8 ಶಾಸಕರ ಅನರ್ಹತೆ : ಕೆಪಿಸಿಸಿ ಅಧ್ಯಕ್ಷರು ಹೇಳುವುದೇನು?
ಬೆಂಗಳೂರು, ಜುಲೈ 09 : 'ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಸ್ಪೀಕರ್ಗೆ ದೂರು ನೀಡಲಾಗಿದೆ. ಪಕ್ಷಾಂತರ ನಿಷೇಧ ಕಾಯ್ದೆ ಎಲ್ಲರಿಗೂ ಅನ್ವಯವಾಗುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸ ಆಗಬೇಕಿದೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳವಾರ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿರುವ 10 ಶಾಸಕರ ಪೈಕಿ 8 ಜನರನ್ನು ಅನರ್ಹಗೊಳಿಸಬೇಕು ಎಂದು ಮನವಿ ಸಲ್ಲಿಸಿದರು. ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ದೂರು ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಮುಂಬೈಗೆ ಹೋಗಿ ಬಿಜೆಪಿ ಜೊತೆ ಕೈ ಜೋಡಿಸಿರುವ ಶಾಸಕರ ವಿರುದ್ಧ ದೂರು ನೀಡಲಾಗಿದೆ. ಮುಂದಿನ ಕ್ರಮವನ್ನು ಸ್ಪೀಕರ್ ಅವರು ಕೈಗೊಳ್ಳಲಿದ್ದಾರೆ' ಎಂದು ತಿಳಿಸಿದರು.

'ಪಕ್ಷಾಂತರ ನಿಷೇಧ ಕಾಯ್ದೆ ಎಲ್ಲರಿಗೂ ಅನ್ವಯವಾಗಲಿದೆ. ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸವಾಗಬೇಕಿದೆ. ಬ್ಲಾಕ್ ಮೇಲ್ ಮಾಡುವವರು, ಜನರ ತೀರ್ಪಿಗೆ ವಿರುದ್ಧವಾಗಿ ಇರುವವರಿಗೆ ಸೂಕ್ತ ಪಾಠ ಕಲಿಸಬೇಕಿದೆ' ಎಂದರು.
'ಶಾಸಕರ ಅನರ್ಹ ಪ್ರಕ್ರಿಯೆ ಆರಂಭವಾಗಿದೆ. ಇದನ್ನು ಶಾಸಕರು ಈಗಲಾದರೂ ಅರ್ಥ ಮಾಡಿಕೊಂಡು ರಾಜೀನಾಮೆ ವಾಪಸ್ ಪಡೆಯಲು ಮುಂದೆ ಬರಬೇಕು' ಎಂದು ದಿನೇಶ್ ಗುಂಡೂರಾವ್ ಅವರು ಕರೆ ನೀಡಿದರು.
ಪಕ್ಷದ ವಿರುದ್ಧವಾಗಿಲ್ಲ : ಮಾಜಿ ಸಚಿವ, ಬಿ.ಟಿ.ಎಂ.ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ಅವರನ್ನು ಅನರ್ಹಗೊಳಿಸಲು ಕಾಂಗ್ರೆಸ್ ಸ್ಪೀಕರ್ಗೆ ಮನವಿ ಮಾಡಿಲ್ಲ. ಈ ಕುರಿತು ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ರಾಮಲಿಂಗಾ ರೆಡ್ಡಿ ಅವರು ಪಕ್ಷದ ವಿರುದ್ಧವಾಗಿ ನಡೆದಿಲ್ಲ. ಅವರೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ಕುರಿತು ಚರ್ಚೆ ನಡೆಸಲಾಗಿದೆ' ಎಂದರು.
ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಪಕ್ಷದಿಂದ ಅಮಾನತುಗೊಂಡಿದ್ದಾರೆ. ಆದ್ದರಿಂದ, ಅವರ ವಿರುದ್ಧವೂ ಯಾವುದೇ ಕ್ರಮವಿಲ್ಲ. ಆನಂದ್ ಸಿಂಗ್ ರಾಜೀನಾಮೆಗೆ ಬೇರೆ ಕಾರಣವಿದೆ ಆದ್ದರಿಂದ, ಅನರ್ಹತೆಗೆ ದೂರು ಸಲ್ಲಿಸಿಲ್ಲ.












Click it and Unblock the Notifications