Cauvery Water Dispute: ಸಂಕಷ್ಟ ಕಾಲದಲ್ಲಿ ಕಾವೇರಿ ನೀರು ಹರಿಸುವ ಹೊಸ ಸೂತ್ರದ ಕುರಿತು ಡಿಸಿಎಂ ಡಿಕೆಶಿ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 29: ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ನೀರು ಹರಿಸುವ ಹೊಸ ಸೂತ್ರ ರೂಪಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಆಗ್ರಹ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಈ ಕುರಿತು ಶುಕ್ರವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಸಭೆಯ ನಂತರ ಸಂಕಷ್ಟ ಸೂತ್ರದ ರೂಪುರೇಷೆ ಹೇಗಿರಬೇಕು ಎಂದು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ (ಶುಕ್ರವಾರ) ಸಭೆ ಕರೆಯಲಾಗಿದೆ. ರಾಜ್ಯದ ಹಿತವನ್ನು ಸುಪ್ರೀಂಕೋರ್ಟಿನಲ್ಲಿ ಕಾಪಾಡಿದಂತಹ ಹಿರಿಯ ನ್ಯಾಯವಾದಿಗಳು, ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನೀರಾವರಿ ತಜ್ಞರ ಜೊತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಚರ್ಚೆ ನಡೆಸುತ್ತೇವೆ ಎಂದರು.
ಇಂದು ನಡೆಯುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗೆ ಆನ್ಲೈನ್ ಮೂಲಕ ಭಾಗವಹಿಸದೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೀರಿನ ಬಿಡುಗಡೆ ಬಗ್ಗೆ ವಿರೋಧ ಪಕ್ಷದವರು, ಬೇರೆಯವರು ಏನೇನೋ ಹೇಳುತ್ತಾರೆ. ನನಗೆ ಅವರಿಗಿಂತ, ಬೇರೆಯವರಿಗಿಂತ ಹೆಚ್ಚು ಜವಾಬ್ದಾರಿ ಇದೆ. ಬಾಯಿಗೆ ಬಂದಂತೆ ಮಾತನಾಡುವ ಜಾಯಮಾನ ನನ್ನದಲ್ಲ, ನಾನು ಸಹ ರೈತ ಎಂದು ತಿರುಗೇಟು ನೀಡಿದರು.
ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಬಂದ್ ನಿರ್ವಹಣೆ ಮಾಡಿದ್ದೇವೆ. ಕರ್ನಾಟಕ ಬಂದ್ ಮಾಡುವುದು ಅವಶ್ಯಕತೆ ಇರಲಿಲ್ಲ. ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ ಎಂದು ಹೇಳಿದ್ದೆವು, ಅದರಂತೆ ಬಂದ್ ವೇಳೆಯಲ್ಲಿ ಸಾವರ್ಜನಿಕರಿಗೆ ತೊಂದರೆಯಾಗದಂತೆ ರಕ್ಷಣೆ ಕೊಟ್ಟಿದ್ದೇವೆ. ಸಾರಿಗೆ, ದಿನನಿತ್ಯ ಬಳಕೆಯ ವಸ್ತುಗಳ ಲಭ್ಯತೆಗೆ ತೊಂದರೆ ಆಗದಂತೆ ನೋಡಿಕೊಂಡಿದ್ದೇವೆ ಎಂದು ತಿಳಿಸಿದರು.
ಕಾವೇರಿ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ: ತೇಜಸ್ವಿ ಸೂರ್ಯ
ಇವತ್ತು ರಾಜ್ಯದಲ್ಲಿ ಹಲವಾರು ರೈತಪರ ಸಂಘಟನೆಗಳು ಕುಡಿಯುವ ನೀರಿಗೆ ಸಂಕಷ್ಟ ಇದ್ದರೂ ಮಂಡ್ಯ ಮತ್ತು ಹಲವಾರು ಭಾಗದ ರೈತರಿಗೆ ಬೆಳೆಗಳಿಗೆ ನೀರಿನ ಕೊರತೆ ಇದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಬಂದ್ ಕರೆಕೊಟ್ಟಿದ್ದಾರೆ. ಈ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.
ಕಾವೇರಿ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಸ್ತುಸ್ಥಿತಿ ಮಂಡನೆಯಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಇದು ಖಂಡನೀಯ ಎಂದು ತಿಳಿಸಿದರು. ಇದರಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ತನ್ನ ವೈಫಲ್ಯ ಮರೆಮಾಚಿ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತಿದೆ. ನೆಲ, ಜಲದಂಥ ವಿಚಾರದಲ್ಲಿ ಎಲ್ಲ ಪಕ್ಷಗಳೂ ಒಂದಾಗಿ ಪ್ರಯತ್ನ ಮಾಡಬೇಕಿದೆ. ಶೇ 60ರಷ್ಟು ಮಳೆ ಕೊರತೆ ಆಗಿದೆ. ಕಾವೇರಿ ಕೊಳ್ಳ ಪ್ರದೇಶದಲ್ಲಿ 32 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ಪ್ರಕಟಿಸಲಾಗಿದೆ. ಜಲವರ್ಷದಲ್ಲಿ ಜುಲೈ ಮುಕ್ತಾಯದವರೆಗೆ 106 ಟಿಎಂಸಿ ಬೇಕು. ಆದರೆ, 52 ಟಿಎಂಸಿ ನೀರಿದೆ. ರಾಜ್ಯದಲ್ಲಿ ಮುಂಗಾರು ಸಂಪೂರ್ಣ ವಿಫಲವಾಗಿದೆ. ತಮಿಳುನಾಡಿಗೆ ಮುಂಗಾರು, ಹಿಂಗಾರಿನಲ್ಲೂ ಮಳೆ ಬೀಳುತ್ತದೆ ಎಂದು ತಿಳಿಸಿದರು.












Click it and Unblock the Notifications