ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಹಿಂದೆ ಯಾರಿದ್ದಾರೆ?
ಬೆಂಗಳೂರು, ಮಾರ್ಚ್ 31: ಸ್ವಪಕ್ಷೀಯರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಮಾಡಿದೆ. ಯತ್ನಾಳ್ ಅವರ ಉಚ್ಚಾಟನೆ ಹಿಂದೆ ಬಿ ವೈ ವಿಜಯೇಂದ್ರ ಅವರಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಈ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆಯ ಹಿಂದೆ ನಾನಾಗಲಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಕೇಂದ್ರದ ವರಿಷ್ಠರು ಹಲವು ಬಾರಿ ಯತ್ನಾಳ್ ಅವರಿಗೆ ನೋಟಿಸ್ ನೀಡಿ ತಿದ್ದುವ ಪ್ರಯತ್ನ ಮಾಡಿದ್ದರು. ಉಚ್ಛಾಟನೆ ಸಂಬಂಧ ಈಗ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು.

ಇನ್ನೂ ಉಚ್ಛಾಟನೆ ಕ್ರಮ ಏನಿದ್ದರೂ ಅದು ಹೈಕಮಾಂಡ್ ತೀರ್ಮಾನವಾಗಿದೆ. ಹಾಗೆಂದ ಮಾತ್ರಕ್ಕೆ ಯತ್ನಾಳ್ ಉಚ್ಛಾಟನೆಯನ್ನು ನಾನು ಸಂಭ್ರಮಿಸುವುದಿಲ್ಲ. ರಾಜ್ಯಾಧ್ಯಕ್ಷನಾದ ಆರಂಭದಲ್ಲಿಯೇ ಅವರನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳುವ ಕುರಿತು ಚರ್ಚೆ ನಡೆಸಿದ್ದೆ. ಪಕ್ಷದ ಹಿತದೃಷ್ಟಿಯಿಂದ ಸಣ್ಣ ಪುಟ್ಟ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಂಡು ಸಂಘಟನೆಯತ್ತ ಗಮನ ಹರಿಸುವ ಬಗ್ಗೆ ಮಾತುಕತೆ ನಡೆಸಿದ್ದೆ. ಸದನ ನಡೆಯುವಾಗಲೂ ವೈಯಕ್ತಿಕವಾಗಿ ಭೋಜನಕೂಟಕ್ಕೆ ಆಹ್ವಾನ ನೀಡಿದ್ದೆ. ವ್ಯತ್ಯಾಸಗಳಿದ್ದರೆ ಸರಿಪಡಿಸಿಕೊಳ್ಳೋಣ ಎಂದಿದ್ದೆ. ವಯಸ್ಸಲ್ಲಿ ಮತ್ತು ಅನುಭವದಲ್ಲಿ ಯತ್ನಾಳ್ ಅವರಿಗಿಂತ ನಾನು ಚಿಕ್ಕವನು ಎಂದು ಬಿ ವೈ ವಿಜಯೇಂದ್ರ ಅವರು ಹೇಳಿದರು.
ಶೋಷಿತರು, ಪೀಡಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್ಇಪಿ, ಟಿಎಸ್ಪಿ ಅನುದಾನದಲ್ಲಿ ಕಾಂಗ್ರೆಸ್ ಸರಕಾರವು 2023-24ರಲ್ಲಿ 11,144 ಕೋಟಿಯನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 2024-25ರಲ್ಲಿ 14,282 ಕೋಟಿ ಹಣ ಬೇರೆ ಕಡೆಗೆ ವರ್ಗಾಯಿಸಿದ್ದಾರೆ. 2025-26ರಲ್ಲಿ ಇದು 13,433 ಕೋಟಿ. ಒಟ್ಟಾರೆಯಾಗಿ ಕಾಂಗ್ರೆಸ್ ಸರಕಾರವು 38,860 ಕೋಟಿಯಷ್ಟು ಹಣವನ್ನು ಬೇರೆ ಕಡೆ ವರ್ಗಾಯಿಸಿ, ದುರುಪಯೋಗ ಮಾಡಿಕೊಂಡಿದೆ ಎಂದು ವಿಜಯೇಂದ್ರ ಅವರು ಟೀಕಿಸಿದರು. ಅಲ್ಲದೆ, ಇದನ್ನು ಖಂಡಿಸಿದರು.
