ವಿಜಯನಗರ ಜಿಲ್ಲೆ; ಯಡಿಯೂರಪ್ಪ ಕರೆದ ಸಭೆಯಲ್ಲಿ ಆಗಿದ್ದೇನು?
ಬೆಂಗಳೂರು, ಅಕ್ಟೋಬರ್ 02 : ತೀವ್ರ ವಿರೋಧಕ್ಕೆ ಕಾರಣವಾಗಿರುವ ಬಳ್ಳಾರಿಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಬುಧವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬಳ್ಳಾರಿ ಜನಪ್ರತಿನಿಧಿಗಳ ಸಭೆ ನಡೆಯಿತು. ಆರೋಗ್ಯ ಸಚಿವ ಬಿ. ಶ್ರೀರಾಮುಲು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ ಮಾಡುವ ಕುರಿತು ವಿವರವಾದ ಚರ್ಚೆ ನಡೆಯಿತು. ಅಂತಿಮವಾಗಿ ಯಾವುದೇ ತೀರ್ಮಾನವನ್ನು ಕೈಗೊಳ್ಳದೇ ಮತ್ತೊಮ್ಮೆ ಸಭೆ ಸೇರಲು ತೀರ್ಮಾನಿಸಿ ಯಡಿಯೂರಪ್ಪ ಸಭೆಯನ್ನು ಮುಂದೂಡಿದರು.

ಸಭೆಯ ಬಳಿಕ ಮಾತನಾಡಿದ ಸಚಿವ ಬಿ. ಶ್ರೀರಾಮುಲು, "ಜಿಲ್ಲೆ ರಚನೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇನ್ನೊಂದು ಬಾರಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲೆ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟಿದ್ದು" ಎಂದರು.
" ಬಳ್ಳಾರಿ ಜಿಲ್ಲೆಯ ಕಲಾವಿದರು, ಬುದ್ಧಿ ಜೀವಿಗಳು, ಸಾಹಿತಿಗಳ ಸಭೆ ಕರೆದು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ. ನಾಡಿನ ನೆಲ, ಜಲ, ಭಾಷೆಯ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲು ಯಡಿಯೂರಪ್ಪ ಸಮರ್ಥರಾಗಿದ್ದಾರೆ" ಎಂದು ಶ್ರೀರಾಮುಲು ಹೇಳಿದರು.
ವಿಜಯನಗರ ಜಿಲ್ಲಾ ರಚನೆಗೆ ಬಿಜೆಪಿ ಶಾಸಕರೇ ವಿರೋಧ ಮಾಡುತ್ತಿದ್ದಾರೆ. ಆದ್ದರಿಂದ, ಯಡಿಯೂರಪ್ಪ ಇಂದು ಬಳ್ಳಾರಿ ಭಾಗದ ಜನಪ್ರತಿನಿಧಿಗಳ ಸಭೆ ಕರೆದಿದ್ದರು. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಜಯನಗರ ಕ್ಷೇತ್ರದ ಅನರ್ಹ ಶಾಸಕ ಆನಂದ್ ಸಿಂಗ್ ಪ್ರತ್ಯೇಕ ಜಿಲ್ಲೆಯ ಮನವಿ ಮಾಡಿದ್ದರು. ಮನವಿ ಅನ್ವಯ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲಾ ರಚನೆ ಬಗ್ಗೆ ಚರ್ಚಿಸಲು ಟಿಪ್ಪಣಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದರು.
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆನಂದ್ ಸಿಂಗ್, "ಯಾವುದೇ ಆತುರದ ತೀರ್ಮಾನ ಬೇಡ. ಉಪ ಚುನಾವಣೆ ಬಳಿಕ ಸಭೆ ಕರೆದು ತೀರ್ಮಾನ ಮಾಡೋಣ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪ್ರತ್ಯೇಕ ಜಿಲ್ಲೆಯಾಗಬೇಕು ಎಂಬ ನನ್ನ ನಿಲುವಿಗೆ ಈಗಲೂ ಬದ್ಧ" ಎಂದು ಹೇಳಿದರು.
ಉದ್ದೇಶಿತ ಪ್ರಸ್ತಾವನೆಯಂತೆ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಲಾಗುತ್ತದೆ. ಹೊಸಪೇಟೆ ನೂತನ ಜಿಲ್ಲೆಯ ಕೇಂದ್ರಸ್ಥಾನವಾಗಲಿದೆ.
ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳು ಸೇರ್ಪಡೆಗೊಳ್ಳಲಿವೆ.











Click it and Unblock the Notifications