಾರಾಯಣ ಗೌಡ, ಪಿರಿಯಾಪಟ್ಟಣ ಶಾಸಕ ಮಹದೇವು, ಟಿ. ನರಸೀಪುರ ಶಾಸಕ ಅಶ್ವಿನ್ ಕುಮಾರ್ ಅವರೂ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಸರ್ಕಾರ ರಚಿಸಲು ಯಡಿಯೂರಪ್ಪ ಸಿದ್ಧ?
ಕಾಂಗ್ರೆಸ್ ಶಾಸಕ ಅನಂದ್ ಸಿಂಗ್ ಅವರ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಾಹ್ನ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಆನಂದ್ ಸಿಂಗ್ ಅವರ ರಾಜೀನಾಮೆ ಕುರಿತು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ನಿರೀಕ್ಷೆಯಿದೆ. ಜತೆಗೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಬಿಜೆಪಿಗೆ ಬರಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ ಎಂಬ ಘೋಷಣೆ ಮಾಡುವ ಸಾಧ್ಯತೆ ಇದೆ.