ಪರಿಶಿಷ್ಟ ಜಾತಿ, ಪಂಗಡಗಳನ್ನು ಮತಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ಸಿನವರು ಅವರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೊ ದರ ಏರಿಸುವ ಮೂಲಕ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದೆ ಎಂದು ಆಕ್ಷೇಪಿಸಿದರು.
ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾದ ದುಸ್ಥಿತಿಗೆ ಕಾಂಗ್ರೆಸ್ ಕಾರಣವಾಗಿದೆ. ಸೇವಿಸುವ ಗಾಳಿಯೊಂದನ್ನು ಬಿಟ್ಟರೆ ಉಳಿದೆಲ್ಲವುಗಳ ದರ ಏರಿಸಲಾಗಿದೆ. ಸಾಮಾನ್ಯ ಜನರು, ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳದ ಸರಕಾರ ಇದು. ಮತದಾರರಿಗೆ ಶಾಪಗ್ರಸ್ತ ಸರಕಾರ ಇದಾಗಿದೆ ಎಂದು ಟೀಕಿಸಿದರು. ಮುದ್ರಾಂಕ ಶುಲ್ಕದಡಿ ದತ್ತು ಸ್ವೀಕಾರ ಶುಲ್ಕ 500 ರೂ. ಇತ್ತು. ಅದನ್ನು 1 ಸಾವಿರ ರೂ. ಮಾಡಿದ್ದಾರೆ. ಅಫಿಡವಿಟ್ಗಳ ಮೊತ್ತವನ್ನು 20 ರೂ. ಇದ್ದುದು 100 ರೂಗೆ ಏರಿಸಿದ್ದಾರೆ. ಕ್ಯಾನ್ಸಲೇಶನ್ ಡೀಡ್ 100 ರೂ. ಇದ್ದುದನ್ನು 500ಕ್ಕೆ ಏರಿಸಿದ್ದಾರೆ. ಅಡಮಾನ ಪತ್ರ ಶುಲ್ಕವನ್ನು ರೂ. 100ರಿಂದ 200ಕ್ಕೆ ಏರಿಸಿದ್ದಾರೆ ಎಂದು ದೂರಿದರು.
ವಿದ್ಯುತ್ ದರ ಪ್ರತಿ ಯೂನಿಟ್ಗೆ ಏಪ್ರಿಲ್ 1ರಿಂದ 36 ಪೈಸೆ ಹೆಚ್ಚಲಿದೆ. ಹಾಲಿನ ದರ 3 ಬಾರಿ ಏರಿಸಿದ್ದಾರೆ. ಬಡವರ ವೈದ್ಯಕೀಯ ವೆಚ್ಚ ಹೆಚ್ಚಾಗಿದೆ. ಹೊರ ರೋಗಿ ನೋಂದಣಿ ಶುಲ್ಕ 10 ರೂ ಇದ್ದುದನ್ನು ರೂ. 20ಕ್ಕೆ ಏರಿಸಿದ್ದಾರೆ. ಮರಣೋತ್ತರ ಪ್ರಮಾಣಪತ್ರವನ್ನು 250 ಇದ್ದುದನ್ನು 300 ರೂ. ಹೆಚ್ಚಿಸಿದ್ದಾರೆ. ವೈದ್ಯಕೀಯ ಪ್ರಮಾಣಪತ್ರವನ್ನು 250 ಇದ್ದುದನ್ನು 300 ರೂ. ಹೆಚ್ಚಿಸಿದ್ದಾರೆ. ದಾಖಲಾತಿ ಶುಲ್ಕ, ಲ್ಯಾಬ್ ಪರೀಕ್ಷಾ ಶುಲ್ಕ ಹೆಚ್ಚಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಸರಕಾರಿ ಆಸ್ಪತ್ರೆಗೆ ಹೋಗುವ ಬಡವರು ಹೆಚ್ಚುವರಿ ಶುಲ್ಕ ಕೊಡಬೇಕಾಗಿದೆ ಎಂದು ಆಕ್ಷೇಪಿಸಿದರು.
ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದು ನನ್ನ ಕರ್ತವ್ಯ ಎಂದು ಭಾವಿಸಿ ಸಾಕಷ್ಟು ಬಾರಿ ಪ್ರಯತ್ನ ಮಾಡಿದೆ ಎಂದು ತಿಳಿಸಿದರು. ನಾನು ಹಿಂದೊಂದು, ಮುಂದೊಂದು ಮಾತನಾಡುವ ವ್ಯಕ್ತಿಯಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯವಾಗಿ ಹಲವರನ್ನು ಬೆಳೆಸಿದ್ದಾರೆ. ಅವರು ಎಂದಿಗೂ ಯಾರನ್ನೂ ತುಳಿಯುವ ಕೆಲಸ ಮಾಡಿಲ್ಲ. ಎಲ್ಲವನ್ನೂ ನಾನು ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡಿದ್ದೆ. ಸಂಘಟನೆಯ ವಿಷಯದಲ್ಲಿ ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ವರಿಷ್ಠರು ಎಲ್ಲವನ್ನು ಪರಿಶೀಲಿಸಿ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.
ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ. ರಾಜ್ಯ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ.
ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಬಿಜೆಪಿಯ 8 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಈ ಧರಣಿ ತುದಿ ಮುಟ್ಟಿಸುವ ಕುರಿತು ಏ.2ರಂದು ನಿರ್ಧರಿಸಲಿದ್ದೇವೆ ಎಂದು ಹೇಳಿದರು. ಏ.5ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕುಗಳಲ್ಲಿ, ಮಂಡಲದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ ಎಂದರು. ಏಪ್ರಿಲ್ 7ರಂದು ಮಧ್ಯಾಹ್ನ 3ಕ್ಕೆ ಮೈಸೂರಿನಿಂದ ಜನಜಾಗೃತಿ ಹೋರಾಟ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹೋರಾಟಕ್ಕೆ ಚಾಲನೆ ಕೊಡಲಿದ್ದಾರೆ. ಕೇಂದ್ರದ ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಅವರ ಜೊತೆ ಚರ್ಚಿಸಿದ್ದೇನೆ. ಜನಾಕ್ರೋಶ ಯಾತ್ರೆ ಇದಾಗಿದೆ. 7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, 8ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನದಲ್ಲಿ ಹೋರಾಟ ಇದೆ. 9ರಂದು ಕೊಡಗು- ಮಂಗಳೂರಿನಲ್ಲಿ ಹೋರಾಟ, 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಇದೆ ಎಂದರು.
ವೃತ್ತಪರ ತೆರಿಗೆ 1200 ರೂ. ಇದ್ದುದನ್ನು 2500 ರೂ.ಗೆ ಏರಿಸಿದ್ದಾರೆ. ಮುದ್ರಾಂಕ ಶುಲ್ಕ ಜಾಸ್ತಿ ಮಾಡಿದ್ದಾರೆ. ಬಸ್ ಪ್ರಯಾಣದರ ಹೆಚ್ಚಿಸಿದ್ದಾರೆ. ರೈತರಿಗೆ ತೊಂದರೆ ಕೊಡಲೆಂದೇ ಬಿತ್ತನೆ ಬೀಜದ ದರ ಹೆಚ್ಚಿಸಿದ್ದಾರೆ. ನೀರಿನ ಸುಂಕ ಜಾಸ್ತಿ ಮಾಡಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಕೆಯಾಗಿದೆ. ಮತದಾರರಿಗೆ ಬೆಲೆ ಏರಿಕೆಯ ಮೂಲಕ ಶಾಪವನ್ನು ಈ ಸರಕಾರ ನೀಡಿದೆ ಎಂದು ಆರೋಪಿಸಿದರು.












Click it and Unblock the Notifications