ಅಮಿತ್ ಶಾ, ಜೆಪಿ ನಡ್ಡಾರನ್ನು ಭೇಟಿ ಮಾಡಿದ ಬಿವೈ ವಿಜಯೇಂದ್ರ: ರಾಜ್ಯಾಧ್ಯಕ್ಷ? ವಿಪಕ್ಷ ನಾಯಕ? ದಟ್ಟಗೊಂಡ ಕುತೂಹಲ
ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಗಳಿಗೆ ಹಲವು ನಾಯಕರು ಪೈಪೋಟಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದು ಎರಡು ತಿಂಗಳು ಕಳೆದರೂ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬೆಳವಣಿಗೆ ನಡೆದಿಲ್ಲ. ಕುತೂಹಲಕರ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬಿವೈ ವಿಜಯೇಂದ್ರ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಯಡಿಯೂರಪ್ಪ ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ರಾಷ್ಟ್ರೀಯ ನಾಯಕರು ಮಾಹಿತಿ ಪಡೆದಿದ್ದಾರೆ ಎಂದು ಹೇಳಿದ್ದಾರೆ.

'ಅವರು ( ಅಮಿತ್ ಶಾ ಹಾಗೂ ಜೆಪಿ ನಡ್ಡಾ ) ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಸದ್ಯದ ಪರಿಸ್ಥಿತಿಯ ಬಗ್ಗೆ ವಿಜಯೇಂದ್ರ ಅವುರ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರಿಗೆ ವಿವರಿಸಿದ್ದಾರೆ. ಅದರಲ್ಲಿ ವಿಶೇಷವೇನೂ ಇಲ್ಲ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಇದೇ ವೇಳೆ ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ವಿಜಯೇಂದ್ರ ಅವರು, ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಷ್ಟೇ ಹೇಳಿದ್ದಾರೆ.
'ನಾನು ಶಾಸಕನಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಅವರ ಆಶೀರ್ವಾದ ಪಡೆದುಕೊಂಡೆ. ಶಾಸಕರಾಗಿ ಮತ್ತು ಪಕ್ಷದ ಉಪಾಧ್ಯಕ್ಷರಾಗಿ ಹೇಗೆ ಮುಂದುವರಿಯಬೇಕು ಎಂದು ಅವರೊಂದಿಗೆ ಚರ್ಚಿಸಿದ್ದೇನೆ. ವಿರೋಧ ಪಕ್ಷದ ನಾಯಕ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನಾನು ಏನನ್ನೂ ಚರ್ಚಿಸಿಲ್ಲ' ಎಂದು ವಿಜಯೇಂದ್ರ ಹೇಳಿದ್ದಾರೆ.

ದಟ್ಟಗೊಂಡ ಕುತೂಹಲ
ಬಿಜೆಪಿಯ ರಾಷ್ಟ್ರ ನಾಯಕರನ್ನು ವಿಜಯೇಂದ್ರ ಅವರು ಭೇಟಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಕುತೂಹಲ ದಟ್ಟಗೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ಚರ್ಚೆಗಳು ಮುನ್ನೆಲೆಗೆ ಬಂದಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಕುರಿತು ಮಾತುಕತೆ ನಡೆದಿದೆಯೇ ಎಂಬ ಗುಮಾಣಿಗಳು ಹರಡಿಕೊಂಡಿವೆ. ಅಥವಾ, ವಿಧಾನಸಭೆಯಲ್ಲಿ ಕಾಂಗ್ರೆಸ್ ಅನ್ನು ಬಗ್ಗುಬಡಿಯಲು ವಿಜಯೇಂದ್ರ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬಹುದೇ ಎಂಬ ಪ್ರಶ್ನೆಗಳು ಎದ್ದಿವೆ.
ಬಿಎಲ್ ಸಂತೋಷ್ ಬಣಕ್ಕೆ ಹಿನ್ನೆಡೆ?
ಒಂದು ವೇಳೆ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ, ಬಿಎಲ್ ಸಂತೋಷ್ ಅವರ ಬಣಕ್ಕೆ ಹಿನ್ನೆಡೆ ಉಂಟಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಬಿಜೆಪಿ ಮತ್ತೆ ಬಿಎಸ್ವೈ ಕುಟುಂಬಕ್ಕೆ ಮಣೆ ಹಾಕುವ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಚುನಾವಣೆ ಸೋಲಿಗೆ ಬಿಎಲ್ ಸಂತೋಷ್ ಅವರು ತೆಗೆದುಕೊಂಡ ತಪ್ಪು ನಿರ್ಧಾರಗಳೇ ಪಕ್ಷಕ್ಕೆ ಮುಳುವಾಗಿವೆ ಎಂದು ಬಿಎಸ್ವೈ ಬಣದ ಶಾಸಕರ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ರಾಷ್ಟ್ರ ನಾಯಕತ್ವ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.












Click it and Unblock the Notifications