ವಯನಾಡು ಗುಡ್ಡ ಕುಸಿತ: ಅಗತ್ಯ ನೆರವು ನೀಡಲಿದೆ ಕರ್ನಾಟಕ
ಬೆಂಗಳೂರು, ಜುಲೈ 30: ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. 250ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ನಾಯಕರು ವಿಷಾದ ವ್ಯಕ್ತಪಡಿಸಿದ್ದಾರೆ.
ಪಕ್ಕದ ರಾಜ್ಯದಲ್ಲಿ ನಡೆದ ದುರಂತದ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 'ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈಗಾಗಲೇ ಬೆಂಗಳೂರು ನಗರದಲ್ಲಿದ್ದ ಎನ್ಡಿಆರ್ಎಫ್ ತುಕಡಿಯನ್ನು ವಯನಾಡು ಜಿಲ್ಲೆಗೆ ಕಳಿಸಲಾಗಿದೆ. ಕರ್ನಾಟಕ ಅಧಿಕಾರಿಗಳು ಕೇರಳ ರಾಜ್ಯದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿಯನ್ನು ಪಡೆಯುತ್ತಿದ್ದಾರೆ.
ಸಿದ್ದರಾಮಯ್ಯ ಟ್ವೀಟ್: ಮುಖ್ಯಮಂತ್ರಿ ಸಿದ್ದರಾಮಯ್ಯ, 'ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ' ಎಂದು ಟ್ವೀಟ್ ಮಾಡಿದ್ದಾರೆ.
ಮಂಗಳವಾರ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾರ್ಯಾಚರಣೆ ವಿಳಂಬವಾಗುತ್ತಿದೆ. ಬೆಂಗಳೂರಿನಿಂದ 30 ಸದಸ್ಯರ ಎನ್ಡಿಆರ್ಎಫ್ ತಂಡ, ಅರಕ್ಕೋಣಂನ ಎನ್ಡಿಆರ್ಎಫ್ ತಂಡ ವಯನಾಡಿನಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದೆ.
ನಾಪತ್ತೆಯಾದವರನ್ನು ಎಲ್ಲಿ ಹುಡುಕಬೇಕು, ಯಾವ ಆಸ್ಪತ್ರೆಯಲ್ಲಿ ಇದ್ದಾರೆ? ಎಂಬುದನ್ನು ತಿಳಿಯದೇ ಕುಟುಂಬದವರು ಕಂಗಾಲಾಗಿದ್ದಾರೆ. ಹಲವಾರು ಜನರು ಜಿಲ್ಲಾಸ್ಪತ್ರೆಯಲ್ಲಿ ನಿಂತು ಕಣ್ಣೀರು ಹಾಕುತ್ತಿದ್ದಾರೆ. ನೂರಾರು ಕುಟುಂಬದವರು ಸೂರು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೇಂದ್ರ ಸರ್ಕಾರ ವಯನಾಡಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನಾ ಪಡೆಯನ್ನು ನಿಯೋಜನೆ ಮಾಡಿದೆ. ಎರಡು ಸೇನಾ ಹೆಲಿಕಾಪ್ಟರ್ ಕಾರ್ಯಾಚರಣೆಗೆ ಆಗಮಿಸಿವೆ. ಆದರೆ ಭಾರೀ ಮಳೆಯ ಕಾರಣ ಹೆಲಿಕಾಪ್ಟರ್ಗಳ ಹಾರಾಟಕ್ಕೆ ಅಡ್ಡಿ ಉಂಟಾಗಿದೆ.
ರಕ್ಷಣಾ ಕಾರ್ಯಕ್ಕಾಗಿ ತಮಿಳುನಾಡು ಸರ್ಕಾರ ಈಗಾಗಲೇ ಪಡೆಗಳನ್ನು ವಯನಾಡಿಗೆ ಕಳಿಸಿದೆ. ಈ ಪಡೆಯಲ್ಲಿ ಅಗ್ನಿಶಾಮಕ, ತುರ್ತು ರಕ್ಷಣಾ ಪಡೆಯ ಸಿಬ್ಬಂದಿಗಳು ಇದ್ದಾರೆ. ಅಲ್ಲದೇ ತಕ್ಷಣದ ಪರಿಹಾರ ಕಾರ್ಯಕ್ಕೆ 5 ಕೋಟಿ ರೂ. ಬಿಡುಗಡೆ ಮಾಡಿದೆ.
ಭೂ ಕುಸಿತದ ಬಳಿಕ ರಭಸವಾಗಿ ನೀರು ಹರಿದು ಬಂದಿದೆ. ನೀರಿನಲ್ಲಿ ಕೊಚ್ಚಿ ಹೋದವರು, ಮಣ್ಣಿನಡಿಯಲ್ಲಿ ಸಿಲುಕಿರುವ ಜನರನ್ನು ಹುಡುಕಿ ತೆಗೆಯುವ ಕಾರ್ಯಾಚರಣೆ ಸವಾಲಿನ ಕೆಲಸವಾಗಿದೆ. ಮೆಪ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಶವಗಳನ್ನು ಇಡಲಾಗಿದ್ದು, ಶವಗಳನ್ನು ಗುರುತಿಸಲು ಪ್ರಯತ್ನ ನಡೆಸಲಾಗುತ್ತಿದೆ.
ಎಚ್. ಡಿ. ಕುಮಾರಸ್ವಾಮಿ ಟ್ವೀಟ್: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಘಟನೆ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ' ಎಂದು ಹೇಳಿದ್ದಾರೆ.
'ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು' ಎಂದು ಸಲಹೆ ನೀಡಿದ್ದಾರೆ.











Click it and Unblock the Notifications