ಒಕ್ಕಲಿಗ ಅಸ್ಮಿತೆ ರಾಜಕಾರಣ: ಜೆಡಿಎಸ್- ಬಿಜೆಪಿ ನಡುವೆ ಭುಗಿಲೆದ್ದ ಸಂಘರ್ಷ
ಬೆಂಗಳೂರು, ನವೆಂಬರ್ 12: ಕರ್ನಾಟಕ ಬಿಜೆಪಿ ಸರ್ಕಾರ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಕೈಯಿಂದ ಅನಾವರಣಗೊಳಿಸಿದೆ. ಇದರಿಂದ ಒಕ್ಕಲಿಗರ ಬೆಂಬಲ ಇರುವ ಜೆಡಿಎಸ್ಗೆ ಸಹಜವಾಗೇ ಮತ ವಿಭಜನೆಯ ಆತಂಕ ಎದುರಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೀಗಾಗಿ, ಆ ಆತಂಕವನ್ನು ಪರೋಕ್ಷವಾಗಿ ಟ್ವೀಟ್ ಮೂಲಕ ಜೆಡಿಎಸ್ ಹೊರಹಾಕಿದೆ ಎನ್ನಲಾಗುತ್ತಿದೆ. ಬಿಜೆಪಿ ನಾಯಕರು ಸಮಾರಂಭಕ್ಕೆ ಮಾಜಿ ಪ್ರಧಾನಿ, ಒಕ್ಕಲಿಗರ ಹಿರಿಯ ಮುಖಂಡರ ಎಚ್.ಡಿ.ದೇವೇಗೌಡ ಅವರನ್ನು ಆಹ್ವಾನಿಸಿಲ್ಲ. ಕಾಟಾಚಾರಕ್ಕೆ ತಡವಾಗಿ ಆಹ್ವಾನಿಸಲಾಗಿದೆ ಎಂದು ಅದು ದೂರಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023 ಕೆಲವೇ ತಿಂಗಳು ಇರುವ ಹೊತ್ತಿನಲ್ಲಿ ಬಿಜೆಪಿ ರಾಜ್ಯದ ದೊಡ್ಡ ಸಮುದಾಯಗಳಲ್ಲಿ ಒಂದಾದ ಒಕ್ಕಲಿಗ ಸಮುದಾಯವನ್ನು ಸೆಳೆಯಲು ಯತ್ನಿಸುತ್ತಿದೆ. ಕೆಂಪೇಗೌಡರ ಹೆಸರಿನಲ್ಲಿ ಬಿಜೆಪಿಯ ಈ ಯತ್ನ ಜೆಡಿಎಸ್ನ ತಳಮಳಕ್ಕೆ ಹಾಗೂ ವಿಪಕ್ಷಗಳ ಒಕ್ಕಲಿಗ ಸಮುದಾಯದ ನಾಯಕರ ನಿದ್ದೆಗೆಡಿಸಲು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಜೆಡಿಎಸ್ನಿಂದ ಸಮಯಸಾಧಕ ಬುದ್ಧಿ ಪ್ರದರ್ಶನ: ಬಿಜೆಪಿ
ಸದ್ಯ ಜೆಡಿಎಸ್ ಸರಣಿ ಟ್ವಿಟ್ ವಿರುದ್ಧ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಲಾಗಿದೆ. ಜೊತೆಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ.
ಹೀಗಿದ್ದರೂ ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ. ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ ಸಲ್ಲಿಸಿದ ಸಾಧಕರಾದಿಯಾಗಿ ಕರ್ನಾಟಕದ ಕಟ್ಟ ಕಡೆಯವರನ್ನೂ ಮರೆಯದೇ, ಹಿಂಬಾಲಿಸಿ ಬಿಜೆಪಿ ಗುರುತಿಸಿದೆ ಎಂದು ತಿರುಗೇಟು ನೀಡಿದೆ.
ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್ಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಬಿಜೆಪಿ ಕಿಡಿ ಕಾರಿದೆ.
ತಪ್ಪನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ: ಜೆಡಿಎಸ್
ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಪ್ರಗತಿ ಪ್ರತಿಮೆ ಅನಾವರಣದ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್ಡಿ ದೇವೇಗೌಡ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸಲಾಗುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದ ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಜಡಿಎಸ್ ಸರಣಿ ಟ್ವಿಟ್ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು ಯಾವಾಗ?. ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಎಂದು ಪ್ರಶ್ನಿಸಲಾಗಿದೆ.
ಪತ್ರದಲ್ಲಿ ಮಾಜಿ ಪ್ರಧಾನಿ ಹೆಸರು ಕೊನೆಯಲ್ಲಿ ಬರೆಯಲಾಗಿದೆ
ಮುಖ್ಯಮಂತ್ರಿಗಳು ಬರೆದ 'ಘನವೆತ್ತ' ಪತ್ರವನ್ನೊಮ್ಮೆ 'ಸಂಘಸಂಸ್ಕಾರ'ದ ಬಿಜೆಪಿಗರು ನೋಡಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರನ್ನು ಎಲ್ಲಿ ಬರೆಯಲ್ಪಟ್ಟಿದೆ?. ಕೊನೆಯಲ್ಲಿ ಬರೆಯಲಾಗಿದೆ. ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಲಾಗಿದೆ. ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ. ಹಾಗಾದರೆ ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ?. ಜವಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ? ಎಂದು ಜೆಡಿಎಸ್ ಖಾರವಾಗಿ ನುಡಿದಿದೆ.
ಮುಖ್ಯಮಂತ್ರಿಗಳೇ ಸತ್ಯ ಹೇಳಲಿ
ಈ ವಿಷಯದಲ್ಲಿ ಸುಳ್ಳಾಡುವುದು ಏನಿದೆ?. ಈ ಬಗ್ಗೆ ಮುಖ್ಯಮಂತ್ರಿಗಳೇ ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಆ ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. ಕನ್ನಡದ ಆಸ್ಮಿತೆ ಪ್ರಶ್ನೆ ಬಗ್ಗೆ ಮಾತನಾಡುವ ಬಿಜೆಪಿಗೆ ನಾಚಿಕೆಯಾಗಬೇಕು. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ ಹಾಕಿ ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು ಎಂದು ಜೆಡಿಎಸ್ ಕಿಡಿಕಾರಿದೆ.