ಕೃತಜ್ಞತೆ ಇಲ್ಲದೇ ಇರುವುದಕ್ಕೆ ಯಡಿಯೂರಪ್ಪ ಕೂಡಾ ಆತನನ್ನು ಮಂತ್ರಿ ಮಾಡಲಿಲ್ಲ
ಬೆಂಗಳೂರು, ಜ 13: ಕೊನೆಗೂ ಯಡಿಯೂರಪ್ಪನವರು ಮೂರನೇ ಬಾರಿ ಸಚಿವ ಸಂಪುಟ ವಿಸ್ತರಣೆಯನ್ನು ಮಾಡಿ ಮುಗಿಸಿದ್ದಾರೆ. ಏಳು ಶಾಸಕರು ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಬಂದ ಎಚ್.ವಿಶ್ವನಾಥ್ ಮತ್ತು ಮುನಿರತ್ನ ಅವರಿಗೆ ಸಚಿವ ಸ್ಥಾನ ಒಲಿಯಲಿಲ್ಲ. ಸಚಿವ ಸ್ಥಾನಕ್ಕಾಗಿ ಭಾರೀ ಒತ್ತಡವನ್ನು ಹೇರಿದರೂ, ವಿಶ್ವನಾಥ್ ಗೆ ಸ್ಥಾನ ಸಿಗಲಿಲ್ಲ.
ಇದರಿಂದ ಸ್ವಾಭಾವಿಕವಾಗಿ ಸಿಟ್ಟಿಗೆದ್ದಿರುವ ವಿಶ್ವನಾಥ್, ಸಿಎಂ ಯಡಿಯೂರಪ್ಪನವರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. "ರಾಜ್ಯದಲ್ಲಿ ಯಾವ ನಾಯಕನಿಗೂ ಕೃತಜ್ಞತೆ ಇಲ್ಲ. ಆ ಸಿದ್ದರಾಮಯ್ಯನನ್ನು ಕರೆದುಕೊಂಡು ಬಂದ್ವಿ, ಅವರೂ ಹೇಳಲಿಲ್ಲ. ಯಡಿಯೂರಪ್ಪಗೆ ತ್ಯಾಗ ಮಾಡಿದ್ವಿ ಅವರೂ ಹೇಳಲಿಲ್ಲ. ಯಡಿಯೂರಪ್ಪ ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ. ತಾವು ಕೊಟ್ಟಿದ್ದ ಮಾತು ಕಳೆದುಕೊಂಡಿದ್ದಾರೆ"ಎಂದು ವಿಶ್ವನಾಥ್ ಬೇಸರ ವ್ಯಕ್ತ ಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಈ ಸಂಬಂಧ ಟ್ವೀಟ್ ಅನ್ನು ಮಾಡಿ, ವಿಶ್ವನಾಥ್ ಗೆ "ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕಾಗಿಯೇ ಯಡಿಯೂರಪ್ಪ ಕೂಡಾ ಅವರನ್ನು ಸಚಿವರನ್ನಾಗಿ ಮಾಡಲಿಲ್ಲ"ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮಾಡಿದ ಟ್ವೀಟ್ ಹೀಗಿದೆ:

ವಿಶ್ವನಾಥ್ ಗೆ ಕೃತಜ್ಞತೆ ಇಲ್ಲ
"ಹೆಚ್. ವಿಶ್ವನಾಥ್ ಅವರು ತಮಗೆ ಲೋಕಸಭೆಗೆ ಟಿಕೆಟ್ ಕೊಡಿಸಿದ್ದು, 2008ರಲ್ಲಿ ವಿಧಾನಸಭೆಗೆ ಟಿಕೆಟ್ ಕೊಡಿಸಿದ್ದು ಯಾರು ಎಂಬುದನ್ನು ನೆನಪು ಮಾಡಿಕೊಂಡು ಹೇಳಲಿ, ಆ ಮೇಲೆ ನನ್ನ ವಿರುದ್ಧ ಮಾತನಾಡಲಿ. ಕೃತಜ್ಞತೆ ಇಲ್ಲದೆ ಇರುವ ಕಾರಣಕ್ಕೆ @BSYBJP ಅವರೂ ಇವರನ್ನು ಮಂತ್ರಿ ಮಾಡಿಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ
"ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ" - ಸಿದ್ದರಾಮಯ್ಯ ಟ್ವೀಟ್.

ದೆಹಲಿಯಲ್ಲಿ ರೈತರ ಪ್ರತಿಭಟನೆ, ಮೋದಿಯ ಹಠಮಾರಿ ಧೋರಣೆ
"ಕಳೆದ 48 ದಿನಗಳಿಂದ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ
@narendramodi ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ".
"ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ @BSYBJP ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ಪೂರ್ತಿ ವರ್ಷ ಮುಖ್ಯಮಂತ್ರಿಯಾಗಿದ್ದಾರಾ?" ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರಶ್ನೆ.
Recommended Video

ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ
"ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೋಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಸಂಸ್ಕೃತಿ, ಆಹಾರ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು".
"ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ ಎಂದು @BSYBJP ಹೇಳಿದ್ದಾರೆ. ಆದರೆ ನಾನು ಈವರೆಗೆ ಗೋಮಾಂಸವನ್ನು ತಿಂದಿಲ್ಲ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications