Voter Data Theft: ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಕಾಂಗ್ರೆಸ್
ಬೆಂಗಳೂರು, ನವೆಂಬರ್ 19: ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಾರ್ತಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಈ ನಿಟ್ಟಿನಲ್ಲಿ ಶನಿವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆ.ಆರ್. ಸರ್ಕಲ್ ಸಮೀಪವಿರುವ ಕೇಂದ್ರ ಚುನಾವಣಾ ಆಯೋಗಕ್ಕೆ ತೆರಳಿ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಲಿದ್ದಾರೆ.
ಇನ್ನೂ ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಕಳವು ಮಾಡಿದೆ ಎಂದು ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಕಾಂಗ್ರೆಸ್ ದೂರು ನೀಡಿದೆ. ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮತದಾನ ಜಾಗೃತಿ ಹೆಸರಿನಲ್ಲಿ ಮತದಾರರ ಖಾಸಗಿ ಮಾಹಿತಿಗಳಿಗೆ ಕನ್ನ ಹಾಕಿದ್ದು, ಇದನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂಬುವುದು ಕಾಂಗ್ರೆಸ್ ಪ್ರಬಲ ಆರೋಪವಾಗಿದೆ.
ಈಗಾಗಲೇ ಚಿಲುಮೆ ಸಂಸ್ಥೆಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಅಲ್ಲದೆ ಚುನಾವಣಾ ಆಯೋಗ ಕೂಡಾ ತನಿಖೆ ನಡೆಸುವಂತೆ ಸೂಚನೆ ನೀಡಿದೆ. ಆದರೆ ಮತಪಟ್ಟಿ ಹಗರಣದಲ್ಲಿ ರುವಾರಿಗಳ ರಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಯತ್ನ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಇನ್ನೂ ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಉಡಾಫೆ ಉತ್ತರ ನೀಡುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದರು.

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದಾಗಲೇ ಬಿಬಿಎಂಪಿಗೆ ಅರಿವಾಗಬೇಕಿತ್ತು. ಆದರೆ, ಆಗಿಲ್ಲ ಎಂದರೆ ಬಿಬಿಎಂಪಿ ಇದರಲ್ಲಿ ಭಾಗಿಯಾಗಿದೆ ಎಂದು ಅರ್ಥ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅವರು ಹಣಕಾಸು ಸಾಮರ್ಥ್ಯವೇನು? ಎಷ್ಟು ಜನರು ಉದ್ಯೋಗಿಗಳಿದ್ದಾರೆ? ಎಂಬ ಬಗ್ಗೆ ತನಿಖೆ ಆಗಬೇಕು ಎಂದು ಸಿದ್ದರಾಮಯ್ಯ ಈಗಾಗಲೇ ಆಗ್ರಹಿಸಿದ್ದಾರೆ.

ಚಿಲುಮೆ ಸಂಸ್ಥೆಯ ಅಕ್ರಮ ಬಯಲಿಗೆ ಬಂದ ಬೆನ್ನಲ್ಲೇ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಹೆಸರನ್ನು ಡಿಲೀಟ್ ಮಾಡಿರುವ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಹೆಸರನ್ನೇ ಮತದಾರರ ಪಟ್ಟಿಯಲ್ಲಿ ಡಿಲೀಟ್ ಮಾಡಲಾಗಿದೆ. ಇನ್ನು 2016 ರಲ್ಲಿ ಮೃತಪಟ್ಟವರ ಹೆಸರು ಇನ್ನೂ ಪಟ್ಟಿಯಲ್ಲಿ ಇಡಲಾಗಿದೆ ಎಂದು ಆರ್.ಆರ್. ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications