ಮತದಾನದ 48 ಗಂಟೆ ಮೊದಲು ವಿಶೇಷ ನಿಯಮಗಳು, ಯಾವುವು?
ಬೆಂಗಳೂರು, ಏಪ್ರಿಲ್ 30; ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಮತದಾನ ಮೇ 10ರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗ ಶಾಂತಿಯುತ ಮತದಾನಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ.
ಚುನಾವಣೆಗೆ ಬಹಿರಂಗ ಪ್ರಚಾರ ಮುಗಿದ ಬಳಿಕ ಕೆಲವು ವಿಶೇಷ ನಿಯಮಗಳು ಜಾರಿಗೆ ಬರುತ್ತವೆ. ಮತದಾನಕ್ಕಿಂತ 48 ಗಂಟೆಗಳ ಮೊದಲು ಈ ನಿಯಮಗಳು ಜಾರಿಯಲ್ಲಿರುತ್ತವೆ. ಇವುಗಳನ್ನು ಉಲ್ಲಂಘನೆ ಮಾಡಿದರೆ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕಾನೂನು ಕ್ರಮ ಜರುಗಿಸಲು ಅವಕಾಶವಿದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳು ಮೇ 8ರ ಸಂಜೆ 6 ಗಂಟೆಯಿಂದ ಮೇ 10ರ ಸಂಜೆ 6 ಗಂಟೆಯವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಹೊರಡಿಸುತ್ತಾರೆ. ಈ ಅವಧಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ/ ಸಮಾರಂಭ ನಡೆಸುವುದು ನಿಷೇಧಿಸಲಾಗಿರುತ್ತದೆ.
ಯಾವ-ಯಾವ ನಿಯಮಗಳು; 48 ಗಂಟೆಗಳ ಅವಧಿಯಲ್ಲಿ 10 ಜನರಿಗಿಂತ ಹೆಚ್ಚು ಜನ ಸೇರುವಂತಿಲ್ಲ, ಶಸ್ತ್ರ, ಬಡಿಗೆ, ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದು ನಿಷೇಧ.
ಕಲ್ಲು, ಖಾರಪದಾರ್ಥ ಹಾಗೂ ಸ್ಫೋಟಕ ವಸ್ತುಗಳಾದ ಯಾವುದೇ ದಾಹಕ ವಸ್ತುಗಳು ಹಾಗೂ ಇನ್ನಿತರ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವಂತಿಲ್ಲ. ಕಲ್ಲುಗಳನ್ನು ಎಸೆಯುವಂತಿಲ್ಲ, ಸಾಗಣೆಯನ್ನು ಸಹ ಮಾಡುವಂತಿಲ್ಲ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವಂತಿಲ್ಲ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಬಾರದು.
ಯಾವುದೇ ವ್ಯಕ್ತಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಮಾರಕಾಸ್ತ್ರಗಳನ್ನು ಸರ್ಕಾರ ಮುಟ್ಟುಗೋಲು ಮಾಡಿಕೊಳ್ಳುತ್ತದೆ. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಆದರೆ ಈ ನಿಯಮಗಳು ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಎಚ್ಚರವಹಿಸಬೇಕು.
ಜಾಹೀರಾತು; ಮತದಾನಕ್ಕೆ ನಿಗದಿಪಡಿಸಿದ ಅವಧಿ ಕೊನೆಗೊಳ್ಳುವುದಕ್ಕಿಂತ 48 ಗಂಟೆಗಳ ಮುಂಚೆ ಯಾವುದೇ ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸಂಬಂಧಪಟ್ಟ ಅಭ್ಯರ್ಥಿ ಅಥವಾ ಪಕ್ಷವು ಮಾಧ್ಯಮ ಪ್ರಮಾಣೀಕರಣ ಸಮಿತಿಯಿಂದ ಪ್ರಮಾಣಪತ್ರ ಪಡೆದುಕೊಳ್ಳುವುದು ಕಡ್ಡಾಯ.
ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ಮತದಾನಕ್ಕೆ ನಿಗದಿಪಡಿಸಿದ ಅವಧಿ ಕೊನೆಗೊಳ್ಳುವುದಕ್ಕಿಂತ 48 ಗಂಟೆಗಳ ಮುಂಚೆ ಕೆಲವು ವಿಶೇಷ ನಿಯಮಾವಳಿಗಳು ಜಾರಿಯಲ್ಲಿರುತ್ತವೆ. 48 ಗಂಟೆಗಳ ಮುಂಚಿನ ಅವಧಿಯಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳಿಗೆ ಮಾಧ್ಯಮ ಪ್ರಮಾಣೀಕರಣ ಸಮಿತಿಯಿಂದ ಅನುಮೋದನೆಗೊಂಡಿರಬೇಕು. ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರಮಾಣೀಕರಣ ಸಮಿತಿ ಮುಂದೆ ಸಲ್ಲಿಸಲಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳು ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.












Click it and Unblock the Notifications