ಕಾಂಗ್ರೆಸ್ ಸೇರುತ್ತೀನಿ ಅಂತಾ ಯಾರು ಹೇಳಿದ್ದು: ಆನಂದ್ ಸಿಂಗ್
ಹೊಸಪೇಟೆ, ಜನವರಿ 19: ಬಳ್ಳಾರಿಯಲ್ಲಿ ಬಿಜೆಪಿ ತನ್ನ ಹಿಡಿತವನ್ನು ಕಳೆದುಕೊಳ್ಳುತ್ತಿದೆ ಬಿ. ಶ್ರೀರಾಮುಲು ಹಾಗೂ ಗಾಲಿ ಜನಾರ್ದನ ರೆಡ್ಡಿ ಆಪ್ತರು ರಾಜಕೀಯದಿಂದ ವಿಮುಖರಾಗುತ್ತಿದ್ದು, ಕೆಲವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಆದರೆ, ಇಂಥ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶುಕ್ರವಾರದಂದು ಸ್ಪಷ್ಟಪಡಿಸಿದ್ದಾರೆ.
ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃಧಿಗೆ ಸಂಬಂಧಿಸಿದಂತೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿದ್ದು ನಿಜ, ಆದರೆ, ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದರು.
ಬಳ್ಳಾರಿ ಬಿಜೆಪಿಯಲ್ಲಿ ಕೆಲವರಿಗೆ ಅಸಮಾಧಾನವಿದೆ, ಕೆಲವರಲ್ಲಿ ಗೊಂದಲವಿದೆ. ಜನವರಿ ಮೊದಲ ವಾರ ನಡೆದ ಜನ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿಲ್ಲ. ಈ ಬಗ್ಗೆ ಬೆಂಗಳೂರಿಗೆ ತೆರಳಿದ್ದಾಗ ಸಿ.ಟಿ ರವಿ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕರ ಜತೆ ಸಂಪರ್ಕ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಕ್ಷೇತ್ರದ ಅಭಿವೃದ್ಧಿಗಾಗಿ, ಕೃಷಿ, ಉದ್ಯೋಗ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಅವರ ಬಳಿ ಹೋಗಿದ್ದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಸಂತೋಷ್ ಲಾಡ್ ಜತೆ ಕಾಣಿಸಿಕೊಂಡಿದ್ದನ್ನು ಈಗ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.