ಕೃಷಿ ಕಾಯ್ದೆಗಳ ವಿರುದ್ಧದ ವಿರೋಧ ತಗ್ಗಿಸಲು ಬಿಜೆಪಿಯ ಭಾರಿ ತಂತ್ರ!
ಬೆಂಗಳೂರು, ಫೆ. 07: ಕೇಂದ್ರದ ಕೃಷಿ ಸುಧಾರಣಾ ಕಾಯಿದೆಗಳ ಕುರಿತು ಜನಜಾಗೃತಿ ಮೂಡಿಸಲು ಇನ್ನು 10 ದಿನಗಳ ಒಳಗಾಗಿ ರಾಜ್ಯದಲ್ಲಿ ಜನಜಾಗೃತಿ ವರ್ಚುವಲ್ ಸಭೆಗಳನ್ನು ನಡೆಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ತಿಳಿಸಿದರು. ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ ದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೃಷಿ ಸುಧಾರಣಾ ಮಸೂದೆಗಳ ಕುರಿತು ಪಟ್ಟಭದ್ರ ಹಿತಾಸಕ್ತಿಗಳು ತಪ್ಪು ಮಾಹಿತಿ ನೀಡುತ್ತಿವೆ. ಮಸಿ ಬಳಿಯುವ ಕೆಲಸ ನಡೆದಿದೆ. ಇದನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು.
ಹೊಸ ಕಾಯಿದೆಗಳಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಹೊಸತನ ಬರಲಿದೆ. ಬಹುಹಂತದ ಮಾರಾಟ ವ್ಯವಸ್ಥೆಯ ಬದಲಾಗಿ ವ್ಯಾಪಾರಿ- ರೈತರ ನಡುವೆ ನೇರವಾಗಿ ವ್ಯವಹಾರ ನಡೆದು ರೈತರ ಆದಾಯ ಹೆಚ್ಚಲಿದೆ ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಮತ್ತು ದೂರದೃಷ್ಟಿಯ ಚಿಂತನೆಗಳಿಂದ ದೇಶವು ಭ್ರಷ್ಟಾಚಾರ, ಹಗರಣ ಮುಕ್ತವಾಗಿ ಮುನ್ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸರಕಾರವು ರಾಜ್ಯವನ್ನು ಸರ್ವಾಂಗೀಣ ಪ್ರಗತಿಯತ್ತ ತೆಗೆದುಕೊಂಡು ಹೋಗುತ್ತಿದೆ ಎಂದು ವಿವರಿಸಿದರು.
ರಾಜ್ಯ ಸರಕಾರದ ಯೋಜನೆಗಳ ವಿವರವನ್ನು ಇನ್ನಷ್ಟು ಸಮಗ್ರ ಮತ್ತು ಪರಿಣಾಮಕಾರಿಯಾಗಿ ಮುಂದಿನ ದಿನಗಳಲ್ಲಿ ವೆಬ್ಸೈಟ್ಗಳ ಮೂಲಕ ಒದಗಿಸಲಾಗುವುದು. 2023ರಲ್ಲಿ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಕೇಂದ್ರ ಮತ್ತು ರಾಜ್ಯ ಸರಕಾರಗಳ ಉತ್ತಮ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.