ಮೇ 10ರಂದು ಮತದಾನ; ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗೆ ನಿರ್ಬಂಧ
ಬೆಂಗಳೂರು, ಮೇ 06; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10ರ ಬುಧವಾರ ನಡೆಯಲಿದೆ. 5,30,85,566 ಜನರು ಈ ಬಾರಿಯ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರು. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಮತದಾನದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಮೇ 10ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ ಮೇ 8ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ಗಂಟೆಯ ತನಕ ಈ ನಿಯಮಗಳು ಜಾರಿಯಲ್ಲಿ ಇರುತ್ತವೆ.

48 ಗಂಟೆಗಳ ಮೊದಲು ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ದೂರದರ್ಶನದಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತಿಲ್ಲ.
ನಿಯಮ ಉಲ್ಲಂಘಿಸಿದರೆ ಕ್ರಮ; ಈ ರೀತಿ ಮಾಡುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125ರಂತೆ ನಿರ್ಬಂಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ವಿದ್ಯುನ್ಮಾನ ವಾಹಿನಿ, ಕೇಬಲ್ ಟಿವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
ಎಕ್ಸಿಟ್ ಪೋಲ್ ನಿಷೇಧ: ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿವಿ ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಸೂಚಿಸಲಾಗಿದೆ.
ಮೇ 10ರಂದು ಮತದಾನ ನಡೆಯಲಿದ್ದು, ಮೇ 8ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಆಯಾ ಮತಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರಚಾರಕರು ಆ ಮತಕ್ಷೇತ್ರದಲ್ಲಿ ಇರುವಂತಿಲ್ಲ.
ಈ ಕುರಿತು ಸಂಚಾರಿ ಸ್ಕ್ವಾಡ್ ತಂಡದವರು ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾ ಲಾಡ್ಜ್, ವಸತಿಗೃಹ, ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಪರಿಶೀಲಿಸಲು ಹಾಗೂ ಮಾಲೀಕರಿಗೆ ತಿಳುವಳಿಕೆ ನೀಡಲು ಚುನಾವಣಾ ಆಯೋಗ ಈಗಾಗಲೇ ನಿರ್ದೇಶನಗಳನ್ನು ನೀಡಿದೆ.
ಮತದಾನದ ದಿನ ಎಲ್ಲಾ ಅರ್ಹರು ತಪ್ಪದೇ ಮತದಾನ ಮಾಡಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ, ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಖಾಸಗಿ ಸಂಸ್ಥೆಗಳಿಗೆ ತುರ್ತು ಸೇವೆಗಳನ್ನು ಹೊರತುಪಡಿಸಿ ಸರ್ಕಾರವು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿರುತ್ತದೆ. ಈ ಆದೇಶ ಪಾಲನೆಯಾಗುವಂತೆ ಸಹ ಗಮನ ಹರಿಸಲಾಗಿದೆ.
ರಾಜ್ಯದ ಎಲ್ಲ ಮತದಾರರು ಮತದಾನದ ದಿನದಂದು ತಪ್ಪದೇ ಮತದಾನ ಮಾಡಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ. ಅಲ್ಲದೇ ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇ 9ರ ತನಕ ನಡೆಸಲಾಗುತ್ತದೆ.












Click it and Unblock the Notifications