ವಿಜಯನಗರ ಶಾಸಕ ಆನಂದ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು, ಫೆಬ್ರವರಿ 04 : ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು.
ಸೋಮವಾರ ರಾತ್ರಿ 7.30ರ ಸುಮಾರಿಗೆ ಶೇಷಾದ್ರಿಪುರಂನಲ್ಲಿರುವ ಅಪೊಲೋ ಆಸ್ಪತ್ರೆಯಿಂದ ಆನಂದ್ ಸಿಂಗ್ ಡಿಸ್ಚಾರ್ಜ್ ಆದರು. ಪತ್ನಿ, ಮಕ್ಕಳು ಮತ್ತು 40 ಕ್ಕೂ ಅಧಿಕ ಬೆಂಬಲಿಗರು ಈ ಸಂದರ್ಭದಲ್ಲಿ ಆನಂದ್ ಸಿಂಗ್ ಜೊತೆಗಿದ್ದರು.
ಜನವರಿ 19ರಂದು ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆನಂದ್ ಸಿಂಗ್ ಅವರ ತಲೆ, ಕಣ್ಣು, ಎದೆ ಭಾಗಕ್ಕೆ ಪೆಟ್ಟಾಗಿತ್ತು. ಇನ್ನೂ ಮೂರು ದಿನಗಳ ಚಿಕಿತ್ಸೆ ಅಗತ್ಯವಿರುವಾಗಲೇ ಆನಂದ್ ಸಿಂಗ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಆನಂದ್ ಸಿಂಗ್ ಅವರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ಅವರು ಪೊಲೀಸರ ಕೈಗೆ ಸಿಕ್ಕಿಲ್ಲ.
ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸಮಿತಿಯನ್ನು ರಚನೆ ಮಾಡಿದೆ.












Click it and Unblock the Notifications