VIDEO: ಯಡಿಯೂರಪ್ಪಗೆ ಬೆಂಬಲ: ವಿರೋಧ ವ್ಯಕ್ತಪಡಿಸಿದ ಕಂದಾಯ ಸಚಿವ ಆರ್. ಅಶೋಕ್!
ಬೆಂಗಳೂರು, ಜು. 20: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಲಾಗುತ್ತಿದೆ ಎಂಬ ಚರ್ಚೆ ದೆಹಲಿ ಮಟ್ಟದಲ್ಲಿ ಖಚಿತಗೊಳ್ಳುತ್ತಿದೆ. ಜುಲೈ 26ಕ್ಕೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬುತ್ತಿದೆ. ಇದೇ ಸಂದರ್ಭದಲ್ಲಿ ಸಿಎಂ ಬದಲಾಯಿಸಲಾಗುತ್ತಿದೆ ಎಂಬ ಚರ್ಚೆ ಜೋರಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಆಗ್ರಹಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಕಂದಾಯ ಸಚಿವ ಆರ್. ಅಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ವಿಚಾರಗಳ ಕುರಿತು ಅವರು ವಿಧಾನಸೌಧದಲ್ಲಿ ಮಾತನಾಡಿದ್ದಾರೆ. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಅಡಿಯೋ ಬಗ್ಗೆ, "ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಡಿಯೋ ಎಂಬುದು ಸುಳ್ಳು. ಅದು ಕಾಂಗ್ರೆಸ್ ಪಕ್ಷದವರು ಮಾಡಿರುವ ರಾಜಕೀಯ ಕುತಂತ್ರ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ಹೆಸರಿಗೆ ಮಸಿ ಬಳಿಯಲು ನಡೆದಿರುವ ಕುತಂತ್ರ ಇದು" ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊಡುತ್ತಿರುವ ಬೆಂಬಲದ ಬಗ್ಗೆ ಅಶೋಕ್ ವಿರೋಧ ವ್ಯಕ್ತಪಡಿಸಿದ್ದು ಹೀಗೆ.

ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ಕೊಡುತ್ತಿರುವುದನ್ನು ಕಂದಾಯ ಸಚಿವ ಆರ್. ಅಶೋಕ್ ತೀವ್ರವಾಗಿ ವಿರೋಧಿಸಿದ್ದಾರೆ. "ಕಾಂಗ್ರೆಸ್ ಪಕ್ಷದ ನಾಯಕರು ಈ ಕುತಂತ್ರ ನಿಲ್ಲಿಸಬೇಕು. ನಮ್ಮ ಹೈ ಕಮಾಂಡ್ ನಾಯಕತ್ವ ಬದಲಾವಣೆ ಮಾಡುವ ಬಗ್ಗೆ ಏನೂ ಹೇಳಿಲ್ಲ. ಹಾಗೇನಾದರೂ ಇದ್ದರೆ ಅದು ನಮ್ಮ ಆಂತರಿಕ ವಿಚಾರ. ಕಾಂಗ್ರೆಸ್ ಪಕ್ಷದ ನಾಯಕರ ಅನುಕಂಪ ನಮಗೆ ಬೇಕಿಲ್ಲ" ಎಂದಿದ್ದಾರೆ. "ಜೊತೆಗೆ ವಲಸೆ ಸಚಿವರು ನಿನ್ನೆ ಸಭೆ ಸೇರಿದ್ದು ಕೂಡ ಸುಳ್ಳು ವಿಚಾರ. ಅವರು ಸಭೆ ಸೇರಲು ಕಾರಣವೇ ಇಲ್ಲ" ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.












Click it and Unblock the Notifications