Karnataka Cabinet: ಮುಸ್ಲಿಮರಿಗೆ 1 ಡಿಸಿಎಂ, 5 ಸಚಿವ ಸ್ಥಾನದ ಬೇಡಿಕೆ ಇಟ್ಟ ವಕ್ಫ್ ಬೋರ್ಡ್ ಅಧ್ಯಕ್ಷ
ಶನಿವಾರ, ಮೇ 13ರಂದು ಪ್ರಕಟವಾದ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಬರೋಬ್ಬರಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯುತ್ತಿದೆ.
ಇನ್ನು 2019ರಿಂದ ಈವರೆಗೆ ಅಧಿಕಾರದಲ್ಲಿದ್ದ ಬಿಜೆಪಿ ಈ ಬಾರಿ 66 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 12 ಪ್ರಭಾವಿ ಸಚಿವರು ಸೇರಿದಂತೆ 59 ಶಾಸಕರುಗಳೇ ಸೋಲುಂಡಿದ್ದಾರೆ. ಈ ಮೂಲಕ ಬಿಜೆಪಿಯನ್ನು ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.

ಇದೀಗ 2023ರ ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪೂರ್ಣ ಬಹುಮತದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಹುದ್ದೆಗೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಸಿಎಂ ರೇಸ್ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮುಂಚೂಣಿಯಲ್ಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕರ ಸಭೆ ಭಾನುವಾರ ಸಂಜೆ ನಡೆಯಲಿದ್ದು, ಸಭೆಯಲ್ಲಿ ನೂತನ ಸಿಎಂ ಅನ್ನು ಆಯ್ಕೆ ಮಾಡಲಿದ್ದು, ಆಯ್ಕೆಯಾದ ನಾಯಕ ನೂತನ ಮುಖ್ಯಮಂತ್ರಿಯಾಗಿ ಸೋಮವಾರ, ಮೇ 15ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆಯೇ ಕಾಂಗ್ರೆಸ್ನಿಂದ ಆಯ್ಕೆಯಾದ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನ ನೀಡಬೇಕೆಂದು ಮುಸ್ಲಿಂ ಮುಖಂಡರು ಬೇಡಿಕೆ ಇಡುತ್ತಿದ್ದಾರೆ.

ಅದೇ ರೀತಿ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಶಾಅದಿ ಮಾತನಾಡಿ, ಶೇ.88ರಷ್ಟು ಮುಸ್ಲಿಂ ಸಮುದಾಯ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಹೇಳಿದರು.
"224 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅದರಲ್ಲಿ 9 ಜನರು ಗೆದ್ದಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ನ 73 ಶಾಸಕರು ಗೆಲ್ಲಲು ಮುಸ್ಲಿಮರ ಪಾತ್ರ ಪ್ರಮುಖವಾಗಿದೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಲು ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು," ಎಂದು ಶಫಿ ಶಾಅದಿ ತಿಳಿಸಿದ್ದಾರೆ.
"1999ರಲ್ಲಿ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಆಗಿದ್ದಾಗ, ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಿದ್ದರು. ಹಾಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಂದು ಡಿಸಿಎಂ ಹುದ್ದೆ ನೀಡಬೇಕು," ಎಂದರು.
ಕರ್ನಾಟಕ ಇತಿಹಾಸದಲ್ಲಿ ಮುಸ್ಲಿಂ ಮುಖ್ಯಮಂತ್ರಿ ಆಗಿಲ್ಲ, ಆದರೂ ನಾವು ಮುಖ್ಯಮಂತ್ರಿ ಸ್ಥಾನ ಕೇಳುತ್ತಿಲ್ಲ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಶಾಅದಿ ಹೇಳಿದ್ದಾರೆ.
"ಸದ್ಯ ಒಂಬತ್ತು ಜನ ಮುಸ್ಲಿಂ ಶಾಸಕರು ಆಯ್ಕೆಯಾಗಿದ್ದಾರೆ. ಯಾರು ಸೂಕ್ತ ಎಂದು ನೋಡಿಕೊಂಡು ಕಾಂಗ್ರೆಸ್ ಪಕ್ಷ ಡಿಸಿಎಂ ಹುದ್ದೆ ನೀಡಲಿ. ಒಂಬತ್ತು ಜನರಲ್ಲಿ ಯಾರಿಗಾದರೂ ನೀಡಲಿ ಎಂದು ಆಗ್ರಹಿಸುತ್ತೇವೆ," ಎಂದು ತಿಳಿಸಿದ್ದಾರೆ.
"ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಮುಸ್ಲಿಂ ಮುಖಂಡರು ಜೆಡಿಎಸ್ ಪಕ್ಷಕ್ಕೆ ಹೋಗಿದ್ದರು. ಆದರೂ ಶೇ.88ರಷ್ಟು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ. ಹಿಜಾಬ್ ಸೇರಿದಂತೆ ಇತರೆ ವಿಚಾರದಲ್ಲಿ ಮುಸ್ಲಿಮರು ಭಯಬೀತರಾಗಿದ್ದರು. ಆ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ," ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಶಾಅದಿ ಹೇಳಿದರು.












Click it and Unblock the Notifications